ಪಠ್ಯಪರಿಷ್ಕರಣೆ ವಿವಾದ: ತಪ್ಪೊಪ್ಪಿಕೊಂಡ ಶಿಕ್ಷಣ ಇಲಾಖೆಯಿಂದ ತಿದ್ದೋಲೆ ಪ್ರಕಟ

Update: 2022-06-27 18:17 GMT

ಬೆಂಗಳೂರು, ಜೂ.27: ಪಠ್ಯಪುಸ್ತಕ ಪರಿಷ್ಕರಣೆಯ ಹೆಸರಿನಲ್ಲಿ ಶಿಕ್ಷಣವನ್ನು ಕೇಸರಿಕರಣ ಮಾಡಲಾಗುತ್ತಿದೆ ಎಂದು ರಾಜ್ಯದಲ್ಲಿ ವಿವಾದವು ಸೃಷ್ಟಿಯಾಗಿತ್ತು. ಅಂಬೇಡ್ಕರ್, ಬಸವಣ್ಣ, ದಾಸರು ಸೇರಿದಂತೆ ನಾಡಿನ ಗಣ್ಯರಿಗೆ ಅಪಮಾನ ಮಾಡಲಾಗಿದೆ ಎಂದು ಪಠ್ಯಪರಿಷ್ಕರಣೆಯ ವಿವಾದವು ಪ್ರತಿಭಟನೆಯ ಸ್ವರೂಪವನ್ನು ಪಡೆದುಕೊಂಡಿತು. ಇದರಿಂದ ತಪ್ಪೊಪ್ಪಿಕೊಂಡ ರಾಜ್ಯ ಸರಕಾರವು ಒಂದರಿಂದ ಹತ್ತನೆಯ ತರಗತಿಯ ಕನ್ನಡ ಭಾಷಾ ವಿಷಯಗಳು, ಪರಿಸರ ಅಧ್ಯಯನ ಹಾಗೂ 6 ರಿಂದ 10ನೇ ತರಗತಿಯ ಸಮಾಜ ವಿಜ್ಞಾನ ವಿಷಯಗಳ ಪರಿಷ್ಕೃತ ಪಠ್ಯಪುಸ್ತಕಗಳನ್ನು ಮಾರ್ಪಡಿಸಿ, 2022-23ನೇ ಸಾಲಿಗೆ ಅಳವಡಿಸಿ ತಿದ್ದೋಲೆ ಪ್ರಕಟಿಸಿ ಆದೇಶ ಹೊರಡಿಸಿದೆ.  

ಈಗಾಗಲೇ ಪರಿಷ್ಕರಿಸಿರುವ ಪಠ್ಯಪುಸ್ತಕಗಳ ವಿದ್ಯಾರ್ಥಿಗಳ ಶೈಕ್ಷಣಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಬಿಟ್ಟುಹೋದ ಅಂಶಗಳನ್ನು ತಿದ್ದುಪಡಿ ಹಾಗೂ ಸೇರ್ಪಡೆ ಮಾಡಿ ತಿದ್ದೋಲೆ ಹೊರಡಿಸಲು ಅನುಮತಿ ನೀಡಿ ಎಂದು ರಾಜ್ಯಪಾಲರ ಹೆಸರಿನಲ್ಲಿ ಶಿಕ್ಷಣ ಇಲಾಖೆಯ ಅಧೀನ ಕಾರ್ಯದರ್ಶಿಗಳು ಆದೇಶಿಸಿದ್ದಾರೆ.

ಸಾಮಾನ್ಯವಾಗಿ ಪಠ್ಯಪುಸ್ತಕಗಳ ರಚನೆ ಪರಿಷ್ಕರಣೆಗಳಾದಾಗ ಅಗತ್ಯವಾದ ತಿದ್ದುಪಡಿಗಳನ್ನು ತಿದ್ದೋಲೆ ರೂಪದಲ್ಲಿ ನೀಡುವುದು ಶಿಕ್ಷಣ ಇಲಾಖೆಯಲ್ಲಿ ಈ ಹಿಂದಿನಿಂದಲೂ ನಡೆದುಕೊಂಡು ಬಂದಿರುವ ಪ್ರಕ್ರಿಯೆಯಾಗಿದೆ ಎಂದು ಶಿಕ್ಷಣ ಇಲಾಖೆಯು ಆದೇಶದಲ್ಲಿ ತನ್ನ ತಪ್ಪೊಪ್ಪಿಕೊಂಡಿದ್ದು, ತಿದ್ದೋಲೆಯ ವಿಷಯಾಂಶಗಳನ್ನು ಹಾಗೂ ಪಠ್ಯಪುಸ್ತಕದ ಸಾಫ್ಟ್ ಕಾಪಿಯನ್ನು ಕರ್ನಾಟಕ ಪಠ್ಯಪುಸ್ತಕ ಜಾಲತಾಣದಲ್ಲಿ ಅಳವಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದೆ. 

ತಿದ್ದೋಲೆ ಪ್ರತಿಗಳನ್ನು ಪುಸ್ತಕ ಮುದ್ರಣಕ್ಕೆ ಕಾರ್ಯಾದೇಶವನ್ನು ಪಡೆದುಕೊಂಡ ಮುದ್ರಕರಿಂದ ಸಂಘದ ಅನುದಾನದಲ್ಲಿ ಎಲ್ಲ ಶಾಲೆಗಳಿಗೆ ತಲಾ ಒಂದು ಪ್ರತಿಯನ್ನು ವಿತರಿಸಲಾಗುವುದು ಎಂದು ತಿಳಿಸಿದೆ. 

9ನೇ ತರಗತಿ ಸಮಾಜ ವಿಜ್ಞಾನ ಭಾಗ-01ರ ನಮ್ಮ ಸಂವಿಧಾನ ಎಂಬ ಪಾಠದಲ್ಲಿ ಸಂವಿಧಾನದ ಕರಡು ರಚನೆ ಸಮಿತಿ ಬಗ್ಗೆ ಉಲ್ಲೇಖ ಇರುತ್ತದೆ. ಅದರಲ್ಲಿ ಪರಿಷ್ಕೃತ  ಪಠ್ಯದಲ್ಲಿ ಇವರು ಸಂವಿಧಾನ ರಚನೆಗೆ ನೀಡಿದ ಕೊಡುಗೆಯನ್ನು ಆಧರಿಸಿ ಅವರನ್ನು "ಸಂವಿಧಾನದ ಶಿಲ್ಪಿ" ಎಂದು ಕರೆಯಲಾಗಿದೆ ಎಂಬ ವಾಕ್ಯವು ಇಲ್ಲವಾಗಿದ್ದು, "ಸಂವಿಧಾನದ ಶಿಲ್ಪಿ" ಎಂಬುದರ ಪುನರ್ ಸೇರ್ಪಡೆ ಮಾಡಿ ಆದೇಶಿಸಿದೆ.

7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಪಾಠವನ್ನು ಪೂರ್ಣವಾಗಿ ಕೈಬಿಡಲಾಗಿದೆ. 9ನೇ ತರಗತಿಯ ಸಮಾಜ ವಿಜ್ಞಾನ ವಿಷಯದ ಭಾಗ-2ರಲ್ಲಿ ಭಕ್ತಿಪಂಥ ಎಂಬ ಅಧ್ಯಾಯದಲ್ಲಿ ಪುರಂದರದಾಸರು, ಕನಕದಾಸರ ಕುರಿತು ವಿಷಯಗಳು ಸಂಕ್ಷಿಪ್ತಗೊಳಿಸಲಾಗಿದೆ. ಆದ್ದರಿಂದ, 2021-22ನೇ ಸಾಲಿನ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-01ರ ಭಕ್ತಿ ಪಂಥ ಹಾಗೂ ಸೂಫಿ ಸಂತರು ಸಂಪೂರ್ಣ ಪಾಠ ಸೇರ್ಪಡೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದೆ.

7ನೇ ತರಗತಿಯ ಪ್ರಥಮ ಭಾಷೆ ಕನ್ನಡ ಪಠ್ಯಪುಸ್ತಕದ ಪುಟ ಸಂಖ್ಯೆ 147ರಲ್ಲಿ 'ಗೊಂಬೆ ಕಲಿಸುವ ನೀತಿ' ಪದ್ಯದ ಕೃತಿಕಾರರ ಹೆಸರು ‘ಡಾ. ಆರ್.ಎನ್.ಜಯಗೋಪಾಲ್' ಎಂದು ತಪ್ಪಾಗಿ ಮುದ್ರಣಗೊಂಡಿದ್ದು, ಮೂಲ ಕೃತಿಕಾರರಾದ ‘ಚಿ.ಉದಯಶಂಕರ್’ ಅವರ ಕವಿ ಪರಿಚಯವನ್ನು ಸೇರಿಸಲಾಗಿದೆ.

6ನೇ ತರಗತಿ ಸಮಾಜ ವಿಜ್ಞಾನ ಭಾಗ-1ರ ಪಾಠ, ‘ನಮ್ಮ ಹೆಮ್ಮೆಯ ರಾಜ್ಯ ಕರ್ನಾಟಕ' ಪಾಠದಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿ ಮಠದ ಕುರಿತಾದ ಸೇವೆಯ ಸಾಲುಗಳು ಹಾಗೂ 7ನೇ ತರಗತಿಯ ಸಮಾಜ ವಿಜ್ಞಾನ ಭಾಗ-1 ರ ಮೈಸೂರು ಮತ್ತು ಇತರ ಸಂಸ್ಥಾನಗಳು ಎಂಬ ಪಾಠದಲ್ಲಿದ್ದ ಸುರಪುರ ನಾಯಕರ ಕುರಿತಾದ ವಿವರಗಳನ್ನು ಸೇರಿಸಲಾಗಿದೆ. 

9ನೇ ತರಗತಿಯ ಸಮಾಜ ವಿಜ್ಞಾನ ಭಾಗ-1ರ ಪಠ್ಯಪುಸ್ತಕದಲ್ಲಿ ಭಾರತದ ಮತ ಪರಿವರ್ತಕರು ಎಂಬ ಅಧ್ಯಾಯದಲ್ಲಿ ಬಸವಣ್ಣನವರ ಕುರಿತಾದ ವಿಷಯಾಂಶ ಹಾಗೂ 7ನೇ ತರಗತಿ ಸಮಾಜ ವಿಜ್ಞಾನ ಭಾಗ-2 ರ ಪಠ್ಯಪುಸ್ತಕದ 'ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿವಿವಾದಗಳು' ಎಂಬ ಪಾಠದಲ್ಲಿ ರಾಷ್ಟ್ರಕವಿ ಕುವೆಂಪು ಹಾಗೂ ಹುಯಿಲಗೋಳ ನಾರಾಯಣರಾವ್ ಭಾವಚಿತ್ರಗಳನ್ನು ಸೇರಿಸಲಾಗಿದೆ.

4ನೇ ತರಗತಿಯ ಪರಿಸರ ಅಧ್ಯಯನ ‘ಪ್ರತಿಯೊಬ್ಬರು ವಿಶಿಷ್ಟ’ ಎಂಬ ಪಾಠದಲ್ಲಿ ‘ಸಾಹಿತ್ಯ ಕ್ಷೇತ್ರದಲ್ಲಿ ಹೆಸರು ಮಾಡಿದ ಕುವೆಂಪು ಅವರಿಗೆ ಚಿಕ್ಕಂದಿನಿಂದಲೂ ಕಥೆ, ಕವನ, ಪುಸ್ತಕ ಓದುವ, ಬರೆಯುವ ಅಭ್ಯಾಸ ಇತ್ತು ಎಂಬ ವಾಕ್ಯದ ನಂತರ ‘ಅನೇಕರ ಪ್ರೋತ್ಸಾಹದಿಂದ ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು’ ಎಂಬ ಸಾಲನ್ನು ಕೈಬಿಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News