ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಉಡುಪಿ ಜಿಲ್ಲಾಡಳಿತ ಸನ್ನದ್ಧವಾಗಿರಲಿ; ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್

Update: 2022-06-30 16:14 GMT
ಮನೋಜ್ ಜೈನ್
 

ಉಡುಪಿ: ಜಿಲ್ಲೆಯಲ್ಲಿ  ಕಳೆದ ೩ ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹೀಗೆ ಮುಂದುವರಿದಲ್ಲಿ  ಅತಿವೃಷ್ಠಿ ಉಂಟಾಗಿ ಸಮಸ್ಯೆಗಳಾ ಗುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಡಳಿತ ಸನ್ನದ್ದರಾಗಿರಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸೂಚನೆ ನೀಡಿದ್ದಾರೆ. 

ಗುರುವಾರ ವರ್ಚುವಲ್ ಮೀಟಿಂಗ್  ಮೂಲಕ ನಡೆದ ಜಿಲ್ಲೆಯ ಮಳೆ ಪರಿಸ್ಥಿತಿ ಹಾಗೂ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು   ಮಾತನಾಡುತಿದ್ದರು.

ನಿರಂತರ ಮಳೆಯಿಂದಾಗಿ ನದಿ ಹಳ್ಳ ಕೊಳ್ಳಗಳು ತುಂಬಿ ಹರಿದು ತಗ್ಗು ಪ್ರದೇಶಗಳಿಗೆ ನುಗ್ಗುವ ಸಾಧ್ಯತೆಗಳು ಇರುತ್ತವೆ. ಇಂತಹ ಪ್ರದೇಶಗಳನ್ನು ಈಗಾಗಲೇ ಗುರ್ತಿಸಿದ್ದು, ಅಲ್ಲಿ ವಾಸಿಸುವ ಜನರಿಗೆ ರಕ್ಷಣೆ ಮತ್ತು ಸ್ಥಳಾಂತರಕ್ಕೆ ಕಾಳಜಿ ಕೇಂದ್ರಗಳನ್ನು ಗುರುತಿಸಿ ಸಿದ್ದವಾಗಿಟ್ಟುಕೊಳ್ಳಬೇಕೆಂದು ಅವರು ಸೂಚನೆ ನೀಡಿದರು.

ಗಾಳಿ-ಮಳೆಯಿಂದಾಗಿ ರಸ್ತೆಗಳಲ್ಲಿ ಮರಗಳು ಬಿದ್ದು ಸಂಚಾರ ಅಸ್ತವ್ಯಸ್ತ ವಾಗದಂತೆ ಕ್ರಮ ವಹಿಸಲು ಅಗತ್ಯ ಪರಿಕರಗಳೊಂದಿಗೆ ಅರಣ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಿದ್ದರಿರಬೇಕು. ತಗ್ಗುಪ್ರದೇಶದಲ್ಲಿರುವ ಸೇತುವೆಗಳು ಮುಳುಗಡೆಗೊಂಡ ಸಂದರ್ಭದಲ್ಲಿ ಸಂಚಾರ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಕಾರ್ಯವನ್ನು ಪೊಲೀಸ್ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ವಹಿಸಬೇಕು ಎಂದರು.

ಮಳೆಯಿಂದಾಗಿ ಮನೆ, ಜಾನುವಾರು, ಆಸ್ತಿ ಸೇರಿದಂತೆ ಇತರ ಹಾನಿಗಳಿಗೆ ನಷ್ಟ ಪರಿಹಾರವನ್ನು ಎನ್‌ಡಿಆರ್‌ಎಫ್ ನಿಯಮಾವಳಿಯಂತೆ ಶೀಘ್ರದಲ್ಲಿಯೇ ತಲುಪಿಸಬೇಕು.ಕಿಂಡಿ ಅಣೆಕಟ್ಟುಗಳ ಹಲಗೆಗಳನ್ನು ಪೂರ್ಣ ಪ್ರಮಾಣದಲ್ಲಿ ತೆರವು ಗೊಳಿಸಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸಬೇಕು. ಜಿಲ್ಲಾ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂ ೨೪ ಗಂಟೆಯೂ ಕಾರ್ ನಿರ್ವಹಿಸುವುದರೊಂದಿಗೆ ತುರ್ತು ಕರೆಗಳು ಬಂದಾಗ ತಕ್ಷಣ ಸ್ಪಂದಿಸಬೇಕು ಎಂದರು.

ಜಿಲ್ಲೆಯಲ್ಲಿ ಉತ್ತಮ ಮಳೆ ಆಗುತ್ತಿರುವ ಹಿನ್ನಲೆಯಲ್ಲಿ ಕೃಷಿ ಚಟುವಟಿಕೆಗಳು ಭರದಿಂದ ಸಾಗುತ್ತಿದ್ದು, ರೈತರಿಗೆ ಅಗತ್ಯವಿರುವ ಭಿತ್ತನೆ ಬೀಜ, ರಸಗೊಬ್ಬರಗಳ ವಿತರಣೆಯನ್ನು ಸಮರ್ಪಕವಾಗಿ ಮಾಡಬೇಕೆಂದು ಸೂಚಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದ ಅಪಾಯಕ್ಕೆ ಒಳಗಾಗುವ  ಸಂಭವವಿರುವ ಅಂಗನವಾಡಿ,  ಶಾಲಾ ಕಾಲೇಜು ಕಟ್ಟಡಗಳಲ್ಲಿ ಅಗತ್ಯ ಮುನ್ನಚ್ಚರಿಕೆ ಕ್ರಮಗಳನ್ನು ಸಂಬಂಧ ಪಟ್ಟ ಇಲಾಖೆಗಳು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಪ್ರಸಕ್ತ ಮಳೆಗಾಲ ಮುಗಿಯುವವರೆಗೂ ತಾಲೂಕು ಹಾಗೂ ಗ್ರಾಮ ಮಟ್ಟದ ಪ್ರಾಕೃತಿಕ ವಿಕೋಪ ನಿರ್ವಹಣಾ ಸಮಿತಿಗಳು ಪ್ರತೀ ೧೫ ದಿನಗಳಿಗೊಮ್ಮ ಸಭೆಯನ್ನು ನಡೆಸಬೇಕು ಎಂದು ಸೂಚನೆ ನೀಡಿದ ಅವರು ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ವಿಕೋಪ ನಿರ್ವಹಣೆ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಜಿಪಂ ಉಪ ಕಾರ್ಯದರ್ಶಿ ಕಿರಣ್ ಪೆಡ್ನೇಕರ್ ಹಾಗೂ ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News