ವಿಧಾನಸಭೆಗೆ ಡಿಸೆಂಬರ್ ನಲ್ಲೇ ಚುನಾವಣೆ ನಡೆಯುವ ಸಾಧ್ಯತೆ: ಎಚ್.ಡಿ.ಕುಮಾರಸ್ವಾಮಿ

Update: 2022-07-01 14:32 GMT

ಬೆಂಗಳೂರು, ಜು.1: ರಾಜ್ಯ ವಿಧಾನಸಭೆಗೆ ಡಿಸೆಂಬರ್ ತಿಂಗಳಲ್ಲೆ ಚುನಾವಣೆ ಎದುರಾಗುವ ಸಾಧ್ಯತೆಗಳಿವೆ. ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಈಗಿನಿಂದಲೇ ಇದಕ್ಕಾಗಿ ಸಜ್ಜಾಗಬೇಕೆಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕರೆ ನೀಡಿದರು.

ಶುಕ್ರವಾರ ನಗರದಲ್ಲಿರುವ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜನತಾಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಕನಿಷ್ಠ ಹದಿನೈದು ಕ್ಷೇತ್ರಗಳನ್ನು ಗೆಲ್ಲುವ ವಾತಾವರಣ ಜೆಡಿಎಸ್‍ಗೆ ಇದೆ. ವಿಧಾನಸಭೆ ಮತ್ತು ಬಿಬಿಎಂಪಿ ಚುನಾವಣೆಗೆ ಕಾರ್ಯಕರ್ತರು ಸಂಘಟಿತರಾಗಬೇಕು. ಬೆಂಗಳೂರು ಹಂತ ಹಂತವಾಗಿ ಬೆಳೆಯುತ್ತಿದೆ. ಬೆಂಗಳೂರಿನಲ್ಲಿ ನಮ್ಮ ಪಕ್ಷ ಶಕ್ತಿಯುತವಾಗಿಲ್ಲ ಎಂಬ ಭಾವನೆಯನ್ನ ತೆಗೆದುಹಾಕಬೇಕು ಎಂದು ಹೇಳಿದರು.

ರಾಜರಾಜೇಶ್ವರಿ ನಗರದಲ್ಲಿ ಪಕ್ಷದ ಮತಗಳಿವೆ. ಕಾರ್ಯಕರ್ತರು ಇದನ್ನು ಮರೆಯಬಾರದು. ನಾವೇನು ಅಧಿಕಾರ ಇದ್ದಾಗ ಅಕ್ರಮವಾಗಿ ಹಣ ಲೂಟಿ ಮಾಡಿಲ್ಲ. ನಮ್ಮಲ್ಲಿ ಮೂರು ಜನ ಶಾಸಕರು ಪಕ್ಷದಲ್ಲಿ ಇದ್ದರು. ಅವರೂ ಬೇರೆ ಕಡೆ ಹೋಗಿದ್ದಾರೆ. ಚಾಮರಾಜಪೇಟೆಯಲ್ಲಿ ನಮ್ಮ ನಾಯಕರು ಹೋರಾಟ ಮಾಡಿದರು. ಅದರಿಂದಾಗಿ ಚಾಮರಾಜಪೇಟೆ, ಪುಲಿಕೇಶೀನಗರ, ಮಹಾಲಕ್ಷ್ಮಿ ಲೇಔಟ್‍ನಲ್ಲಿ ಗೆದ್ದೆವು. ಪಕ್ಷ ಉಳಿದರೆ ನಾವೆಲ್ಲಾ ಉಳಿಯುತ್ತೇವೆ ಎಂದು ಕುಮಾರಸ್ವಾಮಿ ಹೇಳಿದರು.

ಲೂಟಿ ಸರಕಾರ: ಭಗವಂತನ ಆಶೀರ್ವಾದದಿಂದ ಎರಡು ಬಾರಿ ಮುಖ್ಯಮಂತ್ರಿಯಾಗಿ ಇತಿಹಾಸದ ಪುಟ ಸೇರಿದ್ದೇನೆ. ಈಗಿನ ಸರಕಾರ ಲೂಟಿ ಹೊಡೆಯುತ್ತಿದೆ. ಇದನ್ನು ಸಂಪೂರ್ಣವಾಗಿ ಬಂದ್ ಮಾಡಬೇಕು. ನನಗೆ ಒಂದು ಅವಕಾಶ ಕೊಡಲಿ. ನಮಗೆ ಇಪ್ಪತ್ತು ವರ್ಷ ಬೇಡ ಐದು ವರ್ಷದ ಅವಕಾಶ ಕೊಟ್ಟರೆ ಸಾಕು ಎಂದು ಕುಮಾರಸ್ವಾಮಿ ಮನವಿ ಮಾಡಿದರು.

ನಮ್ಮ ಕಾರ್ಯಕರ್ತರು ಪ್ರತಿ ಮನೆ ಮನೆಗೂ ಹೋಗಿ, ಅವರ ಆದ್ಯತೆ ಏನು ಎಂಬುದನ್ನು ಅರಿಯುವ ಕೆಲಸ ಮಾಡಿ. ಜನರಿಂದ ಎಲ್ಲ ಮಾಹಿತಿಯನ್ನು ಸಂಗ್ರಹಿಸೋಣ. ಮುಂದೆ ನಮ್ಮ ಸರಕಾರ ಬಂದ ನಂತರ ಜನರ ಸಮಸ್ಯೆಗೆ ಪರಿಹಾರ ಕಲ್ಪಿಸಲು ಅನುಕೂಲವಾಗಲಿದೆ. ಜನತಾ ಮಿತ್ರ ಕಾರ್ಯಕ್ರಮ ಹದಿನೈದು ದಿನಗಳ ಕಾಲ ನಡೆಯುತ್ತದೆ. ಬೆಂಗಳೂರು ನಗರದ ಕಾರ್ಯಕರ್ತರ ಸಮಾವೇಶವನ್ನು ಜು.17ರಂದು ನಡೆಸುತ್ತೇವೆ. ಸುಮಾರು ಒಂದೂವರೆ ಲಕ್ಷ ಜನ ಇದರಲ್ಲಿ ಭಾಗಿಯಾಗಬೇಕು ಎಂದು ಅವರು ಹೇಳಿದರು.

ಎರಡೂ ರಾಷ್ಟ್ರೀಯ ಪಕ್ಷಗಳು ಬೆಂಗಳೂರು ಜನರನ್ನು ಹಾದಿ ತಪ್ಪಿಸಿವೆ. ಬೆಂಗಳೂರು ನಗರಕ್ಕೆ ಏನು ಕೊಡುಗೆ ಕೊಟ್ಟಿದ್ದಾರೆ. ಬ್ಯಾಟರಾಯನಪುರ, ಯಲಹಂಕದ ಬಡಾವಣೆಗಳನ್ನು ನೋಡಿದ್ದೇನೆ. ಪ್ರಾಣಿಗಳು ಬದುಕಲು ಆಗದಂತಹ ಪರಿಸ್ಥಿತಿ ಇದೆ. ಬೆಂಗಳೂರು ನಗರವನ್ನು ಸಿಂಗಾಪುರ ಮಾಡುತ್ತೇವೆ ಅಂತಾ ಪ್ರಚಾರ ಪಡೆದಿದ್ದರು. ಸಿಂಗಾಪುರ ಮಾಡಲು ಹೊರಟಿದ್ದ ಸರಕಾರ ಬೆಂಗಳೂರಿನ ಕೆರೆಕಟ್ಟೆಗಳನ್ನು ನಾಶ ಮಾಡಿದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಆಗಸ್ಟ್ ನಲ್ಲಿ ಪಂಚರತ್ನ ರಥಯಾತ್ರೆ: ಆಗಸ್ಟ್‍ನಲ್ಲಿ ಪಂಚರತ್ನ ರಥಯಾತ್ರೆ ಕಾರ್ಯಕ್ರಮ ಆರಂಭಿಸುತ್ತೇವೆ. ಹಳ್ಳಿ ಹಳ್ಳಿಗೆ ಹೋಗುತ್ತೇನೆ. ಮೂರು ತಿಂಗಳು ಬೆಂಗಳೂರಿಗೆ ಬರುವುದಿಲ್ಲ. ಎಲ್ಲೆಡೆ ಸುತ್ತುತ್ತೇನೆ. ಹದಿನೈದು ದಿನ ಬೆಂಗಳೂರಿಗೆ ಮೀಸಲು ಇಟ್ಟಿದ್ದೇನೆ. ಎಲ್ಲೆಲ್ಲಿ ಜನತಾ ಮಿತ್ರ ಕಾರ್ಯಕ್ರಮ ಮಾಡುತ್ತಾರೋ ಅಲ್ಲಿಗೆ ಹೋಗಿ ಮಾತನಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು. 

ಇಲ್ಲಿ ಸಂಬಳ ಪಡೆಯುವ ಐಎಎಸ್ ಅಧಿಕಾರಿಗಳು ಬಂಡವಾಳ ಹೂಡಿಕೆದಾರರಿಗೆ ಏನೇನೋ ಹೇಳ್ತಿದ್ದಾರೆ. ಕರ್ನಾಟಕದಲ್ಲಿ ಯಾಕೆ ಬಂಡವಾಳ ಹೂಡುತ್ತೀರಾ. ಗುಜರಾತ್‍ಗೆ ಹೋಗಿ ಅಂತಿದ್ದಾರೆ. ಚುನಾವಣೆ ಬರಲಿ ಆಗ ಎಲ್ಲವನ್ನೂ ಮಾತನಾಡುತ್ತೇನೆ ಎಂದು ಬಿಜೆಪಿ ಸರಕಾರದ ವಿರುದ್ಧ ಅವರು ಗುಡುಗಿದರು.

ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ಶಾಸಕ ಆರ್.ಮಂಜುನಾಥ್, ಕೇರಳ ರಾಜ್ಯದ ಜೆಡಿಎಸ್ ಪಕ್ಷದ ಸಚಿವ ಕೃಷ್ಣನ್ ಕುಟ್ಟಿ, ಕೇರಳ ಜೆಡಿಎಸ್ ಶಾಸಕ ಥಾಮಸ್ ಟಿ.ಮ್ಯಾಥ್ಯೂ, ಜೆಡಿಎಸ್ ನಗರ ಅಧ್ಯಕ್ಷ ಆರ್.ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಎಚ್.ಎಂ.ರಮೇಶ್ ಗೌಡ, ಡಾ.ಸೈಯ್ಯದ್ ಮೋಹಿದ್ ಅಲ್ತಾಫ್ ಸೇರಿದಂತೆ ಪಕ್ಷದ ಹಲವು ಮುಖಂಡರು ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News