ವಚನ ಸಾಹಿತ್ಯ ಸಂರಕ್ಷಣೆಯಲ್ಲಿ ಫ.ಗು.ಹಳಕಟ್ಟಿ ತ್ಯಾಗ ಅವಿಸ್ಮರಣೀಯ: ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್

Update: 2022-07-02 14:58 GMT

ಉಡುಪಿ: ವಿಶ್ವ ಸಾಹಿತ್ಯಕ್ಕೆ ಅಮೂಲ್ಯ ಕೊಡುಗೆ ನೀಡಿರುವ ಕನ್ನಡ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ, ಜನತೆಗೆ ಪರಿಚಯಿಸಿದ ಡಾ.ಫ.ಗು.ಹಳಕಟ್ಟಿ ಅವರ ತ್ಯಾಗ, ಸಾಹಿತ್ಯ ಲೋಕಕ್ಕೆ ಅವಿಸ್ಮರಣೀಯವಾದುದು ಎಂದು ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್. ಹೇಳಿದ್ದಾರೆ. 

ಶನಿವಾರ ನಗರದ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಡಾ.ಫ.ಗು.ಹಳಕಟ್ಟಿ ಅವರ ಜನ್ಮದಿನಾಚರಣೆ ಹಾಗೂ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಶಿಸಿ ಹೋಗುತ್ತಿದ್ದ ವಚನ ಸಾಹಿತ್ಯದ ಮೂಲ ಪ್ರತಿಗಳಾದ ಅಮೂಲ್ಯವಾದ ತಾಳೆಗರಿಗಳನ್ನು ರಾಜ್ಯ ಹಾಗೂ ದೇಶದ ವಿವಿಧ ಭಾಗಗಳಿಗೆ ತೆರಳಿ, ಹುಡುಕಿ, ಸಂಗ್ರಹಿಸಿ, ಅವುಗಳನ್ನು ಮುಂದಿನ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಅವುಗಳನ್ನು ಗ್ರಂಥ ರೂಪದಲ್ಲಿ ಎಲ್ಲರೂ ಓದಲು ಅನುಕೂಲವಾಗುವಂತೆ ಮುದ್ರಿಸಿದ ಫ.ಗು.ಹಳಕಟ್ಟಿಯವರ ಕಾರ್ಯದಿಂದಾಗಿ ಇಂದು ಅಮೂಲ್ಯ ವಚನ ಭಂಡಾರ ಎಲ್ಲರಿಗೂ ತಲುಪಲು ಸಾಧ್ಯ ವಾಗಿದೆ ಎಂದು ಎಡಿಸಿ ನುಡಿದರು.

ವಚನಗಳಲ್ಲಿರುವ ಮಾನವೀಯ ಮೌಲ್ಯಗಳು, ಸಂದೇಶಗಳು, ವಿಶ್ವ ಶಾಂತಿ, ವಿಶ್ವ ಪ್ರೇಮ ಮೂಡಿಸುತ್ತವೆ. ವಚನ ಸಾಹಿತ್ಯದ ಮೂಲ ಪ್ರತಿಗಳ ಸಂಗ್ರಹಕ್ಕೆ ಮನೆಮನೆಗಳಿಗೆ ತೆರಳಿ ಬೇಡಿದ ಅವರ ತ್ಯಾಗ, ಅರ್ಪಣಾ ಮನೋಭಾವ ಮತ್ತು ಅವುಗಳ ಸಂರಕ್ಷಣೆ ಹಾಗೂ ಮುದ್ರಣಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟು ಕನ್ನಡ ಸಾಹಿತ್ಯಕ್ಕೆ ಅವರು ನೀಡಿದ ಅತ್ಯಮೂಲ್ಯ ಕೊಡುಗೆ, ಅವರನ್ನು ವಚನ ಸಾಹಿತ್ಯದ ಪಿತಾಮಹ ಎಂದು ಗುರುತಿಸುವಂತೆ ಮಾಡಿದೆ. ಯುವಜನತೆ ವಚನಗಳನ್ನು ಓದಿ, ಅವುಗಳಲ್ಲಿನ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಕಿವಿಮಾತು ಹೇಳಿದರು.

ಡಾ.ಫ.ಗು.ಹಳಕಟ್ಟಿ ಅವರ ಕುರಿತು ಉಪನ್ಯಾಸ ನೀಡಿದ, ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ವೆಂಕಟೇಶ್, ವಚನ ಸಾಹಿತ್ಯದ ಮತ್ತು ವಚನಕಾರರ ಬಗ್ಗೆ ಇಂದು ಅಮೂಲಾಗ್ರವಾಗಿ ತಿಳಿಯಲು ಹಳಕಟ್ಟಿಯವರ ಪರಿಶ್ರಮದಿಂದ ಮಾತ್ರ ಸಾಧ್ಯವಾಗಿದೆ ಎಂದರು.

ಮನೆಗಳಲ್ಲಿ ಧಾರ್ಮಿಕತೆ ಹೆಸರಿನಲ್ಲಿ ಪೂಜಿಸಲ್ಪಡುತ್ತಿದ್ದ ವಚನ ಸಾಹಿತ್ಯದ ತಾಳೆಗರಿಗಳು, ಮನೆಯ ಅಟ್ಟದ ಮೇಲೆ ದೂಳು ಹಿಡಿದ್ದಿದ್ದ, ಹುಳುಗಳು ತಿಂದಿದ್ದ, ಅರ್ಧಂಬದ್ದ ನಾಶವಾಗಿದ್ದ ವಚನಗಳ ಮೂಲ ಪ್ರತಿಗಳನ್ನು ಸಂಬಂಧ ಪಟ್ಟ ಮನೆಯವರ ಮನವೊಲಿಸಿ, ಬೇಡಿ, ಕೆಲವೊಮ್ಮೆ ಹಣ ನೀಡಿ ಅವುಗಳನ್ನು ಸಂಗ್ರಹಿಸಿ, ಅವುಗಳನ್ನು ಆಧ್ಯಯನ ಮಾಡಿ, ಗ್ರಂಥ ರೂಪದಲ್ಲಿ ಪ್ರಕಟಿಸಿ ಸಾಹಿತ್ಯ ಲೋಕಕ್ಕೆ ಪರಿಚಯಿಸಿದ ಸಾಧನೆ ಮಾಡುವುದು ಮಾತ್ರವಲ್ಲದೇ ಸುಮಾರು ೨೫೦ಕ್ಕೂ ಹೆಚ್ಚು ಹೊಸ ವಚನಕಾರರು ಮತ್ತು ಅವರ ವಚನಗಳನ್ನು ಗುರುತಿಸಿದ್ದಾರೆ ಎಂದರು.

ತಾವು ಸಂಗ್ರಹಿಸಿದ ವಚನಗಳ ಮುದ್ರಣಕ್ಕೆ, ಮುದ್ರಣಾಲಯ ಆರಂಭಿಸಲು, ತಮ್ಮ ಸ್ವಂತ ಮನೆಯನ್ನೇ ಮಾರಾಟ ಮಾಡಿ, ಜೀವನದ ಕೊನೆಯವರೆಗೂ ಬಡತನ, ಅನಾರೋಗ್ಯದಲ್ಲಿಯೇ, ಅತ್ಯಂತ ಸರಳ ಜೀವನ ನಡೆಸಿದ  ಹಳಕಟ್ಟಿ ಅವರು ವಚನ ಸಾಹಿತ್ಯವನ್ನು ಸಂಗ್ರಹಿಸಿ, ವಿಶ್ಲೇಶಿಸಿ, ವರ್ಗಿಕರಿಸದೇ ಇದ್ದಲ್ಲಿ ಅಜ್ಞಾತವಾಗಿ ಉಳಿದಿದ್ದ ಕನ್ನಡದ ಅಮೂಲ್ಯ ವಚನ ಗ್ರಂಥ ಭಂಡಾರ ಇಂದು ವಿಶ್ವಕ್ಕೆ ಪರಿಚಯವಾಗುತ್ತಿರಲಿಲ್ಲ. ಇವರ ಸಾಧನೆಗೆ ಕರ್ನಾಟಕ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಿದ್ದು, ಅವರ ಜನ್ಮದಿನವನ್ನು ಸರಕಾರವು ವಚನ ಸಾಹಿತ್ಯ ಸಂರಕ್ಷಣಾ ದಿನವಾಗಿ ಆಚರಿಸಲಾಗುತ್ತಿದೆ ಎಂದರು.

ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ನಿಕೇತನ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. 

ಹೆಬ್ರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಪ್ರಸಾದ್ ರಾವ್, ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಕಲಾ ವಿಭಾಗದ ಡೀನ್ ಪ್ರೊ.ಸೋಜನ್ ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿದರು.ರವಿರಾಜ್ ಶೆಟ್ಟಿ ವಂದಿಸಿ, ತ್ರಿವೇಣಿಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News