ಬಿಡಿಎದಲ್ಲಿ ನೂರು ಕೋಟಿ ರೂಪಾಯಿ ಹಗರಣ: ನಾಗರಾಜ್ ಸೇರಿ ಬಿಡಿಎ ಅಧಿಕಾರಿಗಳ ವಿರುದ್ಧ ಎಫ್‍ಐಆರ್

Update: 2022-07-02 17:50 GMT

ಬೆಂಗಳೂರು, ಜು.2: ಬಿಡಿಎ ಸ್ವಾಧೀನಪಡಿಸಿಕೊಂಡ ಜಾಗಕ್ಕೆ ಕಾನೂನುಬಾಹಿರವಾಗಿ ಬದಲಿ ಜಾಗವನ್ನು ಪಡೆದು ಮಾರಾಟ ಮಾಡಿರುವ ಪ್ರಾಧಿಕಾರಕ್ಕೆ ಬರೋಬ್ಬರಿ 100 ಕೋಟಿ ರೂಪಾಯಿಗಳ ನಷ್ಟ ಉಂಟು ಮಾಡಿರುವ ಹಗರಣ ಬೆಳಕಿಗೆ ಬಂದಿದ್ದು, ನಾಗರಾಜ್ ಎಂಬ ವ್ಯಕ್ತಿ ಸೇರಿ ಇದಕ್ಕೆ ಕಾರಣರಾದ ಬಿಡಿಎ ಅಧಿಕಾರಿಗಳ ವಿರುದ್ಧ ಬಿಎಂಟಿಎಫ್‍ನಲ್ಲಿ ಶನಿವಾರ ಎಫ್‍ಐಆರ್ ದಾಖಲಾಗಿದೆ.

ಈಸ್ಟ್ ಆಫ್ ಎನ್‍ಜಿಇಎಫ್ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ಈರಣ್ಣ ಎಂಬುವರಿಗೆ ಸೇರಿದ ಬೆಂಗಳೂರು ಪೂರ್ವ ತಾಲೂಕಿನ ಕೆ.ಆರ್.ಪುರ ಹೋಬಳಿಯ ಬಾಣಸವಾಡಿ ಗ್ರಾಮದ ಸರ್ವೆ ಸಂಖ್ಯೆ 73 ರಲ್ಲಿದ್ದ 4 ಎಕರೆ 13 ಗುಂಟೆ ಜಮೀನನ್ನು 1986 ರಲ್ಲಿ ಸ್ವಾಧೀನಪಡಿಸಿಕೊಂಡಿದ್ದ ಬಿಡಿಎ ಇದಕ್ಕೆ ಪರಿಹಾರದ ಹಣವನ್ನು ಸಿವಿಲ್ ನ್ಯಾಯಾಲಯದಲ್ಲಿ ಠೇವಣಿ ಇಟ್ಟಿತ್ತು.

ಆದರೆ, ಈರಣ್ಣ ಬಳಿ ನಾಗರಾಜ್ ಎಂಬ ವ್ಯಕ್ತಿ ಜಿಪಿಎ ಬರೆಯಿಸಿಕೊಂಡು ಜಮೀನು ತನ್ನದು ಎಂದು ಪ್ರತಿಪಾದಿಸಿ, ನಿವೇಶನಗಳನ್ನು ನಿರ್ಮಾಣ ಮಾಡಿ ಮಾರಾಟ ಮಾಡಿದ್ದರು. ಈ ಮಧ್ಯೆ, ರೆವಿನ್ಯೂ ನಿವೇಶನದಾರರ ಮೂಲಕ ಬಿಡಿಎ ತಮ್ಮ ನಿವೇಶನಗಳನ್ನು ಸ್ವಾಧೀನಪಡಿಸಿಕೊಂಡಿದ್ದು, ಇದಕ್ಕೆ ಬದಲಿ ನಿವೇಶನಗಳನ್ನು ನೀಡುವಂತೆ ಸೂಚನೆ ನೀಡಬೇಕು ಎಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳ ವಿಚಾರಣೆ ನಡೆಸಿದ್ದ ಹೈಕೋರ್ಟ್, ಬಿಡಿಎ ನಿಯಮಾನುಸಾರ ನಿರ್ಧಾರ ಕೈಗೊಳ್ಳಬೇಕೆಂದು ಸೂಚಿಸಿ ಅರ್ಜಿ ವಿಲೇವಾರಿ ಮಾಡಿತ್ತು.

ಈ ಮಧ್ಯೆ, ನಾಗರಾಜ್ ಎಲ್ಲಾ ರೆವಿನ್ಯೂ ನಿವೇಶನದಾರರಿಂದ ಸದರಿ ನಿವೇಶನಗಳನ್ನು ತನ್ನ ಹೆಸರಿಗೆ ಬರೆಯಿಸಿಕೊಂಡು, ತನಗೆ ಬದಲಿ ನಿವೇಶನಗಳನ್ನು ಮಂಜೂರು ಮಾಡುವಂತೆ ಬಿಡಿಎಗೆ ಅರ್ಜಿ ಸಲ್ಲಿಸುತ್ತಾನೆ. ಈ ಬಗ್ಗೆ ಎರಡು ಬಾರಿ ಚರ್ಚಿಸಿದ್ದ ಬಿಡಿಎ ಪ್ರಾಧಿಕಾರ ಸಭೆಯು ನಿಯಮಾವಳಿಗಳ ಪ್ರಕಾರ ಬದಲಿ ನಿವೇಶನ ನೀಡಲು ಸಾಧ್ಯವಿಲ್ಲ ಎಂದು ನಾಗರಾಜ್ ಮನವಿಯನ್ನು ತಿರಸ್ಕರಿಸಿತ್ತು.

2012 ರಲ್ಲಿ ನಡೆದ ಪ್ರಾಧಿಕಾರದ ಸಭೆಯಲ್ಲಿ ನಾಗರಾಜ್‍ಗೆ ಅರ್ಕಾವತಿ ಬಡಾವಣೆಯ ವಿವಿಧ ಸರ್ವೇ ನಂಬರ್‍ಗಳಲ್ಲಿ ಒಟ್ಟು 4 ಎಕರೆ 13 ಗುಂಟೆ ಜಮೀನನ್ನು ಬದಲಿಯಾಗಿ ನೀಡಲು ನಿರ್ಧಾರವಾಗಿ ಅದರಂತೆ ಮಂಜೂರು ಮಾಡಲಾಗುತ್ತದೆ. ಹೀಗೆ ಮಂಜೂರು ಮಾಡಲಾದ ಕೆಲವು ಜಾಗಗಳು ಬಫರ್ ಝೋನ್ ಸೇರಿದಂತೆ ಇನ್ನಿತರೆ ಕಾರಣಗಳಿಂದ ಮನೆ ನಿರ್ಮಾಣಕ್ಕೆ ಅಸಾಧ್ಯ ಎಂಬ ನೆಪ ಹೇಳಿ ನಾಗರಾಜ್ ನನಗೆ ಬೇರೆ ಕಡೆ ಭೂಮಿ ನೀಡಬೇಕೆಂದು ಮತ್ತೊಮ್ಮೆ ಪ್ರಾಧಿಕಾರದ ಅಧಿಕಾರಿಗಳಿಗೆ ಮನವಿ ಮಾಡುತ್ತಾನೆ. 

ಈ ಮನವಿಯನ್ನು ಪುರಸ್ಕರಿಸಿದ್ದ ಬಿಡಿಎ ಅಧಿಕಾರಿಗಳು 2014 ರಲ್ಲಿ ಥಣಿಸಂದ್ರ ಸೇರಿದಂತೆ ವಿವಿಧ ಕಡೆಗಳ ಪ್ರೈಂ ಸ್ಥಳಗಳಲ್ಲಿ ಜಿಪಿಎದಾರನಾಗಿದ್ದ ನಾಗರಾಜ್ ಹೆಸರಿಗೆ ಮಂಜೂರು ಮಾಡಿ, ನೋಂದಣಿಯನ್ನೂ ಮಾಡಿಸಿ ಸ್ವಾಧೀನಪತ್ರಗಳನ್ನೂ ನೀಡಿರುತ್ತಾರೆ.
ತನಿಖೆಗೆ ಎಸ್.ಆರ್.ವಿಶ್ವನಾಥ್ ಆದೇಶ: ಭೂ ಮಂಜೂರಾತಿಯ ಇಡೀ ಕಡತವನ್ನು ಪರಿಶೀಲಿಸಿ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡುವಂತೆ ಬಿಡಿಎ ಕಾರ್ಯಪಡೆಯ ಡಿವೈಎಸ್‍ಪಿ ರವಿಕುಮಾರ್ ತಂಡಕ್ಕೆ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಆದೇಶ ನೀಡಿದ್ದರು ಅವರ ಸೂಚನೆಯಂತೆ ಇನ್‍ಸ್ಪೆಕ್ಟರ್ ಶ್ರೀನಿವಾಸ್ ಬಿಎಂಟಿಎಫ್‍ಗೆ ದೂರು ನೀಡಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News