×
Ad

ನಿವೃತ್ತ ಸರ್ಕಾರಿ ನೌಕರರಿಗೆ ಆರೋಗ್ಯ ಯೋಜನೆ ವಿಸ್ತರಣೆ: ಸಿಎಂ ಬಸವರಾಜ ಬೊಮ್ಮಾಯಿ

Update: 2022-07-08 16:59 IST

ಬೆಂಗಳೂರು, ಜು. 8: ‘ರಾಜ್ಯದಲ್ಲಿನ ನಿವೃತ್ತ ಸರಕಾರಿ ನೌಕರರಿಗೆ ಆರೋಗ್ಯ ಯೋಜನೆಯನ್ನು ವಿಸ್ತರಣೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಶುಕ್ರವಾರ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ವತಿಯಿಂದ ಆಯೋಜಿಸಿದ್ದ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಸುವರ್ಣ ಮಹೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಆರ್ಥಿಕ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗನೆ ಈ ಬಗ್ಗೆ ಘೋಷಣೆ ಮಾಡಲಾಗುವುದು' ಎಂದರು. 
‘ನಿವೃತ್ತ ನೌಕರರು ನಿರಂತರವಾಗಿ ಕ್ರಿಯಾಶೀಲರಾಗಿದ್ದು, ಉತ್ತಮ ಸಮಾಜ ನಿರ್ಮಾಣಕ್ಕೆ ಕಟಿಬದ್ಧರಾಗಿ ಕೆಲಸ ಮಾಡಬೇಕು. ಮಾನವೀಯತೆ ಇರುವ ನೌಕರರಿದ್ದರೆ ಬಡವರ ಕಷ್ಟ-ಕಾರ್ಪಣ್ಯ ದೂರ ಮಾಡಲು ಸಾಧ್ಯ. ಇದರ ತಳಹದಿಯ ಮೇಲೆ ಆಡಳಿತ ನಡೆಯಬೇಕು. ಮತ್ತೊಬ್ಬರ ಬಗ್ಗೆ ಪ್ರೀತಿ, ವಿಶ್ವಾಸ, ಅನುಕಂಪವಿದ್ದಾಗ ನ್ಯಾಯ ಕೊಡಲು ಸಾಧ್ಯ' ಎಂದು ಬಸವರಾಜ ಬೊಮ್ಮಾಯಿ ಅವರು ನುಡಿದರು.
‘ಆರು ಕೋಟಿಗಿಂತ ಹೆಚ್ಚು ಜನಸಂಖ್ಯೆ ನಮ್ಮ ಕೈಗೆ ಜವಾಬ್ದಾರಿ ಕೊಟ್ಟಿದೆ. 6 ಲಕ್ಷಕ್ಕೂ ಹೆಚ್ಚಿರುವ ಸರಕಾರಿ ನೌಕರರು ಹಾಗೂ ಆಡಳಿತ ಮಾಡುವ ಜನಪ್ರತಿನಿಧಿಗಳ ಕೈಯಲ್ಲಿ ಜವಾಬ್ದಾರಿ ಇದೆ. ನಾವೆಲ್ಲ ಜನರ ವಿಶ್ವಾಸದ ಟ್ರಸ್ಟಿಗಳು. ನಮ್ಮ ಮೇಲಿರುವ ವಿಶ್ವಾಸಕ್ಕೆ ಅರ್ಹರಾಗಿ ನಾವು ನಡೆದುಕೊಳ್ಳಬೇಕು. ಆಗ ನಾವು ಈ ಸ್ಥಾನದಲ್ಲಿ ಕುಳಿತಿದ್ದಕ್ಕೆ ಸಾರ್ಥಕವಾಗುತ್ತದೆ. ಈ ಮನೋಭಾವ ಸರಕಾರಿ ನೌಕರರಿಗೆ ಬಂದರೆ ಕರ್ನಾಟಕ ವಿಶ್ವದಲ್ಲಿಯೇ ನಂಬರ್ ಒನ್ ಆಗಲು ಸಾಧ್ಯ' ಎಂದು ಅವರು ತಿಳಿಸಿದರು. 

ಆಡಳಿತಕ್ಕೆ ಅನುಭವದ ಮಾರ್ಗದರ್ಶನ ಅಗತ್ಯ: ‘ಆಡಳಿತ ನಡೆಸಲು ನಿವೃತ್ತ ನೌಕರರ ಅಗತ್ಯವಿದೆ. ತಿಳಿದುಕೊಳ್ಳುವ ಹಸಿವಿರುವವನು ಬೆಳೆಯುತ್ತಾನೆ. ಸರಕಾರ ನಿವೃತ್ತ ನೌಕರರ ಸೇವೆಯನ್ನು ಆಗಾಗ್ಗೆ ಬಳಸಿಕೊಳ್ಳುತ್ತದೆ. ನಿವೃತ್ತರಾದೆವು ಎಂದು ನಿರಾಸೆಯಾಗಬೇಕಿಲ್ಲ. ಈ ಸರಕಾರ ನಿಮ್ಮ ಬಗ್ಗೆ ಗೌರವ ಇಟ್ಟುಕೊಂಡಿದೆ' ಎಂದರು.

‘ನಿಮ್ಮ ಬೆಲೆ ನಮಗೆ ತಿಳಿದಿದೆ. ಇಷ್ಟು ದೊಡ್ಡ ಅನುಭವವುಳ್ಳ ಮಾನವ ಶಕ್ತಿ, ರಾಜ್ಯ ಕಟ್ಟಲು ಉಪಯೋಗವಾಗುತ್ತದೆ. ನಿವೃತ್ತಿ ಎನ್ನುವುದು ಸರಕಾರದ ಕಾನೂನಿನ ಅನುಸಾರವಿದೆ. ವ್ಯಕ್ತಿಗೆ ನಿವೃತ್ತಿ ಎನ್ನುವುದು ಮನಸ್ಥಿತಿ. ಕೆಲವರು ನೌಕರಿಯಲ್ಲಿದ್ದೆ ನಿವೃತ್ತಿಯಾಗುತ್ತಾರೆ. ಮಾನಸಿಕವಾಗಿ ನಿವೃತ್ತರಾಗುತ್ತಾರೆ. ಇನ್ನು ಕೆಲವು ನಿವೃತ್ತ ನೌಕರರು ಇತರರಿಗೆ ಮಾರ್ಗದರ್ಶನ ಮಾಡುತ್ತಾರೆ. ಈಗಲೂ ಕ್ರಿಯಾಶೀಲರಾಗಿದ್ದಾರೆ. ಮಾನಸಿಕವಾಗಿ ನಿವೃತ್ತರಾಗದವರು ಜೀವನದಲ್ಲಿ ಎಂದೂ ನಿವೃತ್ತರಾಗುವುದಿಲ್ಲ' ಎಂದು ಅವರು ತಿಳಿಸಿದರು.


‘ಸಮಾಜದ ಅಭಿವೃದ್ಧಿಗೆ ನಿವೃತ್ತ ನೌಕರರು ಕೊಡುಗೆ ನೀಡಬಹುದು. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲು ಅವಕಾಶವಿದೆ. ರಾಜಕಾರಣಕ್ಕೆ ವಿದ್ಯಾರ್ಹತೆ ಹಾಗೂ ನಿವೃತ್ತಿ ಎರಡೂ ಇಲ್ಲ. ಹೀಗಾಗಿ ಕೆಲ ನೌಕರರು ನಿವೃತ್ತಿಯ ನಂತರ ರಾಜಕಾರಣಕ್ಕೆ ಸೇರುತ್ತಾರೆ. ರಾಜಕಾರಣವನ್ನು ಪ್ರಾಮಾಣಿಕತೆ, ಮಾನವೀಯತೆಯಿಂದ ಒತ್ತಡದ ನಡುವೆಯೂ ಆತ್ಮಸಾಕ್ಷಿಗೆ ತಕ್ಕಂತೆ ಮಾಡಿದರೆ ಸಂತೋಷ ಹಾಗೂ  ತೃಪ್ತಿ ಇರುತ್ತದೆ' ಎಂದು ಅವರು ಹೇಳಿದರು. 

ಜನಪರವಾಗಿ ಕೆಲಸ ಮಾಡಬೇಕು: ಆಧುನಿಕ ತಂತ್ರಜ್ಞಾನ, ತಂತ್ರಾಂಶ ಬಳಕೆ, ಇನ್ನಷ್ಟು ಪ್ರಾಮಾಣಿಕವಾಗಿ, ದಕ್ಷತೆಯಿಂದ ಕೆಲಸ ಮಾಡುವ ಅವಶ್ಯಕತೆ ಇದೆ. ಜನಪರವಾಗಿ ಕೆಲಸ ಮಾಡಬೇಕು. ಕೆಲಸ ಮಾಡಬಾರದೆಂದು ತೀರ್ಮಾನ ಮಾಡಿದರೆ ಅದಕ್ಕೆ ಕಾರಣಗಳನ್ನು ಹುಡುಕುತ್ತೇವೆ. ಬಡವರಿಗೆ, ದೀನದಲಿತರಿಗೆ, ಕಷ್ಟದಲ್ಲಿರುವವರಿಗೆ ಕೆಲಸ ಮಾಡಲು ಒಂದು ಕಾರಣ ಇದ್ದರೆ ಸಾಕು. ಅದು ಮಾನದಂಡವಾಗಬೇಕು' ಎಂದು ಅವರು ತಿಳಿಸಿದರು.

----------------------------
‘ಕಾನೂನಿನ ಚೌಕಟ್ಟಿನಲ್ಲಿ ನಮ್ಮದೇ ಮಾನದಂಡಗಳನ್ನು ಹಾಕಿಕೊಳ್ಳುವ ಅಗತ್ಯವಿದೆ. ಬಡವರ ಪರವಾದ ದೃಷ್ಟಿಯಿರಬೇಕು. ಕರುಣೆ ಆಡಳಿತದಲ್ಲಿ ಮುಖ್ಯ. ಜಾಗತಿಕರಣದ, ಉದಾರಿಕರಣ, ಖಾಸಗಿಕರಣದ ಬಳಿಕ ಅಂತಃಕರಣ ಮರೆತ್ತಿದ್ದೇವೆ. ಆಡಳಿತವೂ ಮಾರುಕಟ್ಟೆ ಕೇಂದ್ರೀಕೃತವಾಗುತ್ತಿದೆ. ಮಾರುಕಟ್ಟೆಯಲ್ಲಿ ಮಾನವೀಯತೆ ದೊರೆಯುವುದು ವಿರಳ. ನಮ್ಮ ಮನದಾಳದಲ್ಲಿ, ನಿರ್ಣಯಗಳಲ್ಲಿ ಮಾನವೀಯತೆ ಇರಬೇಕು. ಆಗ ಮಾತ್ರ ಕಲ್ಯಾಣ ರಾಜ್ಯವಾಗಿ ಬೆಳೆಯಲು ಸಾಧ್ಯ'

-ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News