ಉತ್ತರಪ್ರದೇಶ: ಪಿಕಪ್ ವಾಹನ ಡಿಕ್ಕಿ ಹೊಡೆದು ಮದುವೆಗೆ ಆಗಮಿಸಿದ್ದ 6 ಮಂದಿ ಮೃತ್ಯು

Update: 2022-07-09 16:21 GMT
PHOTO: ANI

ಚಿತ್ರಕೂಟ,ಜು.9: ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಶನಿವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಆರು ಜನರು ಮೃತಪಟ್ಟಿದ್ದು,ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಗಿನ 6:30ರ ಸುಮಾರಿಗೆ ರೌಲಿ ಕಲ್ಯಾಣಪುರ ಗ್ರಾಮದಲ್ಲಿ ಟೊಮೆಟೊಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಎಂಟು ಜನರ ಗುಂಪಿನ ಮೇಲೆ ನುಗ್ಗಿದ್ದು,ಐವರು ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಇನ್ನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಇಬ್ಬರು ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದರು.

ಅಪಘಾತದಲ್ಲಿ ಜೀವಹಾನಿಗೆ ಸಂತಾಪಗಳನ್ನು ವ್ಯಕ್ತಪಡಿಸಿರುವ ಉ.ಪ್ರ.ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ಮೃತರ ಕುಟುಂಬಗಳಿಗೆ ತಲಾ ಎರಡು ಲ.ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಪ್ರಕಟಿಸಿದ್ದಾರೆ.

ಮೃತರು ಮತ್ತು ಗಾಯಾಳುಗಳು ಬಾಂದಾ ಜಿಲ್ಲೆಯ ಜರಿ ಗ್ರಾಮದ ನಿವಾಸಿಗಳಾಗಿದ್ದು, ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ರೌಲಿ ಕಲ್ಯಾಣಪುರಕ್ಕೆ ಆಗಮಿಸಿದ್ದರು. ವಾಹನದ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News