ದ.ಕ.ಜಿಲ್ಲೆಯಲ್ಲಿ ಸಂಭ್ರಮದ ‘ಈದುಲ್ ಅಝ್ಹಾ’ ಆಚರಣೆ
ಮಂಗಳೂರು, ಜು.10: ದ.ಕ.ಜಿಲ್ಲೆಯಲ್ಲಿ ಇಂದು ಮುಂಜಾನೆಯಿಂದಲೇ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಅಝ್ಹಾ’ ಆಚರಿಸಲಾಗುತ್ತಿದೆ.
ನಗರದ ಬಾವುಟಗುಡ್ಡೆ ಈದ್ಗಾ ಮಸ್ಜಿದ್ನಲ್ಲಿ ಬಂದರ್ ಝೀನತ್ ಬಕ್ಷ್ ಕೇಂದ್ರ ಜುಮಾ ಮಸೀದಿಯ ಖತೀಬ್ ಅಲ್ ಹಾಜ್ ಅಬುಲ್ ಅಕ್ರಂ ಮುಹಮ್ಮದ್ ಬಾಖವಿ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನೆರವೇರಿತು.
ಉಳ್ಳಾಲ ಕೇಂದ್ರ ಜುಮಾ ಮಸ್ಜಿದ್ನಲ್ಲಿ ಖತೀಬ್ ಅನ್ವರ್ ಅಲಿ ದಾರಿಮಿಯ ನೇತೃತ್ವದಲ್ಲಿ ಈದ್ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು.
ಸಿದ್ದೀಖ್ ಜುಮಾ ಮಸೀದಿ ಮರಕಡ, ಕುಂಜತ್ತಬೈಲ್ ಇಲ್ಲಿನ ಖತೀಬರಾದ ಮೊಹಮ್ಮದ್ ಅನ್ಸಾರ್ ಸಖಾಫಿ ಮುಕ್ವೆ ಇವರ ನೇತೃತ್ವದಲ್ಲಿ ಈದ್ ನಮಾಝ್ ನೆರವೇರಿತು
ಉಳಿದಂತೆ ನಗರದ ಪಂಪ್ವೆಲ್ನ ಮಸ್ಜಿದುತ್ತಖ್ವಾ, ಹಂಪನಕಟ್ಟೆಯ ಮಸ್ಜಿದುನ್ನೂರ್, ಸ್ಟೇಟ್ಬ್ಯಾಂಕ್ನ ಇಬ್ರಾಹೀಂ ಖಲೀಲ್ ಮಸ್ಜಿದ್, ಕಂಕನಾಡಿ ರಹ್ಮಾನಿಯಾ ಜುಮಾ ಮಸ್ಜಿದ್, ನಗರದ ವಾಸ್ಲೇನ್ ಇಹ್ಸಾನ್ ಮಸ್ಜಿದ್, ಪಾಂಡೇಶ್ವರ ಪೊಲೀಸ್ ಲೇನ್ನ ಫೌಝಿಯಾ ಜುಮಾ ಮಸ್ಜಿದ್, ಬಂದರ್ ಕಚ್ಚೀ ಮೇಮನ್ ಜುಮಾ ಮಸ್ಜಿದ್, ಬಂದರ್ ಕಂದುಕ ಬದ್ರಿಯಾ ಜುಮಾ ಮಸ್ಜಿದ್, ಬೋಳಾರ ಮುಹಿಯುದ್ದೀನ್ ಜುಮಾ ಮಸ್ಜಿದ್, ಕುದ್ರೋಳಿ ಜಾಮೀಯಾ ಜುಮಾ ಮಸ್ಜಿದ್, ಬಿಕರ್ನಕಟ್ಟೆ ಅಹಸನುಲ್ ಮಸಾಜೀದ್ ಸಹಿತ ಜಿಲ್ಲೆಯ ಜುಮಾ ಮಸ್ಜಿದ್ ಮತ್ತು ಈದ್ಗಾಗಳಲ್ಲಿ ನಮಾಝ್ ಹಾಗೂ ಖುತ್ಬಾ ನೆರವೇರಿಸಲಾಯಿತು.
ಕೋವಿಡ್-19 ಸೋಂಕು ತಡೆಗಟ್ಟುವ ಸಲುವಾಗಿ ಸರಕಾರ ರೂಪಿಸಿದ್ದ ನಿಯಮಾವಳಿಯನ್ನು ಪಾಲಿಸುವ ನಿಟ್ಟಿನಲ್ಲಿ ಕಳೆದ ಎರಡು ಈದುಲ್ ಅಝ್ಹಾ (ಬಕ್ರೀದ್)ವನ್ನು ಅತ್ಯಂತ ಸರಳವಾಗಿ ಆಚರಿಸಿದ್ದರು. ಆದರೆ ಈ ಬಾರಿ ಸರಕಾರ ಯಾವುದೇ ನಿಯಮಾವಳಿ ರೂಪಿಸದ ಕಾರಣ ದ.ಕ. ಜಿಲ್ಲೆಯಲ್ಲಿ ಈದುಲ್ ಅಝ್ಹಾದ ಸಂಭ್ರಮ ಕಂಡು ಬಂದಿದೆ.
ಎಳೆಯ ಮಕ್ಕಳಿಂದ ಹಿಡಿದು ಹಿರಿಯರ ಸಹಿತ ಎಲ್ಲರೂ ಹೊಸ ಬಟ್ಟೆಬರೆ ಧರಿಸಿ, ಅತ್ತರ್ ಹಚ್ಚಿ ಹಬ್ಬವನ್ನು ಅತ್ಯಂತ ಶ್ರದ್ಧೆಯಿಂದ ಸಂಭ್ರಮಿಸಿದರು. ಈದ್ ನಮಾಝ್-ಖುತ್ಬಾದ ಬಳಿಕ ದಫನ ಭೂಮಿಗೆ ತೆರಳಿ ಅಗಲಿದ ಕುಟುಂಬದ ಸದಸ್ಯರ ಮಗ್ಫಿರತ್ಗಾಗಿ ಪ್ರಾರ್ಥಿಸಿದರು. ಬಳಿಕ ಕುಟುಂಬಸ್ಥರು, ಸ್ನೇಹಿತರು, ಸಮೀಪದ ನಿವಾಸಿಗಳ ಮನೆಗೆ ತೆರಳಿ ಈದ್ ಶುಭಾಶಯ ಕೋರಿದರು.