×
Ad

ಶ್ರಾವಣ ಮಾಸದ ಕೊನೆ ವಾರದಲ್ಲಿ ರಾಜ್ಯದಿಂದ ಕಾಶಿಗೆ ಭಾರತ್ ಗೌರವ್ ರೈಲು: ಸಚಿವೆ ಶಶಿಕಲಾ ಜೊಲ್ಲೆ

Update: 2022-07-11 22:32 IST

ಬೆಂಗಳೂರು, ಜು. 11: ‘ಶ್ರಾವಣ ಮಾಸದ ಕೊನೆಯ ವಾರದಲ್ಲಿ ರಾಜ್ಯದಿಂದ ಕಾಶಿ ಯಾತ್ರೆಗೆ ಭಾರತ್ ಗೌರವ್ ರೈಲು ಯೋಜನೆ ಪ್ರಾರಂಭವಾಗಲಿದೆ' ಎಂದು ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ಸೋಮವಾರ ಇಲ್ಲಿನ ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್ ಎಂ.ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಕಾಶಿ ಯಾತ್ರೆಗೆ ಕಾಯ್ದಿರಿಸಲಾಗಿರುವ ರೈಲಿನ ಪರಿಶಿಲನೆ ಹಾಗೂ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ‘ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆಯನ್ನು ಕೈಗೊಳ್ಳಬೇಕೆನ್ನುವುದು ಬಹುಪಾಲು ಹಿಂದುಗಳ ಆಸೆಯಾಗಿರುತ್ತದೆ. ಇದನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನೆಲುಬಾಗಿ ಸಿಎಂ ಎಲ್ಲ ರೀತಿಯ ಸಹಕಾರ ನೀಡಿದ್ದಕ್ಕಾಗಿ ಅಭಿನಂದನೆ' ಎಂದು ತಿಳಿಸಿದರು. 

‘ಕಾಶಿಯಾತ್ರೆಗೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುವ ಭಾರತ್ ಗೌರವ್ ರೈಲನ್ನು ಸಿದ್ಧಪಡಿಸಲು ಅನುಮತಿ ನೀಡಿದ್ದು, ಶ್ರಾವಣ ಮಾಸದ ಕೊನೆಯ ವಾರದಲ್ಲಿ ಯಾತ್ರೆ ಪ್ರಾರಂಭವಾಗಲಿದೆ. ಈ ಮೂಲಕ ಭಾರತ್ ಗೌರವ್ ರೈಲು ಸೇವೆಯನ್ನು ಒದಗಿಸುತ್ತಿರುವ ದೇಶದ ಮೊದಲ ರಾಜ್ಯ ಹಾಗೂ ಇಲಾಖೆ ಎನ್ನುವ ಹೆಗ್ಗಳಿಕೆ ನಾವು ಪಾತ್ರರಾಗಲಿದ್ದೇವೆ' ಎಂದು ಅವರು ತಿಳಿಸಿದರು.

ರಿಯಾಯಿತಿ ದರದಲ್ಲಿ 7 ದಿನಗಳ ಪ್ರವಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದಕ್ಕಾಗಿ ಈಗಾಗಲೇ 1 ಕೋಟಿ ರೂ.ಗಳ ಭೌತಿಕ ಬ್ಯಾಂಕ್ ಗ್ಯಾರಂಟಿಯನ್ನು ನೀಡಿ ರೈಲನ್ನು ಬಾಡಿಗೆಗೆ ತೆಗೆದುಕೊಳ್ಳಲಾಗಿದೆ. ಬೆಂಗಳೂರು-ವಾರಣಾಸಿ-ಅಯೋಧ್ಯೆ-ಪ್ರಯಾಗರಾಜ್-ಬೆಂಗಳೂರು ಮಾರ್ಗದಲ್ಲಿ ರೈಲು 7 ದಿನಗಳಲಿ 4161 ಕಿ.ಮೀ.ಗಳಷ್ಟು ದಾರಿ ಕ್ರಮಿಸಲಿದೆ. 14 ಬೋಗಿಗಳನ್ನು ಈ ರೈಲು ಒಳಗೊಂಡಿರಲಿದ್ದು, 11 ಬೋಗಿಗಳನ್ನು ಪ್ರಯಾಣಿಕರ ಪ್ರವಾಸಕ್ಕೆ ಅಣಿ ಮಾಡಲಾಗುತ್ತಿದೆ. 3 ಟಯರ್ ಎಸಿಯ ವ್ಯವಸ್ಥೆ ಇರಲಿದೆ. ಒಂದು ಬೋಗಿಯನ್ನು ದೇವಸ್ಥಾನವಾಗಿ ಪರಿವರ್ತಿಸಿ ಯಾತ್ರಾರ್ಥಿಗಳ ಭಜನೆಗೆ ಅವಕಾಶ ನೀಡಲಾಗುವುದು' ಎಂದರು.

‘ಅಲ್ಲದೆ, ನಮ್ಮ ರಾಜ್ಯದ ಪ್ರಮುಖ ದೇವಸ್ಥಾನಗಳ ಬ್ರಾಂಡಿಂಗ್ ಮಾಡುವ ಉದ್ದೇಶದಿಂದ 11 ಬೋಗಿಗಳ ಮೇಲೆ ರಾಜ್ಯದ ಪ್ರಮುಖ 11 ದೇವಸ್ಥಾನಗಳ ಮಾಹಿತಿಯನ್ನು ಅಳವಡಿಸಲಾಗುವುದು. ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಮತ್ತು ಇತರೆ ಮೂಲಭೂತ ಸೌಕರ್ಯಗಳಿಗೆ ರೈಲ್ವೆಯ ಅಧೀನ ಸಂಸ್ಥೆಯ ಜೊತೆ ಐಆರ್‍ಸಿಟಿಸಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು. 7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂ.ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂ.ಗಳನ್ನು ಸಹಾಯಧನವನ್ನಾಗಿ ನೀಡಲಾಗುವುದು ಎಂದು ಅವರು ತಿಳಿಸಿದರು. 

ಈ ಸಂಧರ್ಭದಲ್ಲಿ ಮುಜರಾಯಿ ಇಲಾಖೆಯ ಆಯುಕ್ತೆ ರೋಹಿಣಿ ಸಿಂಧೂರಿ, ಸೌತ್ ವೆಸ್ಟರ್ನ್ ರೈಲ್ವೆಯ ಚೀಪ್ ಕಮರ್ಷಿಯಲ್ ಮ್ಯಾನೇಜರ್ ಡಾ.ಅನೂಪ್ ದಯಾನಂದ್ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News