ಸರಕಾರಿ ಕಾಲೇಜುಗಳಲ್ಲಿ ಕನಿಷ್ಠ 1,500 ವಿದ್ಯಾರ್ಥಿಗಳಾದರೂ ಇರಬೇಕು: ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ
ಬೆಂಗಳೂರು, ಜು.15: ಸರಕಾರಿ ಕಾಲೇಜುಗಳು ಸುಸಜ್ಜಿತವಾಗಿದ್ದು, ಪ್ರತಿಯೊಂದು ಕಾಲೇಜಿನಲ್ಲೂ ಕನಿಷ್ಠ ಪಕ್ಷ 1,500 ರಿಂದ 2 ಸಾವಿರ ವಿದ್ಯಾರ್ಥಿಗಳಾದರೂ ಇರುವಂತೆ ನೋಡಿಕೊಳ್ಳುವುದು ಪ್ರಾಂಶುಪಾಲರ ಹೊಣೆಯಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ, ಎಂಜಿನಿಯರಿಂಗ್ ಮತ್ತು ಪಾಲಿಟೆಕ್ನಿಕ್ ಕಾಲೇಜುಗಳ ಪ್ರಾಂಶುಪಾಲರ ಕಾರ್ಯಾಗಾರವನ್ನು ಉದ್ದೇಶಿಸಿ ಅವರು ವರ್ಚುಯಲ್ ಆಗಿ ಮಾತನಾಡಿದರು.
ರಾಜ್ಯದ ಉನ್ನತ ಶಿಕ್ಷಣ ವಲಯದಲ್ಲಿ ಈಗಾಗಲೇ ಎನ್ಇಪಿ ಜಾರಿಯಾಗಿದೆ. ಇದಕ್ಕೆ ತಕ್ಕಂತೆ ಗುಣಮಟ್ಟದ ಕಲಿಕೆಯು ಸರಕಾರಿ ಕಾಲೇಜುಗಳಲ್ಲಿ ಸಾಧ್ಯವಾಗಬೇಕು. ಈಗಾಗಲೇ ಅಭಿವೃದ್ಧಿ ಪಡಿಸಿರುವ 2,500 ಸ್ಮಾರ್ಟ್ ಕ್ಲಾಸ್-ರೂಮುಗಳಲ್ಲಿ ಪಿಪಿಟಿ, ಆಡಿಯೋ ಮತ್ತು ವಿಡಿಯೋಗಳನ್ನು ಬೋಧನೆಯಲ್ಲಿ ಅಳವಡಿಸಿಕೊಳ್ಳಬೇಕು. ಉಳಿದಿರುವ 6,500 ತರಗತಿಗಳನ್ನು ಇನ್ನು ಆರು ತಿಂಗಳಲ್ಲಿ ಸ್ಮಾರ್ಟ್ ಕ್ಲಾಸ್ ರೂಮುಗಳನ್ನಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಅವರು ಹೇಳಿದರು.
ಉನ್ನತ ಶಿಕ್ಷಣ ಇಲಾಖೆಯು ಪರಿಣಾಮಕಾರಿ ಕಲಿಕೆಯನ್ನು ಸಾಧ್ಯವಾಗಿಸಲು ಕಲಿಕಾ ನಿರ್ವಹಣಾ ವ್ಯವಸ್ಥೆಯನ್ನು (ಎಲ್ಎಂಎಸ್) ಅಭಿವೃದ್ಧಿ ಪಡಿಸಿದೆ. ಇದರಲ್ಲಿರುವ ಪಠ್ಯ ಮತ್ತು ವಿಚಾರಗಳನ್ನು ವಿದ್ಯಾರ್ಥಿಗಳು ನೂರಕ್ಕೆ ನೂರರಷ್ಟು ಬಳಸಿಕೊಳ್ಳುವಂತೆ ಪ್ರಾಂಶುಪಾಲರು ಸೂಕ್ತ ಗಮನ ಹರಿಸಬೇಕು. ಏಕೀಕೃತ ವಿಶ್ವವಿದ್ಯಾಲಯ ಮತ್ತು ಕಾಲೇಜು ನಿರ್ವಹಣೆ ವ್ಯವಸ್ಥೆ(ಯುಯುಸಿಎಂಎಸ್) ಜಾರಿಗೆ ಬಂದಿದ್ದು ಅದನ್ನು ಪರಿಣಾಮಕಾರಿಯಾಗಿ ಪ್ರತಿಯೊಂದು ಕಾಲೇಜು ಬಳಸಬೇಕು ಎಂದು ಅವರು ಸೂಚಿಸಿದರು.
ಸದ್ಯಕ್ಕೆ ಕೇವಲ 84 ಸರಕಾರಿ ಕಾಲೇಜುಗಳಲ್ಲಷ್ಟೇ ಶೇ.100ರಷ್ಟು ವಿದ್ಯಾರ್ಥಿಗಳು ಇದ್ದಾರೆ. 105 ಸರಕಾರಿ ಕಾಲೇಜುಗಳಲ್ಲಿ ಒಟ್ಟು ಸಾಮಥ್ರ್ಯದ ಶೇ.40ರಷ್ಟು ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಈ ದುರವಸ್ಥೆ ತಪ್ಪಿ, ಸರಕಾರಿ ಕಾಲೇಜುಗಳು ಕಲಿಕೆಗೆ ಆಕರ್ಷಕ ತಾಣಗಳಾಗಬೇಕು. ಕಾಲೇಜುಗಳಲ್ಲಿ ಶುಲ್ಕದ ರೂಪದಲ್ಲಿ ಸಂಗ್ರಹವಾಗುತ್ತಿರುವ ಹಣವನ್ನು ಈಗ ಆಯಾ ಕಾಲೇಜುಗಳ ಅಭಿವೃದ್ಧಿಗೆ ಕೊಡಲಾಗುತ್ತಿದೆ. ಈ ಮೂಲಕ ಸ್ವಾವಲಂಬನೆ ಮತ್ತು ಸ್ವಾಯತ್ತೆಗಳನ್ನು ಒದಗಿಸಲಾಗುತ್ತಿದೆ ಎಂದು ಅಶ್ವತ್ಥ ನಾರಾಯಣ ಮನದಟ್ಟು ಮಾಡಿಕೊಟ್ಟರು.
ಸರಕಾರಿ ಕಾಲೇಜುಗಳಲ್ಲಿ ಕಲಿಯಲು ಬರುವವರು ಆರ್ಥಿಕವಾಗಿ ದುರ್ಬಲವಾಗಿರುವ ಕುಟುಂಬಗಳ ಮಕ್ಕಳಾಗಿರುತ್ತಾರೆ. ಇವರಿಗೆಲ್ಲ ಉದ್ಯೋಗ ಸಿಗುವಂತೆ ಮಾಡಬೇಕು. ಇದಕ್ಕಾಗಿ ಅಗತ್ಯ ಕೌಶಲ್ಯ ಕಲಿಕೆ ಮತ್ತು ಸೂಕ್ತ ಪಠ್ಯ ಅಳವಡಿಸಿಕೊಳ್ಳಲಾಗಿದೆ. ಪ್ರತಿಯೊಂದು ಸರಕಾರಿ ಕಾಲೇಜಿನಲ್ಲೂ ಸ್ವಾತಂತ್ರ್ಯದ ಅಮೃತ ಮಹೋತ್ಸವವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಬೇಕು. ಹಬ್ಬದ ವಾತಾವರಣ ಪಸರಿಸಬೇಕು. ಇದಕ್ಕೆ ವ್ಯಾಪ್ತಿಯಲ್ಲೇ ಯೋಜನೆಗಳನ್ನು ರೂಪಿಸಬೇಕು ಎಂದು ಅವರು ಸೂಚಿಸಿದರು.
ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮಾತನಾಡಿದರು.