ಪ್ರವಾಹ ಸಂಕಷ್ಟದಲ್ಲಿ ಸಿದ್ದರಾಮಯ್ಯ ಜನ್ಮದಿನ ಆಚರಣೆ: ಸಚಿವ ಡಾ.ಕೆ. ಸುಧಾಕರ್
ಬೆಂಗಳೂರು, ಜು.16: ರಾಜ್ಯದ ಹದಿಮೂರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಿ ಜನರು ಸಂಕಷ್ಟದಲ್ಲಿರುವಾಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ಧೂರಿಯಾಗಿ ಜನ್ಮದಿನ ಆಚರಿಸಿಕೊಳ್ಳುತ್ತಿರುವುದರ ಔಚಿತ್ಯವನ್ನು ರಾಜ್ಯದ ಜನತೆ ತೀರ್ಮಾನಿಸಲಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅಭಿಪ್ರಾಯಪಟ್ಟಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎಂಬ ಸಿದ್ಧಾಂತದಲ್ಲಿ ನಂಬಿಕೆ ಇಟ್ಟಿರುವ ಪಕ್ಷ ನಮ್ಮದು. ಇದಕ್ಕೆ ತದ್ವಿರುದ್ಧವಾಗಿ ದೇಶಕ್ಕಿಂತ ಪಕ್ಷ, ಈ ಕುಟುಂಬ ಮುಖ್ಯ ಎಂಬ ಚಿಂತನೆ ಹೊಂದಿರುವ ಪಕ್ಷ ಅವರದ್ದು ಎಂದು ಟೀಕಿಸಿದರು.
ನಾವು ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಆಚರಿಸಿದರೆ, ಅವರು ಅವರದ್ದೇ ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಾರೆ. ನಮ್ಮ ಪಕ್ಷದಲ್ಲಿ ವ್ಯಕ್ತಿಪೂಜೆ, ಪಲ್ಲಕ್ಕಿ ಪೂಜೆಗೆ ಅವಕಾಶ ಇಲ್ಲ. ಕಾಂಗ್ರೆಸ್ನಲ್ಲಿ ಅದೇ ಮುಖ್ಯ. ಅತಿಯಾದ ಮಳೆಯಿಂದ ಅನೇಕ ಜಿಲ್ಲೆಗಳ ಜನರು ಸಂತ್ರಸ್ತರಾಗಿ ಪರದಾಡುತ್ತಿರುವಾಗ ಜನ್ಮದಿನಾಚರಣೆ ಆಚರಿಸಿಕೊಳ್ಳುವುದು ಸರಿಯೇ? ತಪ್ಪೇ? ಎಂಬುದನ್ನು ಅವರ ವಿವೇಚನೆಗೆ ಬಿಡುತ್ತೇನೆ. ಆ ಬಗ್ಗೆ ರಾಜ್ಯದ ಜನ ನಿರ್ಣಯಿಸುತ್ತಾರೆ ಎಂದು ಅವರು ಹೇಳಿದರು.
ಸಾಧನಾ ಸಮಾವೇಶ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇದೇ ತಿಂಗಳ 28ಕ್ಕೆ ಒಂದು ವರ್ಷ ಪೂರೈಸಲಿದ್ದಾರೆ. ಈ ಒಂದು ವರ್ಷದ ಅವಧಿಯಲ್ಲಿ ಜನಪರ ಸ್ವಚ್ಛ ಆಡಳಿತ ನೀಡಿರುವುದನ್ನು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಡುವ ಉದ್ದೇಶದಿಂದ ಸಮಾವೇಶ ನಡೆಸಲು ನಿರ್ಧರಿಸಿ ದೊಡ್ಡಬಳ್ಳಾಪುರವನ್ನು ಆಯ್ಕೆ ಮಾಡಲಾಗಿದೆ ಎಂದು ಸುಧಾಕರ್ ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಸಚಿವನಾಗಿರುವುದರಿಂದ ನನಗೆ ಮತ್ತು ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳ ಉಸ್ತುವಾರಿ ಸಚಿವರಿಗೆ ಸಮಾವೇಶದ ಜವಾಬ್ದಾರಿ ನೀಡಲಾಗಿದೆ. ನಾವೆಲ್ಲರೂ ಒಟ್ಟಾಗಿ ಆ ಕಾರ್ಯಕ್ರಮ ಯಶಸ್ವಿಗೊಳಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಅವರು ಸ್ಪಷ್ಟಪಡಿಸಿದರು.
ಮೊಟ್ಟೆ ಅಪೌಷ್ಟಿಕ ಎಂಬ ವರದಿಯನ್ನು ಶಿಕ್ಷಣ ಇಲಾಖೆಗೆ ನೀಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ವೈಯಕ್ತಿಕವಾಗಿ ತಿಳಿದುಕೊಂಡಿರುವಂತೆ ಹಾಲು, ಮೊಟ್ಟೆ ಎಲ್ಲವೂ ಅತ್ಯಂತ ಪೌಷ್ಟಿಕಾಂಶಗಳಿಂದ ಕೂಡಿರುವ ಆಹಾರ ಎಂದು ತಿಳಿದುಕೊಂಡಿದ್ದೇನೆ ಎಂದು ಸುಧಾಕರ್ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
ಮಂಕಿಪಾಕ್ಸ್ ಕುರಿತಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಆರು ತಿಂಗಳ ಹಿಂದೆಯೇ ತಜ್ಞರು ಮತ್ತು ಹಿರಿಯ ಅಧಿಕಾರಿಗಳ ಜೊತೆ ಸಮಾಲೋಚಿಸಿ ಮುನ್ನೆಚ್ಚರಿಕೆ ಮಾರ್ಗಸೂಚಿ ಹೊರಡಿಸಲಾಗಿತ್ತು. ವಿಮಾನ ನಿಲ್ದಾಣ, ರೈಲು ನಿಲ್ದಾಣಗಳಲ್ಲಿ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ. ಕೇರಳದಲ್ಲಿ ಮೊನ್ನೆ ಒಂದು ಪ್ರಕರಣ ವರದಿಯಾಗಿದೆ. ಆ ನಂತರ ಗಡಿ ಭಾಗದಲ್ಲಿ ಮತ್ತು ಇತರೆ ಭಾಗಗಳಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಈಗಾಗಲೇ ಇಲಾಖೆ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಲಾಗಿದೆ. ಹೀಗಾಗಿ ಮಂಕಿಪಾಕ್ಸ್ ಬಗ್ಗೆ ಜನರು ಆತಂಕ ಪಡುವ ಅಗತ್ಯವಿಲ್ಲ.
-ಡಾ.ಕೆ.ಸುಧಾಕರ್, ಆರೋಗ್ಯ ಸಚಿವ