ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ದೂರು
ಬೆಂಗಳೂರು, ಜು.19: ರಾಷ್ಟ್ರಪತಿ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ರಾಜ್ಯದ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರು ಚುನಾವಣಾ ಅಪರಾಧ ಮಾಡಿದ್ದು, ಅವರ ವಿರುದ್ಧ ಸೆಕ್ಷನ್ 171 ಬಿ, 171 ಸಿ, 171 ಇ, 171 ಎಫ್ ಪ್ರಕಾರ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ನಗರದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ನಿಯೋಗವು ದೂರು ಸಲ್ಲಿಸಿದೆ.
ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಬೇಕು. ಯಾವುದೇ ಆಮಿಷ, ಒತ್ತಡ ಹಾಕಬಾರದು. ಹಾಕಿದರೆ ಅದು ಅಪರಾಧವಾಗುತ್ತದೆ. ಇದು ಜನತಾ ಪ್ರಾತಿನಿದ್ಯ ಕಾಯ್ದೆ, ಐಪಿಸಿ ಸೆಕ್ಷನ್ ಹಾಗೂ ಅಧ್ಯಕ್ಷೀಯ ಚುನಾವಣಾ ಕಾಯ್ದೆಯಲ್ಲಿ ಪ್ರಸ್ತಾಪವಾಗಿದೆ ಎಂದರು.
ಬಿಜೆಪಿಯವರು ರವಿವಾರ ಎಲ್ಲ ಶಾಸಕರನ್ನು ಬೆಂಗಳೂರಿನ ಹೊಟೇಲ್ ಗೆ ಕರೆಸಿ ಆಹಾರ, ಪಾನೀಯ, ಮನರಂಜನೆ ನೀಡಿದ್ದಾರೆ. ಇದೆಲ್ಲದರ ವೆಚ್ಚವನ್ನು ಮುಖ್ಯಮಂತ್ರಿ ಹಾಗೂ ಬಿಜೆಪಿ ವಹಿಸಿಕೊಂಡಿದ್ದು, ಅವರಿಗೆ ಇದೇ ರೀತಿ ಮತದಾನ ಮಾಡಬೇಕು ಎಂದು ತರಬೇತಿ ನೀಡಲಾಗಿದೆ. ಜತೆಗೆ ಅವರನ್ನು ಕರೆದೊಯ್ಯಲು ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಗ್ರಪ್ಪ ಹೇಳಿದರು.
ಗ್ರಾಮಪಂಚಾಯ್ತಿ ಮತದಾರರನ್ನು ಬಸ್ ನಲ್ಲಿ ಕೆರೆದೊಯ್ದಿದ್ದರೆ ಅವರ ವಿರುದ್ಧ ಕೇಸ್ ದಾಖಲಾಗುತ್ತಿತ್ತು. ಎನ್ಡಿಎ ಅಭ್ಯರ್ಥಿ ಸಮ್ಮತಿ ಆಧಾರದ ಮೇಲೆ ಇದನ್ನು ಮಾಡಿದ್ದು, ಈ ವಿಚಾರವಾಗಿ ಪ್ರಕರಣ ದಾಖಲಿಸಬೇಕು. ಹೀಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಅವರು ತಿಳಿಸಿದರು.
ಅಲ್ಲದೆ ವಿಧಾನಸೌದದಲ್ಲಿ ನಡೆದ ಮತದಾನದಲ್ಲಿ ಎನ್ಡಿಎ ಅಭ್ಯರ್ಥಿಗೆ ದಾಖಲಾಗಿರುವ ಎಲ್ಲ ಮತಗಳನ್ನು ಅಸಿಂಧು ಎಂದು ಪರಿಗಣಿಸಬೇಕು. ಇಲ್ಲಿನ ಮುಖ್ಯ ಚುನಾವಣಾಧಿಕಾರಿ ತಮ್ಮ ದೂರಿನ ಸಂಬಂಧ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಮ್ಮ ದೂರನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಉಗ್ರಪ್ಪ ಹೇಳಿದರು.
ಈ ರೀತಿ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ಚುನಾವಣಾ ಪ್ರಕ್ರಿಯೆಗೆ ಅಪಚಾರ ಎಸಗಲಾಗಿದೆ. ಸರ್ವಾಧಿಕಾರಿ ಮನಸ್ಥಿತಿ ಮೂಲಕ ಚುನಾವಣೆಯನ್ನು ತಮ್ಮ ಮೂಗಿನ ನೇರಕ್ಕೆ ತಿರುಗಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿಯು ಶಾಸಕರನ್ನು ಕರೆಸಿ ಹೊಟೇಲ್ನಲ್ಲಿ ಇಟ್ಟಿರುವ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಯಾವ ಹೊಟೇಲ್ ನಲ್ಲಿ ಕೊಠಡಿ ಮಾಡಿದ್ದಾರೆ, ಅದರ ದಾಖಲೆಗಳನ್ನು ಪರಿಶೀಲಿಸಬಹುದು. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವಂತೆ ಮಾಧ್ಯಮಗಳು ಪ್ರಸಾರ ಮಾಡಿರುವ ಎಲ್ಲ ದಾಖಲೆಗಳನ್ನು ನಾವು ಸಲ್ಲಿಸಿದ್ದೇವೆ. ಅಧಿಕಾರಿಗಳು ಇದನ್ನು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸುತ್ತಾರೆ ಎಂದು ಭಾವಿಸಿದ್ದೇವೆ ಉಗ್ರಪ್ಪ ಹೇಳಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಮಾಜಿ ಸದಸ್ಯ ವೆಂಕಟೇಶ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.