BBMP ಚುನಾವಣೆ; ವಾರದೊಳಗೆ ಮೀಸಲಾತಿ ಪಟ್ಟಿ ಪ್ರಕಟಿಸಿ: ಸುಪ್ರೀಂ ಕೋರ್ಟ್
ಬೆಂಗಳೂರು: ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ 1 ವಾರದೊಳಗೆ ರಾಜ್ಯ ಸರ್ಕಾರ ಮೀಸಲಾತಿ ಪಟ್ಟಿಯನ್ನು ಪ್ರಕಟಿಸಬೇಕು ಎಂದು ಸುಪ್ರಿಂ ಕೋರ್ಟ್ ಗುರುವಾರ ಸೂಚಿಸಿದೆ.
ಮೀಸಲಾತಿ ಪಟ್ಟಿಯನ್ನು ಪ್ರಕಟಿಸಿದ ಬಳಿಕ ತಕ್ಷಣ ಚುನಾವಣೆ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚಿಸಿದೆ.
ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎ.ಎಂ ಕಾನ್ವಿಲ್ಕರ್ ನೇತೃತ್ವದ ಪೀಠದಲ್ಲಿ ವಿಚಾರಣೆ ನಡೆಸಲಾಗಿದ್ದು, ಎಂಟು ವಾರಗಳಲ್ಲಿ ಚುನಾವಣೆ ನಡೆಸಲು ಯಾಕೆ ಸಾಧ್ಯವಾಗಿಲ್ಲ ಎಂದು ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದ ರಾಜ್ಯ ಸರ್ಕಾರದ ಪರ ವಕೀಲರು ಮೀಸಲಾತಿ ಸಂಬಂಧ ರಚಿಸಲಾಗಿದ್ದ ಭಕ್ತವತ್ಸಲ ಸಮಿತಿ ವರದಿಯನ್ನು ವಿಳಂಬವಾಗಿ ನೀಡಿದೆ. ಈ ಹಿನ್ನೆಲೆಯಲ್ಲಿ ಮೀಸಲಾತಿ ಪ್ರಕಟಿಸಲು ಸಾಧ್ಯವಾಗಿಲ್ಲ ಎಂದರು.
ವಾದ ಆಲಿಸಿದ ಬಳಿಕ ಒಂದು ವಾರ ಸಮಯಾವಕಾಶ ನೀಡಿ ಆದೇಶ ನೀಡಿತು. ಒಂದು ವಾರದ ಬಳಿಕ ಚುನಾವಣೆ ಪ್ರಕ್ರಿಯೆ ಆರಂಭಿಸಲು ಸೂಚನೆ ನೀಡಲಾಗಿದೆ. ಸರ್ಕಾರ ಮೀಸಲಾತಿ ಪ್ರಕಟಿಸಿದ ಬಳಿಕ ಚುನಾವಣಾ ಆಯೋಗ ಚುನಾವಣಾ ನಡೆಸಲು ಅಗತ್ಯವಿರುವ ಎಲ್ಲ ಪ್ರಕ್ರಿಯೆಗಳನ್ನು ಆರಂಭಿಸಬೇಕು ಎಂದು ಸೂಚನೆ ನೀಡಲಾಗಿದೆ.