ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ವಿಚಾರ: ವಸ್ತುಸ್ಥಿತಿ ವರದಿ ಸಲ್ಲಿಕೆಗೆ ಹೈಕೋರ್ಟ್ ಕಾಲಾವಕಾಶ

Update: 2022-07-28 11:48 GMT

ಬೆಂಗಳೂರು, ಜು.28: ನಗರ ವ್ಯಾಪ್ತಿಯಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚುವ ಕಾಮಗಾರಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ವರದಿ ಸಲ್ಲಿಸಲು ಬಿಬಿಎಂಪಿಗೆ ಹೈಕೋರ್ಟ್ ಆ.3ರವರೆಗೆ ಕಾಲಾವಕಾಶ ನೀಡಿದೆ. 

ನಗರ ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಲು ಸರಕಾರ ಹಾಗೂ ಬಿಬಿಎಂಪಿಗೆ ನಿರ್ದೇಶಿಸಬೇಕೆಂದು ಕೋರಿ ವಿಜಯನ್ ಮೆನನ್ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ನಿರ್ದೇಶನ ನೀಡಿದೆ.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು, ರಸ್ತೆ ಗುಂಡಿ ಮುಚ್ಚುವ ಕಾಮಗಾರಿ ನಡೆಸಿ, ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಜೂ.30ರಂದು ನ್ಯಾಯಪೀಠ ಆದೇಶಿಸಿತ್ತು. ಆ ಆದೇಶದ ಅನುಪಾಲನಾ ವರದಿ ಈಗಾಗಲೇ ಸಿದ್ಧವಿದ್ದು, ಸಮಯಾವಕಾಶ ನೀಡಿದರೆ ಸಲ್ಲಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು. 

ಬಿಬಿಎಂಪಿ ಸಲ್ಲಿಸುವ ವರದಿಗೆ ಆಕ್ಷೇಪಣೆ ಸಲ್ಲಿಸಲು ನಮಗೂ ಕಾಲಾವಕಾಶ ನೀಡಬೇಕೆಂದು ಅರ್ಜಿದಾರರ ಪರ ವಕೀಲರು ಪೀಠಕ್ಕೆ ಕೋರಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಆ.3ರೊಳಗೆ ಬಿಬಿಎಂಪಿ ಅನುಪಾಲನಾ ವರದಿ ಸಲ್ಲಿಸಬೇಕು. ಆ ವರದಿಗೆ ಆಕ್ಷೇಪಣೆ ಇದ್ದಲ್ಲಿ ಅರ್ಜಿದಾರರು 1 ವಾರದೊಳಗೆ ಸಲ್ಲಿಸಬೇಕೆಂದು ನಿರ್ದೇಶಿಸಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News