ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ತಕ್ಷಣ ಪರಿಹಾರ ನೀಡಿ: ಅಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ಸೂಚನೆ

Update: 2022-08-02 15:31 GMT

ಬೆಂಗಳೂರು, ಆ.2: ರಾಜ್ಯದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಾನಿಗೊಳಗಾಗಿರುವ 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವೀಡಿಯೋ ಕಾನ್ಫರೆನ್ಸ್ ನಡೆಸಿದರು.

ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಸಿದ ವೀಡಿಯೋ ಕಾನ್ಫರೆನ್ಸ್‍ನಲ್ಲಿ, ಜೂನ್ ಒಂದರಿಂದ ಈವರೆಗೆ ಆಗಿರುವ ಭಾರಿ ಮಳೆ ಹಾಗೂ ಪ್ರವಾಹದಿಂದ ರಾಜ್ಯದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ಅಧಿಕಾರಿಗಳಿಂದ ಮುಖ್ಯಮಂತ್ರಿ ಮಾಹಿತಿ ಪಡೆದುಕೊಂಡರು.

ಒಟ್ಟು 3,499 ಹೆಕ್ಟೇರ್ ಕೃಷಿ ಬೆಳೆ ನಾಶವಾಗಿದ್ದು, 2,057 ಹೆಕ್ಟೇರ್ ತೋಟಗಾರಿಕಾ ಬೆಳೆ  ನಾಶವಾಗಿದೆ. 2,430 ಮನೆಗಳು ಸಂಪೂರ್ಣ ಹಾನಿಗೊಳಗಾಗಿವೆ. 4,378 ಮನೆಗಳು ಭಾಗಶಃ ಹಾನಿಯಾಗಿವೆ. ಜೀವ ಹಾನಿ-39 ಹಾಗೂ 99 ಪ್ರಾಣಿ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.  

1,730 ಕಿ.ಮೀ ರಸ್ತೆ ಹಾನಿ, 5,419 ಕಿ.ಮಿ ಗ್ರಾಮೀಣ ರಸ್ತೆ ಹಾನಿಯಾಗಿವೆ. 629 ಸೇತುವೆಗಳು ಹಾನಿಯಾಗಿವೆ, 3,264 ಶಾಲಾ ಕಟ್ಟಡಗಳು ಹಾನಿಯಾಗಿದ್ದು, 29 ಪ್ರಾಥಮಿಕ ಆರೋಗ್ಯ ಕಟ್ಟಡಗಳಿಗೆ ಹಾನಿಯಾಗಿದೆ. 11,796 ವಿದ್ಯುತ್ ಕಂಬಗಳು ನೆಲಕ್ಕುರುಳಿವೆ ಹಾಗೂ 759 ಟ್ರಾನ್ಸ್‍ಫಾರ್ಮರ್‍ಗಳು ಹಾನಿಗೊಳಪಟ್ಟಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.  

ಸತತ ಮಳೆಯಿಂದ ಎಲ್ಲ ಕೆರೆಗಳು ತುಂಬಿವೆ. ಕೆರೆಗಳ ಕಟ್ಟೆಗಳು ಮತ್ತು ಕೋಡಿಗಳು ದುರ್ಬಲಗೊಂಡಿವೆ. ಸಂಗ್ರಹ ಸಾಮರ್ಥ್ಯ ಹೆಚ್ಚಿರುವ ಕೆರೆಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಕೆರೆಗಳು ವಡ್ಡು ಬಿರುಕು ಬಿಡದಂತೆ ಎಚ್ಚರ ವಹಿಸಬೇಕು. ಸಣ್ಣ ನೀರಾವರಿ ಹಾಗೂ ಜಿಲ್ಲಾ ಪಂಚಾಯತ್ ಈ ಬಗ್ಗೆ ಜಂಟಿಯಾಗಿ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಸಮರೋಪಾದಿಯಲ್ಲಿ  ಕೈಗೊಳ್ಳಬೇಕು. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕಡಿದುಹೋದ ರಸ್ತೆ ಸಂಪರ್ಕವನ್ನು ಪುನಃಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಬಿದ್ದುಹೋದ ಮನೆಗಳ ಬಗ್ಗೆ ತುರ್ತಾಗಿ ಜಂಟಿ ಸಮೀಕ್ಷೆ ಕೈಗೊಳ್ಳಬೇಕು. ಭೂ ಕುಸಿತ ಸಂಭವಿಸುವ ಸಾಧ್ಯತೆ ಇರುವ ಕಡೆಗಳಲ್ಲಿ ಜನರನ್ನು ಮುಂಚಿತವಾಗಿಯೇ ಸ್ಥಳಾಂತರ ಮಾಡುವಂತೆ ಬಸವರಾಜ ಬೊಮ್ಮಾಯಿ ಹೇಳಿದರು.

ಭಟ್ಕಳ ಹಾಗೂ ಸುಳ್ಯ ಸೇರಿದಂತೆ ಇತರ ಕಡೆಗಳಲ್ಲಿ ವಾಣಿಜ್ಯ ಸಂಕೀರ್ಣಗಳಲ್ಲಿ ನೀರು ನುಗ್ಗಿ ಹಾಳಾಗಿರುವ ಬಗ್ಗೆ ವರದಿ ಸಲ್ಲಿಸಬೇಕು. ರೆಡ್ ಅಲರ್ಟ್ ಇರುವ ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮ ವಹಿಸಬೇಕು. ಕೊಡಗು ಜಿಲ್ಲೆಯಲ್ಲಿ ಭೂ ಕುಸಿತವಾಗುವ ಬಗ್ಗೆ ಎಚ್ಚರ ವಹಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು. 

ಪ್ರವಾಹದಂಥ ತುರ್ತು ಸಂದರ್ಭದಲ್ಲಿ ತಕ್ಷಣ ಪರಿಹಾರ ಕ್ರಮಕೈಗೊಂಡು, ಆ ಮೂಲಕ ಸರಕಾರ ಜನರ ಕಷ್ಟಗಳಿಗೆ ಸ್ಪಂದಿಸುತ್ತಿದೆ ಎಂಬ ಸಂದೇಶ ರವಾನೆ ಮಾಡಬೇಕಿದೆ.  ಜಿಲ್ಲಾಧಿಕಾರಿಗಳು ತುರ್ತು ಸಂದರ್ಭಗಳಲ್ಲಿ ಪರಿಹಾರ ವಿತರಣೆಗೆ ವಿಳಂಬ ಧೋರಣೆ ಅನುಸರಿಸದೆ, ಕೂಡಲೇ ಪರಿಹಾರ ವಿತರಿಸಬೇಕು ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಹಾನಿಯಾಗಿರುವ ಮನೆಗಳ ಬಗ್ಗೆ ಪ್ರಾಥಮಿಕ ವರದಿಯನ್ನು ಪ್ರತಿ ತಾಲೂಕಿನ ಇಓಗಳಿಂದ ಪಡೆಯಬೇಕು. ಕಾಳಜಿ ಕೇಂದ್ರಗಳಲ್ಲಿ ಎಲ್ಲ ವ್ಯವಸ್ಥೆಗಳನ್ನು ತಹಶೀಲ್ದಾರ್‍ಗಳು ಖಾತರಿ ಪಡಿಸಿಕೊಂಡು ಅದನ್ನು ಜಿಲ್ಲಾಧಿಕಾರಿಗಳು ಮೇಲ್ವಿಚಾರಣೆ ಮಾಡಬೇಕು. ಮೈಸೂರು, ದಾವಣಗೆರೆ ಹಾಗೂ ಉಡುಪಿ ಜಿಲ್ಲೆಗಳಿಗೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. 

ಹಾನಿಗೊಳಗಾಗಿರುವ ಮೀನುಗಾರರ ದೋಣಿಗಳ ದುರಸ್ತಿಗೆ ತಗಲುವ ವೆಚ್ಚವನ್ನು ಅಂದಾಜು ಮಾಡುವಂತೆ ಸೂಚಿಸಿದ ಮುಖ್ಯಮಂತ್ರಿ, ಎಲ್ಲ ಇಲಾಖೆಗಳು ಸಮನ್ವಯ ಸಾಧಿಸಿ ರಕ್ಷಣೆ, ಪರಿಹಾರ ಮತ್ತು ಪುನಶ್ಚೇತನ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಐ.ಎಸ್.ಎನ್.ಪ್ರಸಾದ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ರಾಜ್ಯ ವಿಕೋಪ ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News