ಕಾರ್ಮಿಕ ಇಲಾಖೆಯಿಂದ ‘ಡಿಜಿಟಲ್ ಟೆಲಿ ಹೆಲ್ತ್’ ಯೋಜನೆ ಜಾರಿ

Update: 2022-08-05 15:09 GMT

ಬೆಂಗಳೂರು, ಆ.5: ಜಾಗತಿಕ ಸಾಂಕ್ರಾಮಿಕ ಕೋವಿಡ್-19 ಸಂದರ್ಭದಲ್ಲಿ ಶ್ರಮಿಕ ವರ್ಗ ಮತ್ತು ಅವರ ಕುಟುಂಬ ವರ್ಗದವರು ತುರ್ತು ಪರಿಸ್ಥಿತಿಯಲ್ಲಿ ವೈದ್ಯರನ್ನು ತಲುಪಲಾಗದೆ ಪರದಾಡಿದ ಸಂದರ್ಭ ಮರುಕಳಿಸದಂತೆ ತಡೆಯುವ ಸಲುವಾಗಿ ರಾಜ್ಯ ಕಾರ್ಮಿಕ ಇಲಾಖೆ ಮಹತ್ವದ ಹೆಜ್ಜೆ ಇರಿಸಿದ್ದು, ಶ್ರಮಿಕ ವರ್ಗಕ್ಕೆ ವೈದ್ಯಕೀಯ ಸೇವೆಗಳನ್ನು ಇನ್ನಷ್ಟು ಹತ್ತಿರವಾಗಿಸಲು ಮುಂದಡಿ ಇರಿಸಿದೆ.

ಶುಕ್ರವಾರ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಅವರು ‘ಡಿಜಿಟಲ್ ಟೆಲಿ ಹೆಲ್ತ್ ಮತ್ತು ಟೆಲಿ ಮೆಡಿಸನ್ ಸೇವೆ’ಗಳನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ಸಂಬಂಧ ರೈಲ್‍ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಜೊತೆ ವಿಕಾಸಸೌಧದಲ್ಲಿರುವ ತಮ್ಮ ಕಚೇರಿಯಲ್ಲಿ ಒಡಂಬಡಿಗೆ ಮಾಡಿಕೊಂಡರು.

ಈ ಯೋಜನೆ ಪ್ರಾಯೋಗಿಕವಾಗಿ ಬೆಂಗಳೂರಿನ ಇಂದಿರಾನಗರ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಎಂಟು ಚಿಕಿತ್ಸಾಲಯಗಳು ಮತ್ತು ಹುಬ್ಬಳ್ಳಿ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ ವ್ಯಾಪ್ತಿಯಲ್ಲಿ ಐದು ಕಾರ್ಮಿಕ ರಾಜ್ಯ ವಿಮಾ ಚಿಕಿತ್ಸಾಲಯಗಳಲ್ಲಿ ಡಿಜಿಟಲ್ ಹೆಲ್ತ್ ಸೇವೆಗಳನ್ನು ನೀಡಲಾಗುವುದು ಎಂದು ಶಿವರಾಮ್ ಹೆಬ್ಬಾರ್ ತಿಳಿಸಿದರು.

ಆರೋಗ್ಯ ತುರ್ತು ಪರಿಸ್ಥಿತಿ ಸಂದರ್ಭಗಳಲ್ಲಿ ಸಮಯ ಮತ್ತು ಪ್ರಯಾಣದ ಬವಣೆ ಪರಿಹಾರದ ಜೊತೆಗೆ ರೋಗಿಗಳಿಗೆ ತ್ವರಿತ, ಬದ್ಧ, ಶುದ್ಧ ಮತ್ತು ಸಿದ್ದಿ ಚಿಕಿತ್ಸೆ ಇದರಿಂದ ಲಭ್ಯವಾಗಲಿದ್ದು, ಇದೊಂದು ಉತ್ತಮ ಜನಸ್ನೇಹಿ ಸೇವೆ ಆಗಲಿದೆ ಎಂದ ಅವರು, ಈ ಯೋಜನೆಯಡಿ ರೋಗಿಗಳು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹತ್ತಿರದ ಚಿಕಿತ್ಸಾಲಯಗಳಿಗೆ ಭೇಟಿ ನೀಡಿ ತರಬೇತಿ ಪಡೆದ ಸಿಬ್ಬಂದಿಯ ಸಹಾಯದಿಂದ ಕೇಂದ್ರ ಸ್ಥಾನದಲ್ಲಿನ ನುರಿತ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಸಲಹೆ, ಚಿಕಿತ್ಸೆ ಮಾರ್ಗದರ್ಶನ ಪಡೆಯಬಹುದಾಗಿದೆ ಎಂದರು.

ಕಾರ್ಮಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮನೋಜ್ ಜೈನ್, ಸಚಿವರ ಆಪ್ತ ಕಾರ್ಯದರ್ಶಿ ಮಂಜುನಾಥ್ ಬಳ್ಳಾರಿ, ರೈಲ್ ಟೆಲ್ ಅಧಿಕಾರಿಗಳು, ಇಎಸ್‍ಐ ನಿರ್ದೇಶನಾಲಯದ ಡಾ.ನಾರಾಯಣ ಸ್ವಾಮಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕೋವಿಡ್-19 ಸಾಕಷ್ಟು ಬದಲಾವಣೆಗೆ ಕಾರಣವಾಗಿದೆ. 2020ರ ಸ್ವಾತಂತ್ರೋತ್ಸವದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ‘ಡಿಜಿಟಲ್ ಹೆಲ್ತ್’ ಯೋಜನೆ ಅನುಷ್ಠಾನದ ಇಂಗಿತ ವ್ಯಕ್ತಪಡಿಸಿದರು. ಮೋದಿ ಅವರ ಆಶಯದಂತೆ ರಾಜ್ಯದಲ್ಲಿ ಈ ಯೋಜನೆ ಜಾರಿಗೆ ಇಲಾಖೆ ಮುಂದಾಗಿದೆ. ಶ್ರಮಿಕ ವರ್ಗದ ಆರೋಗ್ಯ ಕಾಳಜಿ ನಮ್ಮ ಸರಕಾರದ ಆದ್ಯತೆಯಾಗಿದೆ. ಹೀಗಾಗಿ ‘ಡಿಜಿಟಲ್ ಹೆಲ್ತ್’ ಯೋಜನೆ ಜಾರಿಗೆ ಮುಂದಾಗಿದ್ದೇವೆ.

-ಶಿವರಾಮ್ ಹೆಬ್ಬಾರ್, ಕಾರ್ಮಿಕ ಸಚಿವರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News