×
Ad

ಮಲೆಮನೆ: ಅತಿವೃಷ್ಟಿ ಸಂಭವಿಸಿ 4 ವರ್ಷ ಕಳೆದರೂ ಪರಿಹಾರ, ಪುನರ್ವಸತಿ ಮರೀಚಿಕೆ

Update: 2022-08-07 23:41 IST

ಚಿಕ್ಕಮಗಳೂರು, ಆ.7: ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದಲ್ಲಿ 2019ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಜಮೀನು, ಮನೆ ಕಳೆದುಕೊಂಡು ಸಂತ್ರಸ್ತರಾಗಿರುವ ಕುಟುಂಬಗಳಿಗೆ 4 ವರ್ಷ ಕಳೆದರೂ ಪರ್ಯಾಯ ಜಮೀನು, ಮನೆ ಸೇರಿದಂತೆ ಸೂಕ್ತ ಪರಿಹಾರ ನೀಡಲು ಸರಕಾರ ಸಂಪೂರ್ಣವಾಗಿ ವಿಫಲವಾಗಿದ್ದು, ಸರಕಾರ, ಜನಪ್ರತಿನಿಧಿಗಳ ವಿರುದ್ಧ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಹಾಗೂ ಶೀಘ್ರ ಪರಿಹಾರ ನೀಡದಿದ್ದಲ್ಲಿ ಮೂಡಿಗೆರೆ ತಾಲೂಕು ಕಚೇರಿ ಎದುರು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಎಚ್ಚರಿಸಿದ್ದಾರೆ.

2019ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದಲ್ಲಿ ಭೂ ಕುಸಿತ ಉಂಟಾಗಿದ್ದು, ಗ್ರಾಮದಲ್ಲಿದ್ದ 5 ಕುಟುಂಬಗಳಿಗೆ ಸೇರಿದ್ದ ಮನೆ, ಜಮೀನು ಸಂಪೂರ್ಣವಾಗಿ ಮಣ್ಣು ಪಾಲಾಗಿದ್ದವು. ಸಂಕಷ್ಟಕ್ಕೀಡಾಗಿದ್ದ 5 ಕುಟುಂಬಗಳ ಜನರು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿ ಮನೆ, ಜಮೀನು ಕಳೆದುಕೊಂಡು ಬೀದಿಪಾಲಾಗಿದ್ದರು. ಸಂತ್ರಸ್ತರಾದ 5 ಕುಟುಂಬಗಳ ಸದಸ್ಯರು ಆರಂಭದಲ್ಲಿ ಪರಿಹಾರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದು, ನಂತರ ಸರಕಾರದ ಭರವಸೆ ಮೇರೆಗೆ ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದರು. ಅತಿವೃಷ್ಟಿ ಸಂದರ್ಭ ಅಂದಿನ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಕಂಡು ಕಣ್ಣೀರಿಟ್ಟಿದ್ದರು.

ಬಳಿಕ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಸೇರಿದಂತೆ ಹಲವು ಸಚಿವರು ಮಲೆಗ್ರಾಮಕ್ಕೆ ಭೇಟಿ ನೀಡಿ ಅತಿವೃಷ್ಟಿಯ ಭೀಕರ ದೃಶ್ಯಗಳನ್ನು ಕಂಡು ಸೂಕ್ತ ಪರಿಹಾರದ ಭರವಸೆ, ಪರ್ಯಾಯ ಜಮೀನಿನ ಭರವಸೆಯನ್ನೂ ನೀಡಿದ್ದರು. ಆದರೆ, ಅತಿವೃಷ್ಟಿ ಸಂಭವಿಸಿ ಆಗಸ್ಟ್ ತಿಂಗಳಿಗೆ ನಾಲ್ಕು ವರ್ಷಗಳು ಪೂರ್ಣಗೊಳ್ಳುತ್ತಿದ್ದರೂ ಸಂತ್ರಸ್ತ ಕುಟುಂಬಗಳಿಗೆ ಇದುವರೆಗೂ ಸೂಕ್ತ ಪರಿಹಾರ, ಮನೆ ಸೇರಿದಂತೆ ಪರ್ಯಾಯ ಜಮೀನು ಮರಿಚೀಕೆಯಾಗಿದೆ. ಮನೆ ನಿರ್ಮಾಣಕ್ಕೆ 1 ಲಕ್ಷ ರೂ. ನೀಡಿರುವುದೇ ಸರಕಾರದ ಸಾಧನೆಯಾಗಿದೆ ಎಂದು ಸಂತ್ರಸ್ತರು ಅಳಲು ತೋಡಿಕೊಂಡಿದ್ದಾರೆ.

ಸರಕಾರದ ನಿರ್ಲಕ್ಷ ಖಂಡಿಸಿ ಇತ್ತೀಚೆಗೆ ಸಂತ್ರಸ್ತರು ರಾಷ್ಟ್ರಪತಿಗೆ ಪತ್ರ ಬರೆದು ದಯಾಮರಣಕ್ಕೆ ಅವಕಾಶ ನೀಡುವಂತೆ ಆಗ್ರಹಿಸಿದ್ದರು. ಈ ವೇಳೆ ಜಿಲ್ಲಾಧಿಕಾರಿ ಹಾಗೂ ಕ್ಷೇತ್ರದ ಶಾಸಕರು ಶೀಘ್ರ ಪರಿಹಾರ, ಪುನರ್ವಸತಿ ಕಲ್ಪಿಸುವ ಭರವಸೆಯನ್ನೂ ನೀಡಿದ್ದರಿಂದ ಸಂತ್ರಸ್ತರು ಹೋರಾಟವನ್ನು ಕೈಬಿಟ್ಟಿದ್ದರು. ಆದರೆ, ಸರಕಾರ ನೀಡಿದ್ದ ಭರವಸೆ ಇನ್ನೂ ಈಡೇರದ ಹಿನ್ನೆಲೆಯಲ್ಲಿ ಸಂತ್ರಸ್ತರು ಆಕ್ರೋಶಗೊಂಡಿದ್ದಾರೆ. ಆಗಸ್ಟ್ ತಿಂಗಳಿಗೆ ಅತಿವೃಷ್ಟಿಗೆ ಮನೆ, ಜಮೀನು ಕಳೆದುಕೊಂಡು 4 ವರ್ಷ ಪೂರ್ಣಗೊಳ್ಳುವ ಹಿನ್ನೆಲೆಯಲ್ಲಿ ಸರಕಾರದ ನಿರ್ಲಕ್ಷ ಖಂಡಿಸಿ ಮೂಡಿಗೆರೆ ತಾಲೂಕು ಕಚೇರಿ ಎದುರು ಧರಣಿ ಹಮ್ಮಿಕೊಳ್ಳುವುದಾಗಿ ತಿಳಿಸಿರುವ ಸಂತ್ರಸ್ತರು, ತಾಲೂಕು ಕಚೇರಿ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ ಎಂದು ಎಚ್ಚರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News