ಸಕಲೇಶಪುರ; ಕಾಡಾನೆ ದಾಳಿಗೆ ರೈತ ಸ್ಥಳದಲ್ಲೇ ಮೃತ್ಯು
Update: 2022-08-08 11:01 GMT
ಸಕಲೇಶಪುರ: ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ಕಾಡಾನೆಯೊಂದು ದಾಳಿ ಮಾಡಿದ ಪರಿಣಾಮ ಗಂಭೀರವಾಗಿ ಗಾಯಗೊಂಡ ರೈತ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಮೇಗಲಕೇರಿಯ ಮಂಜುನಾಥ (54) ಎಂದು ಗುರುತಿಸಲಾಗಿದ್ದು, ಅವರು ಗದ್ದೆಗೆ ಹೋಗುತ್ತಿದ್ದ ವೇಳೆ ಕಾಡಾನೆಯೊಂದು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯನ್ನು ಖಂಡಿಸಿದ ಸ್ಥಳೀಯರು ಕಾಡಾನೆ ದಾಳಿಯಿಂದ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ರಸ್ತೆತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು.
ಕಾಡಾನೆ ದಾಳಿಯಿಂದ ಮೃತಪಟ್ಟ ಮಂಜುನಾಥ ಅವರ ಮನೆಗೆ ಶಾಸಕ ಎಚ್ ಕೆ ಕುಮಾರಸ್ವಾಮಿ, ಕಾಂಗ್ರೆಸ್ ಮುಖಂಡ ಡಿ ಸಿ ಸಣ್ಣಸ್ವಾಮಿ ಮುಂತಾದವರು ಭೇಟಿ ನೀಡಿದರು.
ಕಾಡಾನೆ ದಾಳಿಗೆ ಕಳೆದ ಹತ್ತು ವರ್ಷಗಳಲ್ಲಿ ಸುಮಾರು 75 ಮಂದಿ ಮೃತಪಟ್ಟಿದ್ದಾರೆ. ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಜನ ಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಸ್ಥಳೀಯರು ಆರೋಪಿಸಿದರು.