ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ‘ಸ್ವಾತಂತ್ರ್ಯದ ನಡಿಗೆ’ ಆಚರಣೆ: ಡಿ.ಕೆ.ಶಿವಕುಮಾರ್

Update: 2022-08-08 12:09 GMT

ಬೆಂಗಳೂರು, ಆ.8: ಮಹಾತ್ಮ ಗಾಂಧೀಜಿ ಅವರು ಹಾಕಿಕೊಟ್ಟ ಮಾರ್ಗದರ್ಶನ, ನಮ್ಮ ದೇಶದ ಗೌರವ, ಸ್ವಾಭಿಮಾನದ ಪ್ರತೀಕವಾಗಿರುವ ಪಾದಯಾತ್ರೆ ಮೂಲಕ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ನಷ್ಟು ದೂರ ಹೆಜ್ಜೆ ಹಾಕಿ ಸ್ವಾತಂತ್ರ್ಯ ಅಮೃತ ಮಹೋತ್ಸವವನ್ನು ಆಚರಿಸಲು ತೀರ್ಮಾನಿಸಿದ್ದೇವೆ. ಅದರ ಭಾಗವಾಗಿ ನಮ್ಮ ನಾಯಕರು ಎಲ್ಲ ಜಿಲ್ಲೆಗಳಲ್ಲಿ ಈ ಪಾದಯಾತ್ರೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸೋಮವಾರ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನಡೆದ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಿನ್ನೆಯಿಂದ ಬೆಂಗಳೂರಿನ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ, ಕಾಂಗ್ರೆಸ್ ಶಾಸಕರು ಇಲ್ಲದ ಕಡೆಗಳಲ್ಲಿ ಭೇಟಿ ನೀಡುತ್ತಿದ್ದೇನೆ. ಆ ಮೂಲಕ ನಮ್ಮ ಕಾರ್ಯಕರ್ತರಿಗೆ ಶಕ್ತಿ ತುಂಬುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

ಸರಕಾರ ಬಿಬಿಎಂಪಿ ಚುನಾವಣೆ ಮುಂದೂಡಲು ಪ್ರಯತ್ನಿಸುತ್ತಿದೆ. ಜನರಿಗೆ ಅಧಿಕಾರ ಸಿಗಬೇಕು ಎಂಬುದು ನಮ್ಮ ಉದ್ದೇಶ. ಪಾಲಿಕೆಯಲ್ಲಿ ಹೇಳುವವರು ಕೇಳುವವರು ಯಾರೂ ಇಲ್ಲದಂತಾಗಿದೆ. ಬಿಜೆಪಿ ಸರಕಾರ ಚುನಾವಣೆ ಮೀಸಲಾತಿ ಪಟ್ಟಿಯನ್ನು ತನಗೆ ಬೇಕಾದ ರೀತಿಯಲ್ಲಿ ಮಾಡಿಕೊಂಡಿದೆ ಎಂದು ಅವರು ಕಿಡಿಗಾರಿದರು.

ವಾರ್ಡ್ ಮರುವಿಂಗಡಣೆ ವಿಚಾರವಾಗಿ 3 ಸಾವಿರಕ್ಕೂ ಹೆಚ್ಚು ಆಕ್ಷೇಪಗಳು ವ್ಯಕ್ತವಾಗಿದ್ದು, ಸರಕಾರ ಯಾವುದೇ ಆಕ್ಷೇಪಕ್ಕೂ ಸ್ಪಂದಿಸುವ ಕೆಲಸ ಮಾಡಿಲ್ಲ. ಅವರು ಏನೇ ಮಾಡಲಿ, ನಾವು ಜನರ ಮೇಲೆ ವಿಶ್ವಾಸವಿಟ್ಟು ಜನರ ಮಧ್ಯೆ ಹೋಗುತ್ತೇವೆ. ಬೆಲೆ ಏರಿಕೆ ಮೂಲಕ ದಿನನಿತ್ಯ ಜನರಿಗೆ ನೋವು ನೀಡುತ್ತಿರುವ ಸರಕಾರವನ್ನು ಕಿತ್ತೊಗೆಯಲು ಹೋರಾಟ ಮಾಡುತ್ತೇವೆ ಎಂದು ಶಿವಕುಮಾರ್ ಹೇಳಿದರು. 

ಆ.15 ರಂದು ಹೊಸ ಇತಿಹಾಸ ಸೃಷ್ಟಿಯಾಗುತ್ತಿದೆ. 1 ಲಕ್ಷ ಜನ ರಾಷ್ಟ್ರಧ್ವಜ ಹಿಡಿದು ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೂ ಪಾದಯಾತ್ರೆ ಮಾಡಲಿದ್ದಾರೆ. ಇದು ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಎಲ್ಲ ವರ್ಗದ ಜನರು ಕುಟುಂಬ ಹಾಗೂ ಸ್ನೇಹಿತರ ಸಮೇತ ಭಾಗವಹಿಸಬಹುದು ಎಂದು ಅವರು ಕರೆ ನೀಡಿದರು.

ಜನರಿಗೆ ಅನುಕೂಲವಾಗುವಂತೆ ರೈಲ್ವೇ, ಬಸ್ ಹಾಗೂ ಮೆಟ್ರೋ ನಿಲ್ದಾಣದ ಬಳಿ ಇರುವ ಕೇಂದ್ರಗಳನ್ನೆ ಈ ಕಾರ್ಯಕ್ರಮಕ್ಕೆ ಆಯ್ಕೆ ಮಾಡಿಕೊಳ್ಳಲಾಗಿದೆ. ಮೆಟ್ರೋ ಪ್ರಯಾಣಿಕರಿಗೆ ಶೇ.50ರಷ್ಟು ರಿಯಾಯಿತಿ ನೀಡಬೇಕು ಎಂದು ಮುಖ್ಯಮಂತ್ರಿ ಹಾಗೂ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರ ಬಳಿ ಮನವಿ ಮಾಡುತ್ತೇನೆ ಎಂದು ಶಿವಕುಮಾರ್ ತಿಳಿಸಿದರು. 

ಪಾದಯಾತ್ರೆ ನಂತರ ಸಂಜೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಹರಿಹರನ್ ಅವರ ತಂಡದಿಂದ ದೇಶಭಕ್ತಿ ಕುರಿತ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸ್ವಾಂತಂತ್ರ್ಯದ ಶತಮಾನೋತ್ಯವಕ್ಕೆ ಯಾರು ಇರುತ್ತೇವೋ, ಇರುವುದಿಲ್ಲವೋ ಗೊತ್ತಿಲ್ಲ. ಹೀಗಾಗಿ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಬೇಕು. ಈ ಕಾರ್ಯಕ್ರಮಕ್ಕೆ ಎಐಸಿಸಿ ನಾಯಕರು ಬರುತ್ತಿದ್ದು, ಯಾರು ಬರಲಿದ್ದಾರೆ ಎಂದು ಅವರೇ ಘೋಷಣೆ ಮಾಡಲಿದ್ದಾರೆ ಎಂದು ಅವರು ಹೇಳಿದರು. 

ಅಧಿಕಾರಕ್ಕಾಗಿ ಕಾಂಗ್ರೆಸ್ ಈ ಕಾರ್ಯಕ್ರಮ ಮಾಡುತ್ತಿದೆ ಎಂಬ ಕುಮಾರಸ್ವಾಮಿ ಟೀಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ದೇಶಕ್ಕೆ ಸಂವಿಧಾನ, ರಾಷ್ಟ್ರಧ್ವಜ, ರಾಷ್ಟ್ರಗೀತೆ, ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬರುವಂತೆ ಪ್ರಜಾಪ್ರಭುತ್ವ ವ್ಯವಸ್ಥೆ ತಂದುಕೊಟ್ಟಿದ್ದೆ ಕಾಂಗ್ರೆಸ್ ಪಕ್ಷ. ಪ್ರಜಾಪ್ರಭುತ್ವ ಇಲ್ಲದಿದ್ದರೆ ಕುಮಾರಸ್ವಾಮಿ, ಯಡಿಯೂರಪ್ಪ ಹಾಗೂ ಮೋದಿ ಅಧಿಕಾರಕ್ಕೆ ಬರಲು ಹೇಗೆ ಸಾಧ್ಯವಾಗುತ್ತಿತ್ತು?’ ಎಂದು ಪ್ರಶ್ನಿಸಿದರು.

ಈಗಿನ ಯಾವುದೇ ಕಾಂಗ್ರೆಸ್ ನಾಯಕರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ, ಈಗ ಲೂಟಿ ಮಾಡುವವರು ಇದ್ದಾರೆ ಎಂದು ಕುಮಾರಸ್ವಾಮಿ ಮಾಡಿರುವ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ‘ಕುಮಾರಸ್ವಾಮಿ ಏನಾದರೂ ಹೇಳಲಿ. ನಾವು ಗಾಂಧೀಜಿ ಅವರ ಸಂಸ್ಕೃತಿ, ನೆಹರೂ ಅವರ ಸಂಪ್ರದಾಯ ಪಾಲಿಸಿಕೊಂಡು ಬರುತ್ತಿದ್ದೇವೆ. ಈ ಧ್ವಜವನ್ನು ಹಿಡಿಯಲು ನಮಗಿರುವಷ್ಟು ಹಕ್ಕು ಬೇರೆಯವರಿಗಿಲ್ಲ’ ಎಂದರು.

ಬಿಬಿಎಂಪಿ ಚುನಾವಣೆ ಮೀಸಲಾತಿ ವಿಚಾರವಾಗಿ ಹೋರಾಟ ಮಾಡುತ್ತೀರಾ ಎಂದು ಕೇಳಿದಾಗ, ‘ನಮ್ಮ ನಾಯಕರೆಲ್ಲರೂ ಸೇರಿ ನಗರಾಭಿವೃದ್ಧಿ ಕಚೇರಿಗೆ ಬಿಜೆಪಿ ಕಚೇರಿ ಎಂದು ನಾಮಫಲಕ ಹಾಕಿ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಕೆಲವರು ನ್ಯಾಯಾಲಯದ ಮೋರೆ ಹೋಗಲಿದ್ದಾರೆ. ಈ ಮೀಸಲಾತಿ ಪಟ್ಟಿ ಹೇಗೇ ಇದ್ದರೂ ಚುನಾವಣೆಗೆ ಸಿದ್ಧವಾಗಿ ಎಂದು ನಮ್ಮ ನಾಯಕರಿಗೆ ಹೇಳಿದ್ದೇನೆ. ನಮ್ಮ ಹಲವು ಪ್ರಮುಖ ನಾಯಕರೆಲ್ಲರೂ ಸ್ಥಳೀಯ ಸಂಸ್ಥೆಗಳ ಸದಸ್ಯರಾಗಿದ್ದರು. ಇದು ಸಣ್ಣ ಚುನಾವಣೆ ಅಲ್ಲ, ದೊಡ್ಡ ಚುನಾವಣೆ ನೀವು ಕೂಡ ನಾಯಕರಾಗಿ ಎಂದು ನಮ್ಮ ಪಕ್ಷದವರಿಗೆ ತಿಳಿಸಿದ್ದೇವೆ’ ಎಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News