ಧ್ವಜ ಮಾರಾಟ ಮಾಡುವ ಬಿಜೆಪಿಗರಿಗೆ ನಾಚಿಕೆಯಾಗಬೇಕು: ಡಿ.ಕೆ. ಶಿವಕುಮಾರ್
ಬೆಂಗಳೂರು, ಆ.9: ಬಿಜೆಪಿ ನಾಯಕರು ರಾಷ್ಟ್ರಧ್ವಜವನ್ನು ಇಂದು ಮಾರಾಟಕ್ಕೆ ಇಟ್ಟಿದ್ದಾರೆ. ಅವರಿಗೆ ನಾಚಿಕೆಯಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟೀಕಿಸಿದರು.
ಮಂಗಳವಾರ ನಗರದ ಕೆಪಿಸಿಸಿ ಕೇಂದ್ರ ಕಚೇರಿಯಲ್ಲಿ ಕ್ವಿಟ್ ಇಂಡಿಯಾ ಚಳವಳಿ ದಿನದ ಸ್ಮರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ನಾವು 1.5 ಲಕ್ಷ ರಾಷ್ಟ್ರಧ್ವಜ, ಟೋಪಿ, ಟಿ-ಶರ್ಟ್ಗಳನ್ನು ಉಚಿತವಾಗಿ ನೀಡುತ್ತಿದ್ದೇವೆ. ಇದೇ ಮಾದರಿಯಲ್ಲಿ ಮುಖ್ಯಮಂತ್ರಿಗಳು ಉಚಿತವಾಗಿ ನೀಡಬೇಕು ಎಂದರು.
ಈ ರಾಷ್ಟ್ರಧ್ವಜ ವ್ಯಾಪಾರದ ವಸ್ತುವಲ್ಲ. ಇದು ದೇಶದ ಸ್ವಾಭಿಮಾನ, ಐಕ್ಯತೆ ಸಂಕೇತ. ಇದನ್ನು ಮಾರಾಟ ಮಾಡಿ ರಾಷ್ಟ್ರಧ್ವಜ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಅಪಮಾನ ಮಾಡುತ್ತಿದ್ದಾರೆ ಎಂದ ಅವರು, ಉದಯಪುರದಲ್ಲಿ ಕಾಂಗ್ರೆಸ್ ನಾಯಕರೆಲ್ಲರೂ ಸೇರಿ ದೇಶದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಲು ತೀರ್ಮಾನಿಸಿದ್ದೇವೆ. ಅದರ ಭಾಗವಾಗಿ ಪ್ರತಿ ಜಿಲ್ಲೆಯಲ್ಲಿ 75 ಕಿ.ಮೀ ಪಾದಯಾತ್ರೆ ಮಾಡಲಿದ್ದೇವೆ ಎಂದು ನುಡಿದರು.