ಶಿವಮೊಗ್ಗ ಸುಬ್ಬಣ್ಣ ನಿಧನಕ್ಕೆ ಸಿಎಂ ಬೊಮ್ಮಾಯಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಸಂತಾಪ

Update: 2022-08-12 05:00 GMT
ಶಿವಮೊಗ್ಗ ಸುಬ್ಬಣ್ಣ 

ಬೆಂಗಳೂರು: ಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಂಗೀತ ಪರಂಪರೆಯ ಮನೆತನದಿಂದ ಬಂದ ಸುಬ್ಬಣ್ಣ ಅವರು ಸುಗಮ ಸಂಗೀತ  ಹಾಗೂ ಚಲನ ಚಿತ್ರ ಹಿನ್ನಲೆ ಗಾಯಕರಾಗಿ ತಮ್ಮದೇ ಛಾಪು ಮೂಡಿಸಿದ್ದರು. ಅವರ 'ಕಾಡು ಕುದುರೆ ಓಡಿ ಬಂದಿತ್ತಾ' ಗೀತೆಯು ಇಂದಿಗೂ ಅಭಿಮಾನಿಗಳು ಗುನುಗುನಿಸುವ ಹಾಡು. ಇದಕ್ಕಾಗಿ ಭಾರತ ಸರ್ಕಾರದ ರಜತ ಕಮಲ ಪ್ರಶಸ್ತಿಗೂ ಭಾಜನರಾದರು. ಸಂತ ಶಿಶುನಾಳ ಶರೀಫರ ಗೀತೆಗಳಿಗೆ ದನಿಯಾಗಿ ಅವುಗಳನ್ನು ಇನ್ನಷ್ಟು ಎತ್ತರಕ್ಕೆ ಒಯ್ದರು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಅವರ ನಿಧನದಿಂದ ಸುಗಮ ಸಂಗೀತ ಕ್ಷೇತ್ರದ ಒಬ್ಬ ಶ್ರೇಷ್ಠ ಗಾಯಕನನ್ನು ಕಳೆದುಕೊಂಡಂತಾಗಿದೆ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ. ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

''ಕನ್ನಡದ ಪ್ರಖ್ಯಾತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದಿಂದ ಸಂಗೀತ ಲೋಕ ಮತ್ತು ಕನ್ನಡಿಗರಾದ ನಾವೆಲ್ಲರೂ ಸಿರಿಕಂಠವೊಂದನ್ನು ಕಳೆದುಕೊಂಡಿದ್ದೇವೆ. ಸುಬ್ಬಣ್ಣ ಅವರು ಹಾಡುಗಳ ಮೂಲಕ ನಮ್ಮೊಳಗೆ ಸದಾ ಜೀವಂತವಾಗಿರುತ್ತಾರೆ. ಅವರ ಕುಟುಂಬ ಮತ್ತು ಅಭಿಮಾನಿಗಳ ದುಃಖ ದಲ್ಲಿ ನಾನೂ ಭಾಗಿಯಾಗಿದ್ದೇನೆ'' ಎಂದು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

'ಸುಗಮ ಸಂಗೀತ ಲೋಕದ ಅನನ್ಯ ಪ್ರತಿಭೆ, ಪ್ರಖ್ಯಾತ ಗಾಯಕರು, ತಮ್ಮ ಸುಸ್ವರದ ಮೂಲಕ ಕವಿಗೀತೆಗಳಿಗೆ ಮೆರುಗು ತಂದುಕೊಟ್ಟಿದ್ದ ಶ್ರೀ ಶಿವಮೊಗ್ಗ ಸುಬ್ಬಣ್ಣ ಅವರ ನಿಧನದ ಸುದ್ದಿ ಕೇಳಿ ಬಹಳ ದುಃಖವಾಗಿದೆ. ಕುವೆಂಪು, ಬೇಂದ್ರೆ ಸೇರಿ ಹೆಸರಾಂತ ಕವಿಗಳ ಗೀತೆಗಳಿಗೆ ಸ್ವರ ಕಟ್ಟಿದ ಸುಬ್ಬಣ್ಣ ಅವರ ಅಗಲಿಕೆ ನಾಡಿಗೆ ಬಹದೊಡ್ಡ ನಷ್ಟ'' ಎಂದು ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News