ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ: ನ್ಯಾ.ಭಕ್ತವತ್ಸಲ ಸಮಿತಿ ವರದಿ ಅಂಗೀಕರಿಸಿದ ರಾಜ್ಯ ಸರಕಾರ
ಬೆಂಗಳೂರು, ಆ. 12: ‘ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ನ್ಯಾಯಮೂರ್ತಿ ಭಕ್ತವತ್ಸಲ ಸಮಿತಿ ಸುಪ್ರೀಂ ಕೋರ್ಟ್ ನೀಡಿದ್ದ ಮಧ್ಯಂತರ ವರದಿಯನ್ನು ರಾಜ್ಯ ಸರಕಾರ ಅಂಗೀಕರಿಸಿದೆ' ಎಂದು ರಾಜ್ಯ ಸರಕಾರ ತಿಳಿಸಿದೆ.
ಶುಕ್ರವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ನ್ಯಾ.ಭಕ್ತವತ್ಸಲ ಸಮಿತಿ ವರದಿಯನ್ನು ಅಂಗೀಕರಿಸಿದ್ದು 2027-28ರಲ್ಲಿ ಹೊಸದಾಗಿ ಹಿಂ.ವರ್ಗಗಳಿಗೆ ರಾಜಕೀಯ ಮೀಸಲಾತಿ ನೀತಿ ಅನ್ವಯ ಚುನಾವಣೆ ನಡೆಸಲಾಗುವುದು. ಈ ವರ್ಷ ಹಳೆಯ ಮೀಸಲಾತಿ ಪಟ್ಟಿಯನ್ನು ಆಧರಿಸಿ ಚುನಾವಣೆ ನಡೆಸಲು ಸಂಪುಟ ತೀರ್ಮಾನ ಮಾಡಿದೆ' ಎಂದು ಕಾನೂನು ಸಚಿವ ಮಾಧುಸ್ವಾಮಿ ತಿಳಿಸಿದರು.
ಈ ವರೆಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯಲ್ಲಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಇರಲಿಲ್ಲ. ಭಕ್ತವತ್ಸಲ ವರದಿ ಅನ್ವಯ ಮೇಯರ್ ಮತ್ತು ಉಪಮೇಯರ್ ಆಯ್ಕೆಯಲ್ಲಿ ಹಿಂದುಳಿದ ವರ್ಗಗಳಿಗೆ ಅವಕಾಶ ಕಲ್ಪಿಸಲಾಗಿದೆ. ಎಸ್ಸಿ-ಎಸ್ಟಿ, ಹಿಂದುಳಿದ ವರ್ಗಗಳಿಗೆ ಶೇ.50ರಷ್ಟು ಮೀಸಲಾತಿ ಪ್ರಮಾಣ ಮೀರದಂತೆ ನೀಡಲಾಗುತ್ತದೆ. ಬೆಂಗಳೂರು ನಗರದಲ್ಲಿ ಕ್ಷೇತ್ರದ ಜನಸಂಖ್ಯೆಯನ್ನು ಆಧರಿಸಿ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಶೇ.13ರಷ್ಟು ಅನ್ವಯವಾಗಲಿದೆ.