30ಕ್ಕೂ ಹೆಚ್ಚು ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ನಿರ್ಧಾರ: ಸಚಿವ ಮಾಧುಸ್ವಾಮಿ

Update: 2022-08-12 15:14 GMT

ಬೆಂಗಳೂರು, ಆ. 12: ‘ಪ್ರತಿಭಟನೆ, ಹೋರಾಟ ಹಾಗೂ ಇನ್ನಿತರ ಸಂದರ್ಭಗಳಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ವಿರುದ್ಧ ದಾಖಲಾಗಿದ್ದ 30ಕ್ಕೂ ಹೆಚ್ಚು ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳಲು' ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ನೇತೃತ್ವದ ಸಂಪುಟ ಉಪ ಸಮಿತಿ ತೀರ್ಮಾನ ಮಾಡಿದೆ.

ಶುಕ್ರವಾರ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ‘2019ರಿಂದ ದಾಖಲಾಗಿರುವ 30ಕ್ಕೂ ಪ್ರಕರಣಗಳನ್ನು ವಾಪಸ್ ಪಡೆಯಲು ನಿರ್ಧಾರ ಮಾಡಲಾಗಿದೆ. ವಿಚಾರಣೆಯ ಅಂತಿಮ ಹಂತದಲ್ಲಿರುವ ಪ್ರಕರಣಗಳು ಇವು ಆಗಿವೆ' ಎಂದು ಸ್ಪಷ್ಟಣೆ ನೀಡಿದರು.

‘ಕೊಲೆ, ಕೊಲೆಯತ್ನ ಸಹಿತ ಕ್ರಿಮಿನಲ್ ಪ್ರಕರಣಗಳು, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು, ಪೋಸ್ಕೋ ಅಡಿಯಲ್ಲಿ ದಾಖಲಾಗಿರುವ ಪ್ರಕರಣಗಳು ಹಾಗೂ ರಾಜಕೀಯ ವ್ಯಕ್ತಿಗಳಿಗೆ ಸಂಬಂಧಿಸಿದ ಪ್ರಕರಣಗಳನ್ನು ಹೊರತುಪಡಿಸಿ ಸಂಘಟನೆಗಳ ಮೇಲೆ ಹಾಕಿರುವ ಕೇಸುಗಳನ್ನು ವಾಪಸ್ ಪಡೆದುಕೊಳ್ಳಲಾಗುವುದು. ಈ ಪ್ರಕರಣಗಳನ್ನು ಹಿಂಪಡೆದುಕೊಳ್ಳಬಾರದು ಎಂದು ಪೊಲೀಸರು ವರದಿ ನೀಡುವುದು ಸಹಜ. ಆದರೆ, ಸಾರ್ವಜನಿಕರ ಹಿತದೃಷ್ಟಿಯಿಂದ ಕೆಲ ಪ್ರಕರಣಗಳನ್ನು ವಾಪಸ್ ಪಡೆಯುವುದು ಅನಿವಾರ್ಯ' ಎಂದು ಮಾಧುಸ್ವಾಮಿ ಸಮರ್ಥಿಸಿದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಏನು ನಡೆದಿದೆ ಎಂದು ನಾನು ಹೇಳಲು ಸಾಧ್ಯವಿಲ್ಲ. ನಮ್ಮ ಅವಧಿಯಲ್ಲಿ ನಾವು ಏನು ಮಾಡುತ್ತಿದ್ದೇವೆ ಮತ್ತು ಯಾವ ಉದ್ದೇಶಕ್ಕಾಗಿ ಪ್ರಕರಣಗಳನ್ನು ಹಿಂಪಡೆಯುತ್ತಿದ್ದೇವೆ ಎಂದು ಹೇಳಬಹುದು. ಹಿಂದಿನ ಅವಧಿಯಲ್ಲಿ ಏನು ನಡೆದಿದೆ ಎಂಬುದು ನನಗೆ ಗೊತ್ತಿಲ್ಲ. ನಮ್ಮ ಅವಧಿಯಲ್ಲಿ ಸಾರ್ವಜನಿಕರ ದೃಷ್ಟಿಯಿಂದ ಪ್ರಕರಣಗಳನ್ನು ವಾಪಸ್ ಪಡೆದುಕೊಳ್ಳುತ್ತಿದ್ದೇವೆ' ಎಂದು ಮಾಧುಸ್ವಾಮಿ ಸ್ಪಷ್ಟಪಡಿಸಿದರು.

‘ಕಾನೂನು ಇಲಾಖೆ ಮಾಹಿತಿಯನ್ನು ಆಧರಿಸಿ, ಗಂಭೀರ ಸ್ವರೂಪದ ಪ್ರಕರಣಗಳನ್ನು ಹೊರತುಪಡಿಸಿ ಇನ್ನಿತರ ಪ್ರಕರಣಗಳನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಚರ್ಚಿಸಿ, ಕೇಸುಗಳನ್ನು ಹಿಂಪಡೆದುಕೊಳ್ಳಲಾಗುವುದು' ಎಂದ ಅವರು, ಪೊಲೀಸರು ಯಾರು ಕಾಂಗ್ರೆಸ್, ಯಾರು ಬಿಜೆಪಿ ಎಂದು ಹೇಳಲು ಸಾಧ್ಯವಿಲ್ಲ. ಎಲ್ಲವನ್ನು ಪರಿಶೀಲಿಸಿ ಕೇಸುಗಳನ್ನು ವಾಪಸ್ ಪಡೆದುಕೊಳ್ಳಲಾಗುವುದು' ಎಂದು ವಿವರಿಸಿದರು.

ಸುರೇಶ್ ಗೌಡ ಯಾರು?: ‘ಸಿಎಂ ಬದಲಾವಣೆ ಬಗ್ಗೆ ಮಾತನಾಡಲು ಸುರೇಶ್ ಗೌಡ ಯಾರು? ಪ್ರಧಾನಿ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರೆ ಉತ್ತರ ನೀಡಬಹುದು. ಬದಲಾವಣೆ ಮಾಡುವಂತಹ ವ್ಯಕ್ತಿ ಹೇಳಿಕೆ ನೀಡಿದ್ದರೆ ಪ್ರತಿಕ್ರಿಯೆ ನೀಡಬಹುದಿತ್ತು'

-ಜೆ.ಸಿ.ಮಾಧುಸ್ವಾಮಿ ಕಾನೂನು ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News