ಸಂಚಾರ ದಟ್ಟಣೆ ತಪ್ಪಿಸಲು ಮೆಟ್ರೋ ರೈಲ್ವೆ ಪ್ರಯಾಣಕ್ಕೆ ಉಚಿತ ವ್ಯವಸ್ಥೆ: ಡಿ.ಕೆ. ಶಿವಕುಮಾರ್

Update: 2022-08-14 12:21 GMT
ಡಿ.ಕೆ. ಶಿವಕುಮಾರ್

ಬೆಂಗಳೂರು: ‘ಇಲ್ಲಿನ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದ ವರೆಗೆ ನಾಳೆ(ಆ.15) ನಡೆಯಲಿರುವ ‘ಸ್ವಾತಂತ್ರ್ಯ ನಡಿಗೆ'ಯಲ್ಲಿ ಭಾಗವಹಿಸುವ ಹೊರ ಜಿಲ್ಲೆ ಜನರ ಅನುಕೂಲಕ್ಕೆ ಕಾಂಗ್ರೆಸ್ ಪಕ್ಷ ಬೆಂಗಳೂರು ಹೊರ ವಲಯದಲ್ಲಿ ವಾಹನ ನಿಲುಗಡೆ ಹಾಗೂ ಮೆಟ್ರೋ ರೈಲು ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾಹಿತಿ ನೀಡಿದ್ದಾರೆ.

ರವಿವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ‘ತುಮಕೂರು ರಸ್ತೆ ಮೂಲಕ ಬೆಂಗಳೂರಿಗೆ ಆಗಮಿಸುವ ಹೊರ ಜಿಲ್ಲೆಗಳ ಜನರು ಅಂತಾರಾಷ್ಟ್ರೀಯ ಎಕ್ಸಿಬಿಷನ್ ಸೆಂಟರ್ ಬಳಿ ವಾಹನ ನಿಲುಗಡೆ ಮಾಡಿ ನಾಗಸಂದ್ರ ಮೆಟ್ರೋ ಸ್ಟೇಷನ್‍ನಿಂದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲು ವ್ಯವಸ್ಥೆ ಕಲ್ಪಿಸಲಾಗಿದೆ.ಮೈಸೂರು ರಸ್ತೆ ಮೂಲಕ ಬೆಂಗಳೂರು ಪ್ರವೇಶಿಸುವ ರಾಮನಗರ (ಕನಕಪುರ ಹೊರತುಪಡಿಸಿ), ಕೊಡಗು, ಮೈಸೂರು, ಚಾಮರಾಜನಗರ ಜಿಲ್ಲೆಯ ಜನರು ಕೆಂಗೇರಿ ಬಳಿಯ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠ ಮೆಟ್ರೋ ಸ್ಟೇಷನ್‍ನಿಂದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲು ವ್ಯವಸ್ಥೆ ಮಾಡಲಾಗಿದೆ.

ಕನಕಪುರ ರಸ್ತೆ ಮಾರ್ಗವಾಗಿ ಬೆಂಗಳೂರು ಪ್ರವೇಶಿಸುವ ಕನಕಪುರ, ಮಳವಳ್ಳಿ, ಹನೂರು, ಕೊಳ್ಳೇಗಾಲ ಭಾಗದ ಜನರಿಗೆ ಕನಕಪುರ ರಸ್ತೆ ನೈಸ್ ಜಕ್ಷನ್ ಬಳಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದ್ದು, ಕೊಣನಕುಂಟೆ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬರುವ ವ್ಯವಸ್ಥೆ ಮಾಡಲಾಗಿದೆ.ಕೆ.ಆರ್.ಪುರಂ ಮಾರ್ಗವಾಗಿ ಬೆಂಗಳೂರು ಪ್ರವೇಶಿಸುವ ಕೋಲಾರ, ಹೊಸಕೋಟೆ, ಚಿಂತಾಮಣಿ ಭಾಗದ ಜನರಿಗೆ ಐಟಿಐ ಗೌಂಡ್ಸ್ ನಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದ್ದು, ಭೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಆಗಮಿಸಲು ವ್ಯವಸ್ಥೆ ಕಲ್ಪಿಸಲಾಗಿದೆ. 

ಇನ್ನು ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ದೇವನಹಳ್ಳಿ, ಯಲಹಂಕ ಮಾರ್ಗವಾಗಿ ಬೆಂಗಳೂರು ಪ್ರವೇಶಿಸುವ ಜನರಿಗೆ ಯಶವಂತಪುರದ ಸ್ಯಾಂಡಲ್ ಸೋಪ್ ಫ್ಯಾಕ್ಟರಿ ಮೆಟ್ರೋ ನಿಲ್ದಾಣದಿಂದ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣ ಬರಲು ವ್ಯವಸ್ಥೆ ಕಲ್ಪಿಸಲಾಗಿದೆ.ಹೀಗೆ ರಾಜ್ಯದ ವಿವಿಧ ಜಿಲ್ಲೆಗಳ ಜನರು ಆಯಾ ಮಾರ್ಗವಾಗಿ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣಕ್ಕೆ ಬಂದು ಸಮೀಪದಲ್ಲಿರುವ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪಾದಯಾತ್ರೆ ಸೇರಿಕೊಳ್ಳಬೇಕು ಎಂದು ಅವರು ಸೂಚಿಸಿದ್ದಾರೆ.

‘ಪಾದಯಾತ್ರೆ ಮೂಲಕ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದವರೆಗೆ ಸಾಗಿದ ನಂತರ ಅಲ್ಲಿನ ಮೆಟ್ರೋ ನಿಲ್ದಾಣದಿಂದ ತಾವುಗಳು ಬಂದ ಮೆಟ್ರೋ ನಿಲ್ದಾಣದವರೆಗೆ ವಾಪಸ್ ತೆರಳಲು ಉಚಿತ ಪಾಸ್ ವ್ಯವಸ್ಥೆ ಮಾಡಲಾಗಿದೆ.ಸಂಚಾರ ದಟ್ಟಣೆ ತಡೆಯುವ ನಿಟ್ಟಿನಲ್ಲಿ ಈ ವ್ಯವಸ್ಥೆ ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು. ನಗರದ ಜನರು ತಮ್ಮ ವಾಹನ ಬದಲಿಗೆ ಆದಷ್ಟು ಮೆಟ್ರೋ ಹಾಗೂ ಸಾರ್ವಜನಿಕ ಸಾರಿಗೆ ಬಳಸಿ ಪಾದಯಾತ್ರೆ ಆರಂಭದ ಸ್ಥಳಕ್ಕೆ ಆಗಮಿಸಬೇಕು, ಪಾದಯಾತ್ರೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮುಗಿದ ಬಳಿಕ ಅದೇ ರೀತಿ ತಮ್ಮ ಮನೆಗಳಿಗೆ ಹಿಂತಿರುಗಬೇಕು. ಇದರಿಂದ ಸಂಚಾರ ದಟ್ಟಣೆ ಸಮಸ್ಯೆ ಆಗದಂತೆ ತಡೆಯಬಹುದು' ಎಂದು ಶಿವಕುಮಾರ್ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News