ಶೀಘ್ರವೇ ಉ-ಕ ಸಂಘ ಸಂಸ್ಥೆಗಳ ಸಭೆ: ಸಿಎಂ ಬೊಮ್ಮಾಯಿ

Update: 2022-08-15 17:40 GMT

ಬೆಂಗಳೂರು, ಆ.15: ಉತ್ತರ ಕರ್ನಾಟಕ ಭಾಗದ ಜನರಿಗಾಗಿ ಬೆಂಗಳೂರು ನಗರದಲ್ಲಿ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಚರ್ಚಿಸಲು ಶೀಘ್ರವೇ ಬೆಂಗಳೂರಿನಲ್ಲಿರುವ ಉ-ಕ ಸಂಘ ಸಂಸ್ಥೆಗಳ ಸಭೆಯನ್ನು ಕರೆಯುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಉ-ಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಗೆ ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿನ ದಾಸನಪುರ ಹೋಬಳಿಯ ಕಮ್ಮಸಂದ್ರದಲ್ಲಿ 3 ಎಕರೆ 24 ಗುಂಟೆ ಜಮೀನು ಮಂಜೂರು ಮಾಡಿರುವುದಕ್ಕೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ನೂರಾರು ಪದಾಧಿಕಾರಿಗಳಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿರುವ ಉ-ಕ ಭಾಗದ ಜನರಿಗೆ ಜಮೀನು ಮಂಜೂರು ಮಾಡಿರುವುದು ಒಂದು ಭಾಗವಾಗಿದೆ. ಉತ್ತರ ಕರ್ನಾಟಕಕ್ಕೆ ಇನ್ನೂ ಸಾಕಷ್ಟು ಕೆಲಸ ಮಾಡಬೇಕಿದೆ ಎಂದರು. 

ಆ ಭಾಗದ ಜನರು ಬೆಂಗಳೂರಿಗೆ ಬಂದಾಗ ಉಳಿದುಕೊಳ್ಳಲು ಸೂಕ್ತ ವಸತಿ ವ್ಯವಸ್ಥೆ, ಬೆಂಗಳೂರಿನಲ್ಲಿರುವ ಉ-ಕ ಭಾಗದ ಜನರು ಹಬ್ಬ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸುಸಜ್ಜಿತ ಸಭಾಭವನ ಸೇರಿದಂತೆ ಎಲ್ಲ ರೀತಿಯ ಮೂಲ ಸೌಕರ್ಯಗಳನ್ನು ಕಲ್ಪಿಸಲು ಕ್ರಮ ವಹಿಸಲಾಗುವುದು. ಈ ನಿಟ್ಟಿನಲ್ಲಿ ಶೀಘ್ರವೇ ಬೆಂಗಳೂರಿನಲ್ಲಿರುವ ಉ-ಕ ಭಾಗದ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆದು ಚರ್ಚಿಸುವುದಾಗಿ ಅವರು ತಿಳಿಸಿದರು.

ಇದೇ ವೇಳೆ, ಉ-ಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮೇಟಿ ಮಾತನಾಡಿ, ಉ-ಕ ಭಾಗದ ಜನರ ಭಾವನೆಗಳಿಗೆ ಸ್ಪಂದಿಸಿ, ನಮ್ಮ ಬೇಡಿಕೆಯನ್ನು ಈಡೇರಿಸಿ ಜಮೀನು ಮಂಜೂರು ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕದ ಎಲ್ಲ ಸಂಘ ಸಂಸ್ಥೆಗಳ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು. 

ಈ ಸಂದರ್ಭದಲ್ಲಿ ಉ-ಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಉಪಾಧ್ಯಕ್ಷ ಬಸವರಾಜ ಬೀಳೂರು, ಮಹಾ ಸಂಸ್ಥೆಯ ನಿರ್ದೇಶಕರುಗಳಾದ ವಿ.ಎಸ್.ನೆಗಳೂರು, ಗಂಗಾಧರ ವಾಲಿ, ಗುರುಲಿಂಗಸ್ವಾಮಿ ಹೊಳಿಮಠ, ಶ್ರೀಧರ ಕಲ್ಲೂರ, ಅಯ್ಯನಗೌಡ ಬಿರಾದಾರ, ಲಿಂಗನಗೌಡ ಗೌಡರ, ಮಾರುತಿ ತೋಟದ, ಶಂಕರ ಪಾಗೋಜಿ ಹಾಗೂ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಂಗ ಸಂಸ್ಥೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News