ಆ.20ರಿಂದ ದೇವರಾಜ ಅರಸು ಉತ್ಸವ; ಹಿಂದುಳಿದ ವರ್ಗಗಳ ಕುಲಕಸುಬು ಆಧಾರಿತ ಪ್ರದರ್ಶನ,ಮಾರಾಟ:ಸಚಿವ ಕೋಟ ಶ್ರೀನಿವಾಸ ಪೂಜಾರಿ

Update: 2022-08-16 11:35 GMT

ಮಂಗಳೂರು, ಆ.16: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ರಾಜ್ಯ ಮಟ್ಟದಲ್ಲಿ ದೇವರಾಜ ಅರಸು ಜನ್ಮ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭದ ಮಾದರಿಯಲ್ಲೇ ಜಿಲ್ಲಾ ಮಟ್ಟದಲ್ಲಿಯೂ ಆ. 20ರಿಂದ 23ರವರೆಗೆ ಮೂರು ದಿನಗಳ ಅರಸು ಉತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವರು, ಆ. 20ರಂದು ನಗರದ ಪುರಭವನದಲ್ಲಿ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ ಎಂದರು.

ರಾಜ್ಯ ಮಟ್ಟದಲ್ಲಿ ವಿಧಾನಸೌಧದ ಬ್ಯಾಕ್ವೆಂಟ್ ಸಭಾಂಗಣದಲ್ಲಿ ಮುಖ್ಯಮಂತ್ರಿಯವರಿಂದ ಸಮಾರಂಭ ನಡೆಯಲಿದೆ. ಇದೇ ವೇಳೆ ರಾಜ್ಯದ ಇತರ 30 ಜಿಲ್ಲೆಗಳಲ್ಲಿಯೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪ್ರತಿ ಜಿಲ್ಲೆಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತದ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ದ.ಕ. ಜಿಲ್ಲೆಯಲ್ಲಿ ನಡೆಯಲಿರುವ ಮೂರು ದಿನಗಳ ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗಗಳ ಕುಲಕಸುಬುಗಳ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ.

ಪುರಭವನದಲ್ಲಿ 20 ಮಳಿಗೆಗಳು ಈ ನಿಟ್ಟಿನಲ್ಲಿ ತೆರೆಯಲಾಗುವುದು. ದೇವರಾಜ ಅರಸು ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಸಾಧಕರೊಬ್ಬರನ್ನು ಸಮಿತಿ ಆಯ್ಕೆ ಮಾಡಲಿದೆ. ಅವರಿಗೆ ಆ. 22ರಂದು ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಜಿಲ್ಲಾ ಮಟ್ಟದ ಅರಸು ಪ್ರಶಸ್ತಿ ಪ್ರದಾನ ಮಾಡಲಾಗುವುದು. ಆ. 20ರಂದು ಕಾರ್ಯಕ್ರಮ ಉದ್ಘಾಟನಾ ಸಮಾರಂಭದ ಬಳಿಕ ಪ್ರದರ್ಶನ ಮಾರಾಟದ ಜತೆಗೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದು ಆ. 21ರಂದು ಮುಂದುವರಿಯಲಿದೆ. ಆ. 22ರಂದು ಸಮಾರೋಪ ಸಮಾರಂಭದಲ್ಲಿ ಈಗಾಗಲೇ ಜಿಲ್ಲೆಯ ಶಾಲೆ, ವಸತಿ ಶಾಲೆಗಳಲ್ಲಿ ದೇವರಾಜ ಅರಸು ಹೆಸರಿನಲ್ಲಿ ನಡೆಸಲಾಗುವ ಚಿತ್ರಕಲೆ, ಪ್ರಬಂಧ ಹಾಗೂ ಭಾಷಣ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿದ್ದು, ಕಾರ್ಯಕ್ರಮ ಪಕ್ಷಾತೀತವಾಗಿರಲಿದೆ ಎಂದರು.

ಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ ಉಪಸ್ತಿತರಿದ್ದರು.

 2 ವರ್ಷಗಳಲ್ಲಿ ಹಾಸ್ಟೆಲ್‌ಗಳ ಕೊರತೆ ನಿವಾರಣೆ

ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳಿಗೆ ಸಂಬಂಧಿಸಿ 1,20,000 ಮಕ್ಕಳು ಬೇಡಿಕೆ ಸಲ್ಲಿಸಿ ಕಾಯುತ್ತಿದ್ದಾರೆ. ಈಗಾಗಲೇ ವಿದ್ಯಾಸಿರಿ ಯೋಜನೆಯಡಿ ಮಕ್ಕಳಿಗೆ ಪೂರಕ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿ ನಿಲಯಗಳ ಕಟ್ಟಡ ಕೊರತೆ ನೀಗಿಸಲು ರಾಜ್ಯ ಸರಕಾರದಿಂದ ಈಗಾಹಗಲೇ ತಲಾ 3.5 ಕೋಟಿರೂ. ವೆಚ್ಚದಲ್ಲಿ 50 ಕನಕದಾಸ ಹಾಸ್ಟೆಲ್ ನಿರ್ಮಾಣಕ್ಕೆ ಕ್ರಮ ವಹಿಸಲಾಗಿದೆ. ಇದರೊಂದಿಗೆ ಮುಂದಿನ ಎರಡು ವರ್ಷಗಳಲ್ಲಿ ಹಾಸ್ಟೆಲ್ ಕೊರತೆಯನ್ನು ಸಂಪೂರ್ಣವಾಗಿ ನೀಗಿಸಲು ಸರಕಾರದಿಂದ ಕ್ರಮ ವಹಿಸಲಾಗುವುದು. ಕೊರೋನ ಕಾರಣದಿಂದ ಕಳೆದ ಎರಡು ವರ್ಷಗಳಿಂದ ತಡೆ ಹಿಡಿಯಲ್ಪಟ್ಟಿದ್ದ, ನೆನೆಗುದಿಗೆ ಬಿದ್ದಿದ್ದ ಹಿಂದುಳಿದ ವರ್ಗಗಳಿಗೆ ಇಲಾಖೆಯಿಂದ ಸಿಗುತ್ತಿದ್ದ ಹಲವಾರು ಯೋಜನೆಗಳನ್ನು ಪುನರಾರಂಭಗೊಳಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News