60 ವರ್ಷ ತುಂಬಿದ ನೌಕರರನ್ನು ಕೆಲಸದಿಂದ ಬಿಡುಗಡೆ: ಸರ್ಕಾರದ ಆದೇಶದ ವಿರುದ್ಧ ನೌಕರರ ಧರಣಿ

Update: 2022-08-16 12:23 GMT

ಬೆಂಗಳೂರು, ಆ.16: ಅಕ್ಷರ ದಾಸೋಹ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ 60 ವರ್ಷ ತುಂಬಿದ ನೌಕರರನ್ನು ಸರಕಾರ ಸೂಕ್ತ ರೀತಿಯಲ್ಲಿ ಆರ್ಥಿಕ ಭದ್ರತೆ ನೀಡಿ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿ ನೌಕರರು ಧರಣಿ ನಡೆಸಿದರು.

ಮಂಗಳವಾರ ನಗರದ ಫ್ರೀಡಂ ಪಾರ್ಕಿನ ಮೈದಾನದಲ್ಲಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ(ಸಿಐಟಿಯು) ನೇತೃತ್ವದಲ್ಲಿ ಜಮಾಯಿಸಿದ ಮಹಿಳಾ ನೌಕರರು, 60 ವರ್ಷ ವಯಸ್ಸು ಆಗಿದೆ ಎಂದು ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಅವರಿಗೆ ನಿವೃತ್ತಿ ವೇತನ ಅಥವಾ ಇಡಿಗಂಟು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಬಿಸಿಯೂಟದ ಕಾರ್ಯಕ್ರಮ 2002-03ನೆ ಸಾಲಿನಲ್ಲಿ ಅನುಷ್ಠಾನಗೊಂಡಿದೆ. ಅಂದಿನಿಂದಲೂ ಯಾವುದೇ ವಯಸ್ಸಿನ ನಿರ್ಬಂಧ ಇಲ್ಲದೆ ಅಡುಗೆ ಸಿಬ್ಬಂದಿ ಕನಿಷ್ಠ ಗೌರವಧನ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.ಆದರೆ, ಸರಕಾರ ಮಾ.5 ರಂದು 60 ವರ್ಷ ದಾಟಿದ ಸಿಬ್ಬಂದಿಯನ್ನು ಸೇವೆಯಿಂದ ಬಿಡುಗಡೆಗೊಳಿಸಲು ಆದೇಶ ಹೊರಡಿಸಿತ್ತು. ಆದೇಶದಂತೆ ಇದೀಗ ಅಮಾನವೀಯವಾಗಿ ಮನೆಗೆ ಕಳುಹಿಸುತ್ತಿದ್ದಾರೆ ಎಂದು ಅಳಲು ತೋಡಿಕೊಂಡರು.

ಪ್ರಾಥಮಿಕ ಶಾಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬಿಸಿಯೂಟ ನಂತರ ಪ್ರೌಢಶಾಲೆಗಳಿಗೂ ವಿಸ್ತರಿಸಲಾಯಿತು. ಸುಮಾರು 20 ವರ್ಷಗಳಿಂದ ಅಡುಗೆ ಕೆಲಸ ಮಾಡುತ್ತಿದ್ದರೂ ಯಾವುದೇ ಸೌಲಭ್ಯಗಳಿಲ್ಲ. 60 ವರ್ಷ ದಾಟಿದವರು ಪಿಂಚಣಿ ಅಥವಾ ಇಡಗಂಟು ಹಣ ಇಲ್ಲದೆ ಬರಿಗೈಲಿ ಮನೆಗೆ ಮರಳುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕೆಲಸದಿಂದ ಬಿಡುಗಡೆಗೊಳಿಸುವಾಗ ಇಂತಿಷ್ಟು ಎಂದು ಗೌರವ ಮೊತ್ತ ನೀಡಬೇಕು. ಪ್ರಮುಖವಾಗಿ 1 ಲಕ್ಷ ರೂ.ನೀಡಬೇಕು. ಅಕ್ಷರದಾಸೋಹ ನೌಕರರಿಗೆ ಸೇವಾ ಭದ್ರತೆ ನೀಡಬೇಕು. ಕನಿಷ್ಠ ವೇತನ, ಪಿಂಚಣಿ, ಗ್ರಾಚ್ಯುಟಿ ನೀಡಬೇಕು ಎಂದು ಇದೇ ವೇಳೆ ನೌಕರರು ಆಗ್ರಹಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸಂಘದ ಅಧ್ಯಕ್ಷೆ ವರಲಕ್ಷ್ಮೀ, 60 ವರ್ಷ ವಯಸ್ಸು ಆಗಿದೆ ಎಂದು ಬಿಸಿಯೂಟ ನೌಕರರನ್ನು ಕೆಲಸದಿಂದ ಬಿಡುಗಡೆ ಮಾಡಲಾಗಿದೆ. ಅವರಿಗೆ ನಿವೃತ್ತಿ ವೇತನ ಅಥವಾ ಇಡಿಗಂಟು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News