ದೇವರಾಜ ಅರಸು ಜನ್ಮ ದಿನ ಅರ್ಥ ಪೂರ್ಣವಾಗಿ ಆಚರಣೆ: ಸಚಿವ ಕೋಟ

Update: 2022-08-16 15:44 GMT

ಉಡುಪಿ: ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ೧೦೭ನ ಜನ್ಮ ದಿನಾಚರಣೆಯನ್ನು ಅರ್ಥಪೂರ್ಣ ವಾಗಿ ಆ.20ರಿಂದ 22ರವರೆಗೆ 3 ದಿನಗಳ ಕಾಲ ಅಜ್ಜರಕಾಡಿನ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಚರಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಇಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಡಿ.ದೇವರಾಜ ಅರಸು ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಹಿಂದುಳಿದ ವರ್ಗದವರ ಕಲ್ಯಾಣಾಭಿವೃದ್ಧಿಗೆ ದೇವರಾಜ ಅರಸು ಅವರ ಕೊಡುಗೆ ಅಪಾರವಾದುದು. ಅವರು ಅನುಷ್ಠಾನಗೊಳಿಸಿದ ಯೋಜನೆಗಳಿಂದ ಆ ವರ್ಗದಜನರಿಗೆ ಹೆಚ್ಚಿನ ಅನುಕೂಲವಾಗಿದೆ. ಅವರ ಸ್ಮರಣೆ ಶಾಶ್ವತವಾದುದು ಎಂದರು.

ಆ.20ರಂದು ಮಹಾತ್ಮಗಾಂಧೀ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಮಧ್ಯಾಹ್ನ ೩.೩೦ಕ್ಕೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಜಿಲ್ಲಾ ಮಟ್ಟದ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಮಾಡಲಿರುವರು. ಕಾರ್ಯ ಕ್ರಮದಲ್ಲಿ ದೇವರಾಜ ಅರಸು ಅವರ ಕುರಿತು ಉಪನ್ಯಾಸ ಕಾರ್ಯಕ್ರಮ  ಸಹ ನಡೆಯಲಿದೆ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಹಿಂದುಳಿದ ವರ್ಗಗಳ ಸಮುದಾಯಗಳ ಕಸಬು ಗಾರಿಕೆಯ ಕರಕುಶಲ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳ ಉದ್ಘಾಟನೆ ನಡೆಯಲಿದೆ. ಆ.೨೧ರಂದು ಬೆಳಗ್ಗೆ ೧೦ ಗಂಟೆಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್ ೨೨ ರಂದು ಬೆಳಗ್ಗೆ ೧೦ ಗಂಟೆಗೆಮೊರಾರ್ಜಿದೇಸಾಯಿ ವಸತಿ ಶಾಲಾ ವಿದ್ಯಾರ್ಥಿಗಳಿಂದ ಕರಾಟೆ ಹಾಗೂ ಯೋಗ ಪ್ರದರ್ಶನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಾಯೋಕತ್ವದಲ್ಲಿಜಿಲ್ಲೆಯ ಸುಪ್ರಸಿದ್ಧ ಯಕ್ಷಗಾನ ಕಲಾವಿದರಿಂದ ಯಕ್ಷಕೂಟ ಕಾರ್ಯಕ್ರಮ ನಡೆಯಲಿದೆ. ಮಧ್ಯಾಹ್ನ೨.೩೦ಕ್ಕೆ ಡಿ. ದೇವರಾಜ ಅರಸು ಜನ್ಮ ದಿನಾಚರಣೆಯ ಸಮಾರೋಪ ಸಮಾರಂಭ ನಡೆಯಲಿದೆ.

ಜನ್ಮ ದಿನಾಚರಣೆಯ ಅಂಗವಾಗಿ ಹಾಸ್ಟೆಲ್ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು  ಏರ್ಪಡಿಸಲಾಗಿದ್ದು, ವಿಜೇತರಿಗೆ ಸಮಾರೋಪದಲ್ಲಿ ಬಹುಮಾನ ವಿತರಿಸಲಾಗುವುದು ಎಂದರು. ಸಭೆಯಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿ.ಪಂ. ಸಿಇಓ ಪ್ರಸನ್ನ ಎಚ್., ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಸಚಿನ್‌ಕುಮಾರ್, ವಾರ್ತಾಧಿಕಾರಿ ಬಿ.ಮಂಜುನಾಥ್, ವಿವಿಧ ಹಿಂದುಳಿದ ವರ್ಗಗಳ ಮುಖಂಡರು ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News