ಗುರುತಿನ ಚೀಟಿಗೆ ಆಧಾರ್ ಲಿಂಕ್ ಪ್ರಕ್ರಿಯೆಗೆ ಚುರುಕು ನೀಡಲು ದ.ಕ.ಡಿಸಿ ಡಾ.ರಾಜೇಂದ್ರ ಸೂಚನೆ

Update: 2022-08-17 14:58 GMT

ಮಂಗಳೂರು : ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣಾ ಗುರುತಿನ ಚೀಟಿ (ಎಪಿಕ್)ಗೆ ಆಧಾರ್ ಲಿಂಕ್ ಮಾಡುವ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಇಲಾಖೆಗಳು ಕೂಡಲೇ ಕಾರ್ಯಪ್ರವೃತ್ತರಾಗುವಂತೆ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಸೂಚಿಸಿದ್ದಾರೆ.

ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಬುಧವಾರ ವೀಡಿಯೊ ಸಂವಾದ ನಡೆಸಿ ಅವರು ಮಾತನಾಡಿದರು.

ಸರಕಾರದ ಎಲ್ಲಾ ಇಲಾಖೆಗಳ ಮುಖ್ಯಸ್ಥರು ಎಪಿಕ್ ಕಾರ್ಡ್‌ಗೆ ಆಧಾರ್ ಅಥವಾ ಅದನ್ನು ಹೊರತು ಪಡಿಸಿ ನಿಗದಿಪಡಿಸಿದ ನರೇಗಾ ಜಾಬ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿಯ ಪಾಸ್‌ಬುಕ್, ಆರೋಗ್ಯ ವಿಮೆ, ಚಾಲನಾ ಪರವಾನಗಿ, ಪಾನ್‌ಕಾರ್ಡ್, ಎನ್‌ಪಿಆರ್‌ನಡಿ ನೀಡಲಾದ ಸ್ಮಾರ್ಟ್‌ಕಾರ್ಡ್, ಪಾಸ್‌ಪೋರ್ಟ್, ಪಿಂಚಣಿ ದಾಖಲಾತಿಗಳು, ಕೇಂದ್ರ ಅಥವಾ ರಾಜ್ಯ ಸರಕಾರ ಅಥವಾ ಸಾರ್ವಜನಿಕ ವಲಯದಲ್ಲಿ ಸೇವೆ ಸಲ್ಲಿಸಿದ ನೌಕರರ ಗುರುತಿನ ಚೀಟಿ, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ನೀಡಿದ ಅಧಿಕೃತ ಗುರುತಿನ ಚೀಟಿ ಸಹಿತ 11 ದಾಖಲಾತಿಗಳಲ್ಲಿ ಯಾವುದಾದರು ಒಂದನ್ನು ಜೋಡಿಸಬೇಕು ಎಂದರು.

ಈ ಪ್ರಕ್ರಿಯೆಯ ಬಗ್ಗೆ ಇಲಾಖೆಗಳ ಅಧಿಕಾರಿಗಳು ಸಿಬ್ಬಂದಿಗೆ ಕಚೇರಿಗಳಲ್ಲಿ ಪ್ರಾತ್ಯಕ್ಷಿಕ ಹಮ್ಮಿಕೊಳ್ಳಬೇಕು, ಸಿಬ್ಬಂದಿಗಳ ಸಮ್ಮುಖ ಅಧಿಕಾರಿಗಳು ತಮ್ಮ ಎಪಿಕ್ ಕಾರ್ಡ್‌ಗೆ ಆಧಾರನ್ನು ಲಿಂಕ್ ಮಾಡಬೇಕು. ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗವು ಈ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳಬೇಕು. ಇಲ್ಲದಿದ್ದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿ ಎಚ್ಚರಿಕೆ ನೀಡಿದರು.

ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತರಾದ ಮದನ್ ಮೋಹನ್, ಗಿರೀಶ್ ನಂದನ್, ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

*ದ.ಕ.ಜಿಪಂ ಸಿಇಒ ಡಾ.ಕುಮಾರ್ ಮಾತನಾಡಿ ಆ.21ರ ಬೆಳಗ್ಗೆ 10ರಿಂದ ಸಂಜೆ 5ರವರೆಗೆ ಎಲ್ಲಾ ಬಿಎಲ್‌ಒಗಳು ಮತಗಟ್ಟೆಯಲ್ಲಿ ಹಾಜರಿದ್ದು, ಮತಗಟ್ಟೆ ಅಧಿಕಾರಿಗಳು, ಮೇಲ್ವಿಚಾರಕರು, ಮತಗಟ್ಟೆ ಏಜೆಂಟ್‌ರೊಂದಿಗೆ 6ಬಿ ಸಂಬಂಧಿಸಿದಂತೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ಎಪಿಕ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡುವ ಮಿಂಚಿನ ನೋಂದಣಿ ಅಭಿಯಾನ ಹಮ್ಮಿಕೊಳ್ಳಲು ಸೂಚಿಸಿದರು.

*ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರೆ

ಮತದಾರರ ಪಟ್ಟಿಯಲ್ಲಿರುವ ಮತದಾರರನ್ನು ದೃಢೀಕರಿಸಲು ಸ್ವಯಂ ಪ್ರೇರಿತ ಆಧಾರದ ಮೇಲೆ ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಆನ್‌ಲೈನ್‌ನಲ್ಲಿ 6ಬಿ ನಮೂನೆ ಸಲ್ಲಿಸಿ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಜೋಡಣೆ ಮಾಡಲು ಕ್ರಮ ವಹಿಸುವಂತೆ ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ..ವಿ. ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಕರೆ ನೀಡಿದ್ದಾರೆ.

ಎಲ್ಲಾ ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೆ ಬಿಎಲ್‌ಎ (ಮತಗಟ್ಟೆ ಏಜೆಂಟ್) ನೇಮಕ ಮಾಡಬೇಕು, ಬಿಎಲ್‌ಎಗಳು ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು, ಒಂದು ವೇಳೆ ಪಟ್ಟಿಯಲ್ಲಿರುವ ಮತದಾರರು ಮೃತರಾಗಿದ್ದರೆ ಅಥವಾ ವಲಸ ಹೋಗಿದ್ದರೆ ಅಂತಹವರ ಮಾಹಿತಿಯನ್ನು ಬಿಎಲ್‌ಒಗಳಿಗೆ ನೀಡಬೇಕು, 18 ವರ್ಷ ಮೇಲ್ಪಟ್ಟ ಅರ್ಹ ಮತದಾರರು ಮತದಾರರ ಪಟ್ಟಿಗೆ ಸೇಪರ್ಡೆಯಾಗಿರುವ ಬಗ್ಗೆ ಪರಿಶೀಲಿಸಬೇಕು, ಮತದಾರರ ಪಟ್ಟಿಯಲ್ಲಿ ಒಂದೇ ಕುಟುಂಬದ ಸದ್ಯಸರ ಹೆಸರು ಒಂದೇ ಕಡೆ ಬರುವಂತೆ ನೋಡಿಕೊಳ್ಳಬೇಕು, ಈ ಬಗ್ಗೆ ಸಮಸ್ಯೆಗಳಿದ್ದರೆ ರಾಜಕೀಯ ಪಕ್ಷದಿಂದ ನೇಮಕವಾಗಿರುವ ಬಿಎಲ್‌ಎಗಳು ಬೂತ್ ಮಟ್ಟದ ಅಧಿಕಾರಿಗಳ ಸಮನ್ವಯದೊಂದಿಗೆ ಸರಿಪಡಿಸಿಕೊಳ್ಳಬೇಕು. ಎಲ್ಲಾ ಬಿಎಲ್‌ಎಗಳು ತಮ್ಮ ವ್ಯಾಪ್ತಿಗೆ ಬರುವ ಅರ್ಹ ವಿಕಲಚೇತನವನ್ನು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಬಗ್ಗೆ ಕ್ರಮ ವಹಿಸಬೇಕು. ಎಲ್ಲಾ ಮತದಾರರಿಗೆ ಎಪಿಕ್ ಕಾರ್ಡ್ ನೀಡಿರುವ ಬಗ್ಗೆ ಖಚಿತಪಡಿಸಿಕೊಳ್ಳಬೇಕು. ತೃತೀಯ ಲಿಂಗದ ಮತದಾರರು ಮತದಾರರ ಪಟ್ಟಿಗೆ ಸೇರ್ಪಡೆಯಾಗಿರುವ ಬಗ್ಗೆ ಪರಿಶೀಲಿಸಿಕೊಳ್ಳಬೇಕು. ಮತಗಟ್ಟೆಗಳಿರುವ ಕಟ್ಟಡಗಳು ಶಿಥಿಲಗೊಂಡಿದ್ದರೆ ಅಥವಾ ಅಪಾಯಕಾರಿ ಹಂತದಲ್ಲಿದ್ದರೆ ಆ ಬಗ್ಗೆ ವರದಿ ನೀಡಬೇಕು ಎಂದು ಜಿಲ್ಲಾಧಿಕಾರಿ ಸೂಚಿಸಿದರು.

300ಕ್ಕಿಂತ ಕಡಿಮೆ ಮತದಾರರಿರುವ ಮತಗಟ್ಟೆಗಳಿದ್ದಲ್ಲಿ ಅಂತಹ ಮತಗಟ್ಟೆಗಳನ್ನು ಹತ್ತಿರದ ಮತಗಟ್ಟೆಗೆ ವಿಲೀನ ಮಾಡುವ ಬಗ್ಗೆ ಮತ್ತು 1500ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳಿದ್ದಲ್ಲಿ ಅಂತಹ ಮತಗಟ್ಟೆಗಳನ್ನು ವಿಭಜನೆ ಮಾಡುವ ಬಗ್ಗೆ ಪ್ರಸ್ತಾವನೆಗಳಿದ್ದಲ್ಲಿ ತಹಶೀಲ್ದಾರ್ ಮುಖಾಂತರ ವರದಿ ಸಲ್ಲಿಸುವಂತೆ ಡಿಸಿ ಹೇಳಿದರು.

ಜಿಲ್ಲೆಯ ಪ್ರತಿಯೊಂದು ಕಾಲೇಜಿನಲ್ಲೂ ಕ್ಯಾಂಪಸ್ ಅಂಬಾಸಿಡರ್ ನೇಮಕ ಮಾಡಬೇಕು. ಅವರ ಮೂಲಕ ಎಲ್ಲಾ ವಿದ್ಯಾರ್ಥಿಗಳಿಗೆ ಮುಂಚಿತವಾಗಿ ಅವರ ಹಾಗೂ ಅವರ ಕುಟುಂಬದವರ ಆಧಾರ್ ಹಾಗೂ ಗುರುತಿನ ಚೀಟಿ ತರುವಂತೆ ತಿಳಿಸಿ, ಕಾಲೇಜು ಹಂತದಲ್ಲಿಯೇ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ವೋಟರ್ ಹೆಲ್ಪ್‌ಲೈನ್ ಆ್ಯಪ್ ಮೂಲಕ ಜೋಡಣೆ ಮಾಡಿಸಲು ಕ್ರಮ ಜರಗಿಸುವಂತೆ ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚಿಸಿದರು.

ಮತದಾರರು ವೋಟರ್ ಹೆಲ್ಪ್‌ಲೈನ್ ಆ್ಯಪ್ (Voter Helpline App) ನಲ್ಲಿ ಆನ್‌ಲೈನ್ ಮೂಲಕ 6ಬಿ ನಮೂನೆಯನ್ನು ಸಲ್ಲಿಸಿ ಆಧಾರ್ ಸಂಖ್ಯೆಯನ್ನು ಚುನಾವಣಾ ಗುರುತಿನ ಚೀಟಿಗೆ ಲಿಂಕ್ ಮಾಡಬಹುದಾಗಿದೆ ಎಂದು ಡಿಸಿ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News