ACB ರದ್ದು ವಿಚಾರ; ಸರ್ಕಾರದಿಂದ ಸುಪ್ರೀಂ ಮೊರೆ ಹೋಗುವುದಿಲ್ಲ: ಸಿಎಂ ಬೊಮ್ಮಾಯಿ

Update: 2022-08-23 14:41 GMT

ಬೆಂಗಳೂರು, ಆ.22: ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ವಿಚಾರವಾಗಿ ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ಖಾಸಗಿ ವ್ಯಕ್ತಿಯೊಬ್ಬರು ಸುಪ್ರೀಂಕೋರ್ಟ್‍ಗೆ ಸಲ್ಲಿಸಿರುವ ಮೇಲ್ಮನವಿಗೂ, ಸರಕಾರಕ್ಕೂ ಯಾವುದೆ ಸಂಬಂಧವಿಲ್ಲ ಎಂದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಮಂಗಳವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತಮ್ಮಶೆಟ್ಟಿಹಳ್ಳಿಯಲ್ಲಿ ಹಿಟಾಚಿ ಎನರ್ಜಿ ಇಂಡಿಯಾ ವತಿಯಿಂದ ಆಯೋಜಿಸಿದ್ದ ‘ಪವರ್ ಕ್ವಾಲಿಟಿ ಫ್ಯಾಕ್ಟರಿ’ಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಉತ್ತರಿಸಿದರು.

ನಮ್ಮ ನಿಲುವು ಬಹಳ ಸ್ಪಷ್ಟವಾಗಿದೆ. ವರಿಷ್ಠರು ಆದೇಶ ನೀಡಿದ್ದಾರೆ ಹಾಗೂಅದೇ ನಮ್ಮ ಪ್ರಣಾಳಿಕೆಯಲ್ಲಿಯೂ ಇದೆ. ನಾವು ಅದೇ ನಿಲುವಿಗೆ ಬದ್ಧರಾಗಿದ್ದೇವೆ. ಉಚ್ಚ ನ್ಯಾಯಾಲಯದ ಆದೇಶವನ್ನು ಹೇಗೆ ಅನುಷ್ಠಾನಕ್ಕೆ ತರಬೇಕೆಂಬ ಪ್ರಕ್ರಿಯೆ ಈಗಾಗಲೇ ನಡೆದಿದೆ. ಹೀಗಾಗಿ ನಾವು ಮೇಲ್ಮನವಿ ಸಲ್ಲಿಸುವ ಪ್ರಶ್ನೆಯೇ ಇಲ್ಲ. ಮೇಲ್ಮನವಿ ಸಲ್ಲಿಸಬಾರದೆಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ ಎಂದು ಅವರು ಹೇಳಿದರು. 

ನಾನು ಹೋರಾಟ ಮಾಡುವಾಗಲೆಲ್ಲಾ ಪ್ರತಿ ಸಾರಿ ಬಿಜೆಪಿ ಒಂದಲ್ಲ ಒಂದು ರೀತಿ ತಪ್ಪಿಸಲು ಪ್ರಯತ್ನ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಸಿದ್ದರಾಮಯ್ಯ ಗೊಂದಲದಲ್ಲಿದ್ದಾರೆ. ಎಲ್ಲ ಗೊಂದಲಗಳೂ ಅವರ ಹೇಳಿಕೆಯಿಂದಲೇ ಪ್ರಾರಂಭವಾಗಿದೆ. ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಚಿತ್ರ ಯಾಕೆ ಎಂದು ನಾವು ಹೇಳಿದ್ದೇವಾ? ಹಲವಾರು ಗೊಂದಲಗಳನ್ನು ಅವರು ಸೃಷ್ಟಿ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ನಾವು ಜವಾಬ್ದಾರರಲ್ಲ ಎಂದರು. 

ನನ್ನ ಮೇಲೆ ಕೇವಲ ಮೊಟ್ಟೆ ದಾಳಿಯಾಗಲಿಲ್ಲ, ಕಲ್ಲು ದಾಳಿಯೂ ಆಗಿತ್ತು ಎಂದು ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅದೆಲ್ಲವೂ ಶುದ್ಧ ಸುಳ್ಳು. ಈಗಾಗಲೇ ತನಿಖೆಗೆ ಆದೇಶ ನೀಡಿದ್ದು, ರಕ್ಷಣೆಯನ್ನೂ ನೀಡಲಾಗಿದೆ. ಆ ಸ್ಥಾನದ ಬಗ್ಗೆ ಇರುವ ಗೌರವದ ಬಗ್ಗೆ ಈಗಾಗಲೇ ಹೇಳಿದ್ದೇನೆ. ನಮ್ಮ ಸರಕಾರಕ್ಕೆ ಈ ಕೆಲಸ ಮಾಡುವ ಅವಶ್ಯಕತೆ ಇಲ್ಲ ಎಂದರು. 

ದೇವನಹಳ್ಳಿಯನ್ನು ಜಿಲ್ಲಾ ಕೇಂದ್ರ ಮಾಡುವ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಮಾಡಿರುವ ಘೋಷಣೆ ಬಗ್ಗೆ ಮಾಹಿತಿ ಪಡೆದು, ಕೂಲಂಕಷವಾಗಿ ಪರಿಶೀಲಿಸಿ ಸೂಕ್ತ ನಿರ್ಣಯಕ್ಕೆ ಬರಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿ ಹೇಳಿದರು. 

ರಾಜ್ಯ ಬಿಜೆಪಿ ಸರಕಾರದ ಮೂರು ವರ್ಷಗಳ ಸಾಧನೆಯ ಜನೋತ್ಸವ ಸೆ.8ರಂದು ದೊಡ್ಡಬಳ್ಳಾಪುರದಲ್ಲಿ ನಡೆಯಲಿದೆ. ಜನೋತ್ಸವ ಯಶಸ್ವಿಯಾದರೆ ಕೆಲವರಿಗೆ ಅದು ಕರಾಳ ದಿನವೇ ಆಗಿರುತ್ತದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಇದನ್ನೂ ಓದಿ:  ACB ರದ್ದು ಪ್ರಶ್ನಿಸಿ ಸುಪ್ರೀಂನಲ್ಲಿ ಮೇಲ್ಮನವಿ

----------------------------------

''ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದತಿ ಕುರಿತು ರಾಜ್ಯ ಉಚ್ಚ ನ್ಯಾಯಾಲಯ ನೀಡಿರುವ ತೀರ್ಪನ್ನು ಪ್ರಶ್ನಿಸಿ, ರಾಜ್ಯ ಸರಕಾರ ಸುಪ್ರೀಮ್ ಕೋರ್ಟಿನ ಮುಂದೆ ಪ್ರಶ್ನಿಸುವ ಯಾವುದೇ ಇರಾದೆ ಇಲ್ಲ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ತೀರ್ಮಾನಕ್ಕೆ ಬಂದಿದೆ''

-ಆರಗ ಜ್ಞಾನೇಂದ್ರ,  ಗೃಹ ಸಚಿವರು

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News