‘ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡ್' ತ್ವರಿತ ವಿತರಣೆಗೆ ಮುಖ್ಯಮಂತ್ರಿ ಬೊಮ್ಮಾಯಿ ಸೂಚನೆ

Update: 2022-08-24 16:02 GMT

ಬೆಂಗಳೂರು, ಆ. 24: ‘ಪ್ರಧಾನಿ ಮೋದಿ ಅವರು ಮೀನುಗಾರಿಕೆ ಹಾಗೂ ಪಶುಸಂಗೋಪನೆಯನ್ನು ಕೃಷಿಗೆ ಪೂರಕ ಚಟುವಟಿಕೆಗಳೆಂದು ಗುರುತಿಸಿ, ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಅವರಿಗೂ ವಿಸ್ತರಿಸಿದ್ದಾರೆ. ರಾಜ್ಯದಲ್ಲಿ ಮೀನುಗಾರರಿಗೆ ಆದ್ಯತೆಯ ಮೇರೆಗೆ ಕಿಸಾನ್ ಕ್ರೆಡಿಟ್ ಕಾರ್ಡ್ ಸೌಲಭ್ಯವನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬುಧವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯಮಟ್ಟದ ಬ್ಯಾಂಕರುಗಳ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಮೊದಲ ಹಂತದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೀನುಗಾರರಿಗೆ ಕಿಸಾನ್ ಕ್ರೆಡಿಟ್ ಕಾರ್ಡುಗಳನ್ನು ತ್ವರಿತವಾಗಿ ವಿತರಿಸಬೇಕು. ಮೀನುಗಾರಿಕಾ ಇಲಾಖೆಯು ತಮ್ಮ ಬಳಿ ಇರುವ ಮೀನುಗಾರರ ಮಾಹಿತಿಯನ್ನು ಬ್ಯಾಂಕರುಗಳಿಗೆ ಒದಗಿಸಿ, ಅಭಿಯಾನದ ಮಾದರಿಯಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಿಸಬೇಕು ಎಂದು ಸೂಚಿಸಿದರು.

‘ಮೀನುಗಾರರ ಆದಾಯ ಹೆಚ್ಚಿಸಲು ಕೇಂದ್ರ ಹಾಗೂ ರಾಜ್ಯ ಸರಕಾರಗಳು ‘ಮತ್ಸ್ಯ ಸಂಪದ' ಮತ್ತು ಇತರ ಯೋಜನೆಗಳಲ್ಲಿ ಮೀನುಗಾರರಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಮೀನುಗಾರರ ರೈತ ಉತ್ಪಾದಕರ ಸಂಘ ಸ್ಥಾಪನೆ ಮಾಡಿ ನೆರವು ನೀಡಲಾಗುತ್ತಿದೆ.

ಮೀನುಗಾರ ಮಹಿಳೆಯರ ಸ್ವಸಹಾಯ ಗುಂಪುಗಳನ್ನು ರಚಿಸಿ ಆದಾಯ ಉತ್ಪನ್ನ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ನೆರವು ನೀಡಲಾಗುವುದು. ಕಿಸಾನ್ ಕ್ರೆಡಿಟ್ ಕಾರ್ಡ್ ಈ ಸೌಲಭ್ಯಗಳ ವಿತರಣೆ ಸಂದರ್ಭದಲ್ಲಿ ಮಹತ್ತರ ಪಾತ್ರ ವಹಿಸಲಿದೆ. ಮೀನುಗಾರರ ಸಹಕಾರ ಬ್ಯಾಂಕ್‍ಗಳ ಮೂಲಕವೂ ಕಿಸಾನ್ ಕ್ರೆಡಿಟ್ ಕಾರ್ಡ್ ನೀಡಬೇಕು' ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಆಳ ಸಮುದ್ರ ಮೀನುಗಾರಿಕೆ: ‘ಆಳ ಸಮುದ್ರ ಮೀನುಗಾರಿಕೆ ಬೋಟ್‍ಗಳ ಖರೀದಿಗೆ ನೆರವು ನೀಡುವ ಯೋಜನೆಗೆ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದ್ದು, ಈಗಾಗಲೇ 185 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ‘ಕೇಂದ್ರ ಸರಕಾರದ ಮತ್ಸ್ಯ ಸಂಪದ ಯೋಜನೆಯೊಂದಿಗೆ ಸಂಯೋಜಿಸಿ, ಜಾರಿಗೊಳಿಸಲಾಗುತ್ತಿರುವ ಈ ಯೋಜನೆಗೆ ಕೇಂದ್ರದ ಅನುಮೋದನೆಯನ್ನು ತ್ವರಿತವಾಗಿ ಪಡೆಯಬೇಕು ಎಂದು ಸಿಎಂ ತಾಕೀತು ಮಾಡಿದರು.

ಸಭೆಯಲ್ಲಿ ಮೀನುಗಾರಿಕೆ, ಒಳನಾಡು ಜಲಸಾರಿಗೆ ಮತ್ತು ಬಂದರು ಸಚಿವ ಎಸ್.ಅಂಗಾರ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಸಿಎಂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಸಹಕಾರ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಮೀನುಗಾರಿಕಾ ಇಲಾಖೆ ಕಾರ್ಯದರ್ಶಿ ಸಲ್ಮಾ ಫಾಹಿಮ್, ಬ್ಯಾಂಕರುಗಳ ಸಮಿತಿಯ ಸಂಚಾಲಕ ಮುರಳಿಕೃಷ್ಣ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News