ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ: ಯಥಾಸ್ಥಿತಿಗೆ ಹೈಕೋರ್ಟ್ ಆದೇಶ
ಬೆಂಗಳೂರು, ಆ.25: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿರುವ ಚಾಮರಾಜಪೇಟೆ ಈದ್ಗಾ ಮೈದಾನದ ಮಾಲಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್, ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಗುರುವಾರ ಆದೇಶಿಸಿದೆ.
ಚಾಮರಾಜಪೇಟೆ ಈದ್ಗಾ ಮೈದಾನದ ಮಾಲಕತ್ವ ಕಂದಾಯ ಇಲಾಖೆಗೆ ಸೇರಿದೆ ಎಂಬ ಸರಕಾರದ ಆದೇಶವನ್ನು ಪ್ರಶ್ನಿಸಿ ವಕ್ಫ್ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾ ಅಧಿಕಾರಿ ಮತ್ತು ಬೆಂಗಳೂರು ಜಿಲ್ಲೆ ವಕ್ಫ್ ಸಲಹಾ ಸಮಿತಿ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರ ಏಕಸದಸ್ಯ ನ್ಯಾಯಪೀಠ, ಈ ಆದೇಶ ಮಾಡಿದೆ.
ವಕ್ಫ್ ಬೋರ್ಡ್ ಪರ ವಾದಿಸಿದ ಹಿರಿಯ ವಕೀಲರು, ವಕ್ಫ್ ಬೋರ್ಡ್ ಈಗಾಗಲೇ ಚಾಮರಾಜಪೇಟೆಯ ಈದ್ಗಾ ಮೈದಾನ ತನಗೆ ಸೇರಿದ್ದು ಎಂದು ಅಧಿಸೂಚನೆ ಹೊರಡಿಸಿದೆ. ಕಂದಾಯ ಇಲಾಖೆಗೆ ಸೇರಿದ್ದೆಂಬ ಬಿಬಿಎಂಪಿ ಆದೇಶ ಸರಿಯಲ್ಲ ಎಂದು ಪೀಠಕ್ಕೆ ತಿಳಿಸಿದರು.
ವಕ್ಫ್ ಬೋರ್ಡ್ ವಾದಕ್ಕೆ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಆಕ್ಷೇಪ ವ್ಯಕ್ತಪಡಿಸಿದರು. 1965ರಲ್ಲೂ ಈದ್ಗಾ ಮೈದಾನವನ್ನು ಸರಕಾರ ಸರ್ವೇ ನಡೆಸಿತ್ತು ಯಾರೂ ಆಕ್ಷೇಪಿಸಿರಲಿಲ್ಲ, 57 ವರ್ಷಗಳಿಂದಲೂ ಆಸ್ತಿ ಸರಕಾರದ ಹೆಸರಿನಲ್ಲಿಯೇ ಇದೆ ಎಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು, ಚಾಮರಾಜಪೇಟೆ ಈದ್ಗಾ ಮೈದಾನ ಮಾಲಕತ್ವ ವಿವಾದದ ಕುರಿತು ಯಥಾಸ್ಥಿತಿ ಕಾಯ್ದುಕೊಳ್ಳಲು ಆದೇಶ ನೀಡಿತು. ಅಲ್ಲದೆ, ಆಟದ ಮೈದಾನವಾಗಿ ಮಾತ್ರ ಬಳಸಬಹುದಾಗಿದೆ, ರಂಜಾನ್, ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ ಬಳಸಬಹುದು. ಶುಕ್ರವಾರದ ಪ್ರಾರ್ಥನೆಗೆ ಅವಕಾಶವಿಲ್ಲ ಎಂದು ಆದೇಶ ನೀಡಿ ವಿಚಾರಣೆಯನ್ನು ಸೆ.23ಕ್ಕೆ ಮುಂದೂಡಿತು.
‘ಈದ್ಗಾ ಮೈದಾನದ ಮಾಲಕತ್ವಕ್ಕೆ ಸಂಬಂಧಿಸಿದ ವ್ಯಾಜ್ಯವನ್ನು ಬಿಬಿಎಂಪಿ ಪಶ್ಚಿಮ ವಲಯ ಜಂಟಿ ಆಯುಕ್ತ ಶ್ರೀನಿವಾಸ್ ನೇತೃತ್ವದ ಅರೆ ನ್ಯಾಯಿಕ ಮಂಡಳಿ ವಿಚಾರಣೆ ನಡೆಸಿದೆ. ಈ ಪ್ರಕರಣದಲ್ಲಿ ಬಿಬಿಎಂಪಿ ಪ್ರತಿವಾದಿಯಾಗಿದ್ದು, ಜಂಟಿ ಆಯುಕ್ತರಿಗೆ ಮೈದಾನದ ಮಾಲಕತ್ವ ಕುರಿತು ನಿರ್ಧಾರ ತೆಗೆದುಕೊಳ್ಳುವ ಅಧಿಕಾರ ಇಲ್ಲ’ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.
ಚಾಮರಾಜಪೇಟೆಯ ಆಟದ ಮೈದಾನ (2.5 ಎಕರೆ) ಸ್ಥಿರಾಸ್ತಿಯನ್ನು ವಕ್ಫ್ ಮಂಡಳಿ ಹೆಸರಿಗೆ ಖಾತಾ ಮಾಡಿಕೊಡುವಂತೆ 2022ರ ಜೂ.21ರಂದು ಪಾಲಿಕೆಗೆ ಅರ್ಜಿ ಸಲ್ಲಿಸಲಾಗಿತ್ತು. ಇದರನ್ವಯ ಬಿಬಿಎಂಪಿ ಪಶ್ಚಿಮ ವಲಯದ ಕಂದಾಯ ಅಧಿಕಾರಿಗಳು ವಕ್ಫ್ ಮಂಡಳಿಗೆ ನೋಟಿಸ್ ಜಾರಿಗೊಳಿಸಿ ಮಾಲಕತ್ವ ದೃಢಪಡಿಸುವ ದಾಖಲೆಗಳನ್ನು ಸಲ್ಲಿಸುವಂತೆ ಸೂಚಿಸಿತ್ತು. ಇದೇ 3ರಂದು ಪಶ್ಚಿಮ ವಲಯದ ಜಂಟಿ ಆಯುಕ್ತರ ಅರೆ ನ್ಯಾಯಿಕ ಮಂಡಳಿ ಪ್ರಕರಣದ ವಿಚಾರಣೆ ನಡೆಸಿತ್ತು.
ವಿಚಾರಣೆ ವೇಳೆ ವಕ್ಫ್ ಮಂಡಳಿಯು ಚಾಮರಾಜಪೇಟೆ ಆಟದ ಮೈದಾನದ ಮಾಲಕತ್ವ ಸಾಬೀತುಪಡಿಸುವ ದಾಖಲೆ ಸಲ್ಲಿಸುವಲ್ಲಿ ವಿಫಲವಾಗಿದೆ ಎಂದ ತಿಳಿಸಿದ್ದ ಜಂಟಿ ಆಯುಕ್ತರು ಅರ್ಜಿ ವಜಾಗೊಳಿಸಿ ಇದೇ 6ರಂದು ಆದೇಶಿಸಿ, ‘ವಕ್ಫ್ ಮಂಡಳಿಯು ಚಾಮರಾಜಪೇಟೆ ಆಟದ ಮೈದಾನದ ಮೇಲೆ ಹಕ್ಕು ಸ್ಥಾಪಿಸಬೇಕಾದ್ದಲ್ಲಿ ಮುಕ್ತವಾಗಿ ಕಂದಾಯ ಇಲಾಖೆಯೊಂದಿಗೆ ವ್ಯವಹರಿಸಬಹುದಾಗಿದೆ ಎಂದು ಸ್ಪಷ್ಟಪಡಿಸಿತ್ತು.
ಅರ್ಜಿಯಲ್ಲಿ ಪ್ರತಿವಾದಿಗಳು: ಈದ್ಗಾ ಮೈದಾನ ವಿವಾದದ ಪ್ರಕರಣದಲ್ಲಿ ರಾಜ್ಯ ಸರಕಾರದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ, ಬಿಬಿಎಂಪಿ ಮುಖ್ಯ ಆಯುಕ್ತರು, ಬಿಬಿಎಂಪಿ ಪಶ್ಚಿಮ ವಲಯದ ಜಂಟಿ ಆಯುಕ್ತ ಮತ್ತು ದಿ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಆಫ್ ಕರ್ನಾಟಕದ ಪ್ರಧಾನ ಕಾರ್ಯದರ್ಶಿ ಅಬ್ಬಾಸ್ ಖಾನ್ ಅವರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ರಂಝಾನ್, ಬಕ್ರೀದ್ ವೇಳೆ ಪ್ರಾರ್ಥನೆಗೆ ಬಳಸಬಹುದು
ಚಾಮರಾಜಪೇಟೆ ಈದ್ಗಾ ಜಾಗವನ್ನು ಆಟದ ಮೈದಾನವಾಗಿ ಮಾತ್ರ ಬಳಸಬೇಕು. ರಂಜಾನ್ ಹಾಗೂ ಬಕ್ರೀದ್ ವೇಳೆ ಮಾತ್ರ ಪ್ರಾರ್ಥನೆಗೆ ಮುಸ್ಲಿಂ ಸಮುದಾಯದವರು ಬಳಸಬಹುದು ಎಂದು ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ.
-----------------------------
'ಹುಬ್ಬಳ್ಳಿ ಈದ್ಗಾ ಮೈದಾನದ ರೀತಿಯಲ್ಲಿ ಮಾಡಬೇಡಿ'
ಚಾಮರಾಜಪೇಟೆ ಈದ್ಗಾ ಮೈದಾನವನ್ನು ಹುಬ್ಬಳ್ಳಿ ಈದ್ಗಾ ಮೈದಾನದ(ವಿವಾದ) ರೀತಿಯ¬ಲ್ಲಿ ಮಾಡಬೇಡಿ. ಈದ್ಗಾ ಮೈದಾನವು ಆಟಕ್ಕೆ ಸೀಮಿತವಾಗಿದ್ದು, ಹೀಗಾಗಿ ಪಕ್ಷಕಾರರು ಯಥಾಸ್ಥಿತಿ ಕಾಪಾಡಬೇಕು ಎಂದು ಆದೇಶಿಸಿದೆ. ಈ ಸಂಬಂಧ ನಿಯಮ ಜಾರಿ ಮಾಡಲು ಸರಕಾರಕ್ಕೆ ನಿರ್ದೇಶನ ನೀಡಿದ ಹೈಕೋರ್ಟ್, ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರಕಾರ, ಬಿಬಿಎಂಪಿಗೆ ಆದೇಶಿಸಿದೆ.
'ಗಣೇಶೋತ್ಸವಕ್ಕೆ ಇಲ್ಲ ಅವಕಾಶ'
ಹೈಕೋರ್ಟ್ ಯಥಾಸ್ಥಿತಿ ಕಾಪಾಡುವಂತೆ ಆದೇಶ ನೀಡಿದ ಹಿನ್ನೆಲೆಯಲ್ಲಿ ಗಣೇಶೋತ್ಸವ ಆಚರಣೆಗೂ ಅವಕಾಶ ಕೈತಪ್ಪಿದ್ದು, ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಇಲ್ಲಿಯವರೆಗೆ 7 ಸಂಘಟನೆಗಳು ಅರ್ಜಿ ಸಲ್ಲಿಸಿದ್ದವು. ಗಣೇಶೋತ್ಸವ ಮಾಡಬೇಡಿ ಎಂದು 2 ಸಂಘಟನೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯವೇ ಯಥಾಸ್ಥಿತಿ ಕಾಪಾಡಲು ಸರಕಾರಕ್ಕೆ ಸೂಚನೆ ನೀಡಿರುವುದರಿಂದ ಗಣೇಶೋತ್ಸವ ಆಚರಣೆಗೆ ಅವಕಾಶ ಕೈತಪ್ಪಿದೆ.
ಕಾನೂನು ಹೋರಾಟ ಮಾಡುತ್ತೇವೆ: ನಾಗರಿಕ ಒಕ್ಕೂಟ ವೇದಿಕೆ
ಉಚ್ಚ ನ್ಯಾಯಾಲಯವು ಯಥಾಸ್ಥಿತಿ ಕಾಪಾಡಲು ಹೇಳಿದೆ. ವಕ್ಫ್ ಬೋರ್ಡ್ನವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಅವರ ಆದೇಶಕ್ಕೆ ಎಲ್ಲರೂ ತಲೆಬಾಗಲೇಬೇಕು. ಈ ಬಗ್ಗೆ ಸಭೆ ಮಾಡುತ್ತೇವೆ. ಆಮೇಲೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ. ಮೈದಾನದಲ್ಲಿ ಗಣೇಶೋತ್ಸವ ಮಾಡಲು ನಾವು ಎಲ್ಲ ಸಿದ್ಧತೆ ಮಾಡಿಕೊಂಡಿದ್ದೆವು. ಸುಪ್ರೀಂಕೋರ್ಟ್ಗೆ ಹೋಗುವ ಬಗ್ಗೆ ಚರ್ಚೆ ಮಾಡಿಲ್ಲ. ಮುಂದಿನ ವಿಚಾರಣೆ ವೇಳೆಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಚಾಮರಾಜಪೇಟೆ ನಾಗರಿಕರ ಒಕ್ಕೂಟ ವೇದಿಕೆ ರಾಮೇಗೌಡ ಹೇಳಿದ್ದಾರೆ.
ಹೈಕೋರ್ಟ್ ಆದೇಶ ಪಾಲಿಸುತ್ತೇವೆ
‘ಚಾಮರಾಜಪೇಟೆ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಕೋರ್ಟ್ ಸೂಚಿಸಿದೆ. ಈ ನಿಟ್ಟಿನಲ್ಲಿ ಕೋರ್ಟ್ ಆದೇಶವನ್ನು ಪಾಲಿಸುತ್ತೇವೆ ಎಂದು ಬೆಂಗಳೂರು ಡಿಸಿ ಶ್ರೀನಿವಾಸ್ ಹೇಳಿದ್ದಾರೆ.