ಸುಪ್ರೀಂಕೋರ್ಟ್ ಸೂಚನೆ ಹಿನ್ನೆಲೆ; BDA ಆಯುಕ್ತ ಎಂ.ಬಿ.ರಾಜೇಶ್ ಗೌಡ ವರ್ಗಾವಣೆ
ಬೆಂಗಳೂರು, ಆ.26: ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಪರ್ಯಾಯ ನಿವೇಶನಗಳ ಹಂಚಿಕೆಯನ್ನು 2021ರ ಅಕ್ಟೋಬರ್ ನಲ್ಲಿ ಸುಪ್ರೀಂಕೋರ್ಟ್ ನಿರ್ಬಂಧಿಸಿದ್ದರೂ, ಬೆಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಬಿಡಿಎ) ಸುಪ್ರೀಂಕೋರ್ಟ್ ಆದೇಶವನ್ನು ಉಲ್ಲಂಘಿಸಿ ಆರ್ಎಂವಿ(ಎರಡನೆ ಹಂತ ಎಕ್ಸ್ಟೇಷನ್) ಬಡಾವಣೆಯಲ್ಲಿ ಕೋಟ್ಯಂತರ ರೂ.ಮೌಲ್ಯದ ಬದಲಿ ನಿವೇಶನಗಳನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ನಾಲ್ವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿತ್ತು.
ಡಾ.ಶಿವರಾಮ ಕಾರಂತ ಬಡಾವಣೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಈ ಸಂಬಂಧ ಸರ್ವೋಚ್ಚ ನ್ಯಾಯಾಲಯದ ದ್ವಿಸದಸ್ಯ ಪೀಠವು, ಬಿಡಿಎ ಅಧಿಕಾರಿಗಳ ಧೋರಣೆಗೆ ಕಿಡಿಗಾರಿತು.
ಬದಲಿ ನಿವೇಶನಗಳನ್ನು ಹಂಚಿಕೆ ಮಾಡಿದ ಬಳಿಕ ಸುಪ್ರೀಂಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಸಿ, ಆದೇಶವನ್ನು ಮಾರ್ಪಾಡು ಮಾಡುವಂತೆ ಬಿಡಿಎ ಮನವಿ ಸಲ್ಲಿಸಿತ್ತು. ವಿಚಾರಣೆ ವೇಳೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠವು, ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಬಳಿಕ ಬಿಡಿಎ ಆಯುಕ್ತರು ಮಧ್ಯಂತರ ಅರ್ಜಿ ಸಲ್ಲಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿತು.
ಜಿ ಕೆಟಗಿರಿ ನಿವೇಶನ ಹಂಚಿಕೆಯೆ ಅಕ್ರಮ ಎಂದು ಆಯುಕ್ತರನ್ನು ತರಾಟೆಗೆ ತೆಗೆದುಕೊಂಡ ನ್ಯಾಯಾಲಯವು, ಬಿಡಿಎ ಆಯುಕ್ತ ರಾಜೇಶ್ ಗೌಡ ಅವರನ್ನು ಕೂಡಲೆ ವರ್ಗಾವಣೆ ಮಾಡಬೇಕು. ಅವರಿಗೆ ಸರ್ವೋಚ್ಚ ನ್ಯಾಯಾಲಯದ ಆದೇಶಗಳ ಬಗ್ಗೆ ಗೌರವವೇ ಇಲ್ಲ. ಇಂದಿನಿಂದ ಅವರು ಯಾವುದೆ ಪ್ರಮುಖ ಆದೇಶಗಳಿಗೆ ಸಹಿ ಹಾಕುವಂತಿಲ್ಲ ಎಂದು ಆದೇಶ ನೀಡಿತು.
ವರ್ಗಾವಣೆ: ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಬಿಡಿಎ ಆಯುಕ್ತ ಎಂ.ಬಿ.ರಾಜೇಶ್ ಗೌಡ ಅವರನ್ನು ವರ್ಗಾವಣೆ ಮಾಡಿದ್ದು, ಅವರ ಸ್ಥಾನದ ಹೆಚ್ಚುವರಿ ಹೊಣೆಗಾರಿಕೆಯನ್ನು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ.ಕುಮಾರ್ ನಾಯ್ಕ್ ಅವರಿಗೆ ವಹಿಸಲಾಗಿದೆ.
--------------
''ನಿವೇಶನ ವಾಪಸ್ ಪಡೆಯುತ್ತೇವೆ''
ಗಣ್ಯರಿಗೆ ಅಭಿವೃದ್ಧಿ ಹೊಂದಿದ ಪರ್ಯಾಯ ನಿವೇಶನ ಹಂಚಿಕೆ ಕುರಿತು ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಬಿಡಿಎದಲ್ಲಿರುವ ಕೆಳ ಹಂತದ ಅಧಿಕಾರಿಗಳು ಈ ವಿಚಾರದಲ್ಲಿ ಎಡವಟ್ಟು ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಬಿಡಿಎ ಆಯುಕ್ತರು ನೋಟಿಸ್ ಜಾರಿ ಮಾಡಿದ್ದಾರೆ. ಅಲ್ಲದೆ, ಅವರಿಂದ ನಿವೇಶವನ್ನು ವಾಪಸ್ ಪಡೆಯುತ್ತೇವೆ.
ಎಸ್.ಆರ್.ವಿಶ್ವನಾಥ್, ಬಿಡಿಎ ಅಧ್ಯಕ್ಷ