ಪ್ರಧಾನಿ ಮೋದಿಗೆ 140 ಸ್ಥಾನಗಳನ್ನು ಗೆಲ್ಲುವ ಮಾತು ಕೊಟ್ಟಿದ್ದೇನೆ: ಬಿ.ಎಸ್. ಯಡಿಯೂರಪ್ಪ

Update: 2022-08-27 14:04 GMT

ಬೆಂಗಳೂರು, ಆ. 27: ‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಸಂಬಂಧ ಪ್ರಧಾನಿ ಮೋದಿಯವರಿಗೆ ಮಾತು ಕೊಟ್ಟಿದ್ದೇನೆ' ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರು ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ಇಲ್ಲಿನ ಕೆ.ಆರ್.ಪುರಂನಲ್ಲಿ ನಡೆದ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ನಿನ್ನೆ ದಿಲ್ಲಿಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ಭೇಟಿ ಮಾಡಿದ್ದು, ಸಮಾಲೋಚನೆ ನಡೆಸಿದ್ದೇನೆ' ಎಂದು ಹೇಳಿದರು.

‘ಮೂವರು ನಾಯಕರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ್ದು, ಪ್ರಧಾನಿ ಮೋದಿಯವರು ಕರ್ನಾಟಕ ರಾಜ್ಯದ ರಾಜಕೀಯದ ಬಗ್ಗೆ ಅವರು ತಿಳಿದುಕೊಳ್ಳುವ ಪ್ರಯತ್ನ ಮಾಡಿದರು. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ 140ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ಕುರಿತು ನಾನು ಮೋದಿಯವರಿಗೆ ಭರವಸೆ ನೀಡಿದ್ದೇನೆ' ಎಂದು ತಿಳಿಸಿದರು.

‘ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಧಾನಿ ಮೋದಿಯವರು ಆಗಮಿಸಲಿದ್ದು, ಅಲ್ಲಿ ಲಕ್ಷಾಂತರ ಜನರನ್ನು ಸೇರಿಸಿ ದೊಡ್ಡ ಕಾರ್ಯಕ್ರಮ ಮಾಡಲಿದ್ದೇವೆ. ಮುಂಬರಲಿರುವ ಚುನಾವಣೆ ಹಿನ್ನೆಲೆಯಲ್ಲಿ ಮೋದಿಯವರು ರಾಜ್ಯಕ್ಕೆ ಆಗಾಗ ಬರುವಂತೆ ಮನವಿ ಮಾಡಿದ್ದೇನೆ. ಅವರೂ ಕರ್ನಾಟಕಕ್ಕೆ ಬರುವುದಾಗಿ ಒಪ್ಪಿಕೊಂಡಿದ್ದಾರೆ' ಎಂದು ಯಡಿಯೂರಪ್ಪ ವಿವರಣೆ ನೀಡಿದರು. 

‘ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಮುಖಂಡರು ತಾವು ಇನ್ನೇನು ಅಧಿಕಾರಕ್ಕೆ ಬಂದೆಬಿಟ್ಟೆವು ಎಂಬ ಭ್ರಮೆಯಲ್ಲಿದ್ದಾರೆ. ಆದರೆ, ನಾವು ಎಲ್ಲರೂ ಒಟ್ಟಾಗಿ ಸೇರಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ. ಇನ್ನು ನಾಲ್ಕೈದು ದಿನಗಳಲ್ಲಿ ನಾವೆಲ್ಲರೂ ಸೇರಿ ರಾಜ್ಯ ಪ್ರವಾಸ ಮಾಡುತ್ತೇವೆ' ಎಂದು ಯಡಿಯೂರಪ್ಪ ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News