ಚಿಕ್ಕಮಗಳೂರು | ಸಾಮಾಜಿಕ ಜಾಲತಾಣಗಳಲ್ಲಿ ಅಂಬೇಡ್ಕರ್, ದಲಿತ ಸಂಘಟನೆಗಳ ಮುಖಂಡರ ಅವಹೇಳನ: ಆರೋಪ

Update: 2022-08-29 13:24 GMT

ಚಿಕ್ಕಮಗಳೂರು, ಆ.29: 'ದೇಶಕ್ಕೆ ಸಂವಿಧಾನ ನೀಡಿರುವ, ಕಾನೂನು ವ್ಯವಸ್ಥೆಯನ್ನು ರೂಪಿಸಿಕೊಟ್ಟಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅತ್ಯಂತ ಕಟ್ಟ ಪದಗಳಿಂದ ನಿಂದಿಸಿ ಅವಮಾನ ಮಾಡಿರುವ ಬಜರಂಗದಳದ ಮುಖಂಡರು, ಕಾರ್ಯಕರ್ತರನ್ನು ಬಂಧಿಸುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯವಹಿಸಿದೆ' ಎಂದು ಆರೋಪಿಸಿ ದಲಿತ ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯ ವಿವಿಧ ದಲಿತ, ಪ್ರಗತಿಪರ ಸಂಘಟನೆಗಳ ಮುಖಂಡರು ನಗರದ ಕೆಇಬಿ ಸರ್ಕಲ್‍ನಿಂದ ಬಸವನಹಳ್ಳಿ, ಎಂಜಿ ರಸ್ತೆ ಮಾರ್ಗವಾಗಿ ಆಝಾದ್‍ಪಾರ್ಕ್‍ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾ ಪೊಲೀಸ್ ಇಲಾಖೆ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

ಈ ವೇಳೆ ಮಾತನಾಡಿದ ಸಂಘಟನೆಗಳ ಮುಖಂಡರು, ಇತ್ತೀಚೆಗೆ ಸಕಲೇಶಪುರದಲ್ಲಿ ಗೋವುಗಳ ಸಾಗಣೆ ಮಾಡುತ್ತಿದ್ದ ದಲಿತ ಸಮುದಾಯದ ವ್ಯಕ್ತಿಯೊಬ್ಬರನ್ನು ತಡೆದಿದ್ದ ಬಜರಂಗದಳದ ಕಾರ್ಯಕರ್ತರು ಆತನ ಮೇಲೆ ಹಲ್ಲೆ ಮಾಡಿದ್ದಲ್ಲದೇ ಅಮಾನವೀಯವಾಗಿ ವರ್ತಿಸಿದ್ದಾರೆ. ಈ ಘಟನೆಯನ್ನು ಖಂಡಿಸಿ ಸಕಲೇಶಪುರದಲ್ಲಿ ದಲಿತ ಸಂಘಟನೆಗಳ ಮುಖಂಡರು ಸಾವಿರಾರು ಕಾರ್ಯಕರ್ತರ ಸಮ್ಮುಖದಲ್ಲಿ ಪ್ರತಿಭಟನೆ ನಡೆಸಿ ಬಜರಂಗದಳದ ಕಾರ್ಯಕರ್ತರ ಬಂಧನಕ್ಕೆ ಆಗ್ರಹಿಸಿದ್ದರು. ಈ ಪ್ರತಿಭಟನೆ ನಡೆದ ಮಾರನೇ ದಿನ ಚಿಕ್ಕಮಗಳೂರಿನ ಬಜರಂಗದಳದ ಮುಖಂಡರು, ಕಾರ್ಯಕರ್ತರು ಸಕಲೇಶಪುರದಲ್ಲಿ ದಲಿತರು ನಡೆಸಿದ ಪೊಟೊಗಳೊಂದಿಗೆ ಅಂಬೇಡ್ಕರ್ ಅವರ ಭಾವಚಿತ್ರವನ್ನು ಬಳಸಿಕೊಂಡು ಅಂಬೇಡ್ಕರ್ ಹಾಗೂ ದಲಿತ ಸಂಘಟನೆಗಳ ಮುಖಂಡರ ವಿರುದ್ಧ ಅಶ್ಲೀಲ ಹಾಡೊಂದದ ವಿಡಿಯೋ ಸೃಷ್ಟಿಸಿ ಸಿಕೆಎಂ ಪವರ್ ಆಫ್ ಹಿಂದೂ" ಎಂಬ ಇನ್‍ಸ್ಟಾಗ್ರಾಮ್‍ನಲ್ಲಿ ಶೇರ್ ಮಾಡಿದ್ದಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟಿದ್ದಾರೆ. ಈ ವಿಡಿಯೋದಲ್ಲಿ ಅಂಬೇಡ್ಕರ್ ಹಾಗೂ ದಲಿತ ಸಂಘಟನೆಗಳ ಮುಖಂಡರನ್ನು ಅಶ್ಲೀಲ ಪದಗಳಿಂದ ನಿಂದಿಸಿ ಅಮಮಾನಿಸಲಾಗಿದೆ ಎಂದು ಆರೋಪಿಸಿದರು.

ಬಜರಂಗದಳದವರ ಈ ಕೃತ್ಯದ ವಿರುದ್ಧ ದಲಿತ ಸಂಘಟನೆಗಳ ಮುಖಂಡರು ಚಿಕ್ಕಮಗಳೂರು ಎಸ್ಪಿಗೆ ದೂರು ನೀಡಿದ್ದು, ದೂರು ನೀಡಿದ 15 ದಿನ ಕಳೆದರೂ ಎಸ್ಪಿ ಉಮಾ ಪ್ರಶಾಂತ್ ಅವರು ಕಿಡಿಗೇಡಿಗಳ ವಿರುದ್ಧ ಇದುವರೆಗೂ ಕಾನೂನು ಕ್ರಮವಹಿಸಿಲ್ಲ. ಈ ಮೂಲಕ ಜಿಲ್ಲಾ ಪೊಲೀಸ್ ಇಲಾಖೆ ಬಜರಂಗದಳದ ಕೃತ್ಯವನ್ನು ಪರೋಕ್ಷವಾಗಿ ಬೆಂಬಲಿಸಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ವಿಫಲರಾಗಿದ್ದಾರೆ. ಪೊಲೀಸ್ ಇಲಾಖೆ ಅಧಿಕಾರಿಗಳು ರಾಜಕೀಯ ಒತ್ತಡಕ್ಕೆ ಮಣಿದು ಬಜರಂಗದಳದ ಕಿಡಿಗೇಡಿಗಳ ರಕ್ಷಣೆಗೆ ಮುಂದಾಗಿದ್ದಾರೆ ಎಂದು ದೂರಿದರು.

ಇದನ್ನೂ ಓದಿ: ಬೆಂಗಳೂರು | ಮೇಲ್ಸೇತುವೆಗೆ '40 ಪರ್ಸೆಂಟ್ ಕಮಿಷನ್' ನಾಮ ಫಲಕ ಅಳವಡಿಕೆ: ಆಪ್ ನಾಯಕರ ಬಂಧನ

ಬಜರಂಗದಳ ಸಂಘಟನೆಯ ಮುಖಂಡರು, ಕಾರ್ಯಕರ್ತರು ಎಂತಹ ನೀಚ, ವಿಕೃತ ಮನಸ್ಥಿತಿಯವರು ಎಂಬುದು ಈ ವಿಡಿಯೋದಲ್ಲಿರುವ ಅಶ್ಲೀಲ ಹಾಡು ಕೇಳಿದರೇ ಸ್ಪಷ್ಟವಾಗುತ್ತದೆ. ಇಂತಹ ಅಶ್ಲೀಲ ವಿಡಿಯೋ ಸೃಷ್ಟಿಸಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವುದು ಸೈಬರ್ ಕ್ರೈಂ ಆಗಿದ್ದು, ಇದರ ವಿರುದ್ಧ ಸ್ವಂ ದೂರು ದಾಖಲಿಸಿಕೊಂಡು ಕಾನೂನು ಕ್ರಮಕೈಗೊಳ್ಳಬೇಕಿತ್ತು. ಆದರೆ ಪೊಲೀಸರು ದೂರು ನೀಡಿದರೂ ಕ್ರಮವಹಿಸಿಲ್ಲ. ಪೊಲೀಸರು ಆರೋಪಿಗಳನ್ನು ರಕ್ಷಣೆಗೆ ಮುಂದಾಗಿರುವ ಶಂಕೆ ಮೂಡಿದ್ದು, ಇದಕ್ಕೆ ಪೊಲೀಸ್ ಇಲಾಖೆ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ ಮುಖಂಡರು, ಪೊಲೀಸ್ ಇಲಾಖೆಗೆ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರ ಮೇಲೆ ಕಿಂಚಿತ್ ಗೌರವ ಇದ್ದಲ್ಲಿ ಈ ಕೂಡಲೇ ಅಂಬೇಡ್ಕರ್ ಹಾಗೂ ದಲಿತ ಸಂಘಟನೆಗಳ ಮುಖಂಡರ ಬಗ್ಗೆ ಅಶ್ಲೀಲ ವಿಡಿಯೋ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿರುವವರು ಹಾಗೂ ಅಶ್ಲೀಲ ಹಾಡು ಹಾಡಿರುವ ಕಿಡಿಗೇಡಿಯನ್ನು ಪತ್ತೆ ಹಚ್ಚಿ ಬಂಧಿಸಿ ಕಠಿಣ ಶಿಕ್ಷೆಗೆ ಗುರಿಪಡಿಸಬೇಕು. ತಪ್ಪಿದಲ್ಲಿ ಹೋರಾಟನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಧರಣಿ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಅಧಿಕಾರಿ, ಸಿಬ್ಬಂದಿ ಪ್ರತಿಭಟನೆಗೆ ಅಡ್ಡಿಪಡಿಸಿದ್ದಾರೆ ಎಂದು ಮುಖಂಡರು ಆರೋಪಿಸಿ, ಸ್ಥಳದಲ್ಲಿದ್ದ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ತರಾಟೆಗೆ ಪಡೆದರು. ಈ ವೇಳೆ ಪೊಲೀಸರು ಹಾಗೂ ಸಂಘಟನೆಗಳ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು. ವಿವಿಧ ಸಂಘಟನೆಗಳ ಮುಖಂಡರಾದ ಭರತ್, ಹೊನ್ನೇಶ್, ಚದಂಬರ್, ಹುಣಸೇಮಕ್ಕಿ ಲಕ್ಷ್ಮಣ್, ಮರ್ಲೆ ಅಣ್ಣಯ್ಯ, ಗೌಸ್‍ಮುನೀರ್, ಬಸವರಾಜು, ಮೋಹನ್ ಕಬ್ಬಿಗೆರೆ, ಉಮೇಶ್ ಸೇರಿದಂತೆ ಮತ್ತಿತರ ಮುಖಂಡರು, ಕಾರ್ಯಕರ್ತರು ಧರಣಿಯಲ್ಲಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News