ರಾಜ್ಯದ ವಿವಿಧೆಡೆ ಮಳೆ ಹಿನ್ನೆಲೆ: ಸಿಎಂ ಬೊಮ್ಮಾಯಿ ತುರ್ತುಸಭೆ
ಬೆಂಗಳೂರು: ಮಳೆ ಹಿನ್ನೆಲೆ ಬೆಂಗಳೂರು(Bengaluru) ಸೇರಿದಂತೆ ರಾಜ್ಯದ ವಿವಿಧ ಬಹುತೇಕ ಪ್ರದೇಶಗಳಿಗೆ ಹಾನಿಯಾಗಿದ್ದು, ಈ ಸಂಬಂಧ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತುರ್ತು ಸಭೆ ನಡೆಸಿದರು.
ಬುಧವಾರ ನಗರದ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿವೃಷ್ಟಿ, ಪ್ರವಾಹ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಯಿತು.
ಪ್ರತಿಯೊಂದು ಪ್ರದೇಶಗಳಲ್ಲಿ ಮಳೆಯಿಂದಾಗಿರುವ ಅನಾಹುತಗಳ ಬಗ್ಗೆ ಸ ಬೊಮ್ಮಾಯಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಮಳೆಯಿಂದ ಹೆಚ್ಚು ತೊಂದರೆಯಾಗಿರುವ ಪ್ರದೇಶಗಳ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿವರಣೆ ನೀಡಿದರು.
ಇದೇ ವೇಳೆ ಹೆಚ್ಚು ಹಾನಿಯಾಗಿರುವ ಪ್ರದೇಶಗಳಲ್ಲಿ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದರು. ಗುರುವಾರ ಮಧ್ಯಾಹ್ನ ಸಿಎಂ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.
ಸಚಿವರಾದ ವಿ.ಸೋಮಣ್ಣ, ಆರ್.ಅಶೋಕ್, ಡಾ.ಸಿ.ಎನ್. ಅಶ್ವತ್ಥನಾರಾಯಣ, ಎಸ್.ಟಿ.ಸೋಮಶೇಖರ್ ಭಾಗವಹಿಸಿದ್ದರು. ಅಲ್ಲದೇ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಿ.ಕುಮಾರ ನಾಯಕ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್.ಜಯರಾಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.