ಎದೆನೋವು: ಮುರುಘಾ ಶ್ರೀ ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರ
Update: 2022-09-02 08:23 GMT
ಚಿತ್ರದುರ್ಗ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧಿತರಾಗಿ ಬಳಿಕ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಡಾ. ಶಿವಮೂರ್ತಿ ಮುರುಘಾ ಶರಣರನ್ನು ತೀವ್ರ ನಿಗಾ ಘಟಕಕ್ಕೆ ಸ್ಥಳಾಂತರಿಸಲಾಗಿದೆ.
ಇಂದು ಬೆಳಗ್ಗೆ 6:30ರ ಸುಮಾರಿಗೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸರು ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು. ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಆರೋಗ್ಯ ಪರೀಕ್ಷೆಗಾಗಿ ತೀವ್ರನಿಗಾ ಘಟಕಕ್ಕೆ ಕರೆತಂದಿದ್ದಾರೆ ಎಂದು ತಿಳಿದು ಬಂದಿದೆ.
ಕಳೆದ ರಾತ್ರಿ ಮುರುಘಾ ಶರಣರನ್ನು ಬಂಧಿಸಿದ ಪೊಲೀಸರು ಪ್ರಾಥಮಿಕ ವಿಚಾರಣೆ, ವೈದ್ಯಕೀಯ ತಪಾಸಣೆ ಹಾಗೂ ನ್ಯಾಯಾಧೀಶರ ಎದುರು ಹಾಜರುಪಡಿಸುವ ಪ್ರಕ್ರಿಯೆ ಪೂರ್ಣಗೊಳಿಸಿ ಬಳಿಕ ಮುಂಜಾವ 2:30ರ ಸುಮಾರಿಗೆ ನಗರದ ಹೊರವಲಯದ ಹಳೆ ಬೆಂಗಳೂರು ರಸ್ತೆಯಲ್ಲಿರುವ ಕಾರಾಗೃಹಕ್ಕೆ ಸೇರಿಸಿದ್ದರು.