ಚಿಕ್ಕಮಗಳೂರು | ಸಾಮಾಜಿಕ ಜಾಲತಾಣಗಳಲ್ಲಿ ಅಂಬೇಡ್ಕರ್, ದಲಿತ ಮುಖಂಡರ ಅವಹೇಳನ ಪ್ರಕರಣ: ಆರೋಪಿಯ ಬಂಧನ

Update: 2022-09-04 13:41 GMT
ಸಾಂದರ್ಭಿಕ ಚಿತ್ರ

ಚಿಕ್ಕಮಗಳೂರು, ಸೆ.4: ಅಂಬೇಡ್ಕರ್ ಭಾವಚಿತ್ರ ಹಾಗೂ ಸಕಲೇಶಪುರದ ದಲಿತ ಸಂಘಟನೆಗಳ ಪ್ರತಿಭಟನೆಯ ಪೊಟೊಗಳನ್ನು ಬಳಸಿ ಅಶ್ಲೀಲ ಹಾಡಿನ ವಿಡಿಯೋ ಸೃಷ್ಟಿಸಿ ಸಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 

ಬಂಧಿತ ಆರೋಪಿಯನ್ನು ಬೆಂಗಳೂರು ಮೂಲದ ರಂಜಿತ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನಂತರ ನ್ಯಾಯಾಂಗ ಬಂಧನಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಗೋಸಾಗಣೆ ಮಾಡುತ್ತಿದ್ದ ದಲಿತ ವ್ಯಕ್ತಿಯನ್ನು ಅಡ್ಡ ಹಾಕಿದ್ದ ಬಜರಂಗದಳದ ಕಾರ್ಯಕರ್ತರು ಆತನ ಮೇಲೆ ಹಲ್ಲೆ ಮಾಡಿ ನಿಂದಿಸಿದ್ದರು. ಈ ಘಟನೆಯನ್ನು ಖಂಡಿಸಿ ಸಕಲೇಶಪುರದಲ್ಲಿ ದಲಿತ ಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದ್ದರು.  ಈ ಪ್ರತಿಭಟನೆ  ಕೆಲವು ಪೊಟೊಗಳೊಂದಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರ ಬಳಸಿ ಹಿನ್ನೆಲೆಯಲ್ಲಿ ಅಶ್ಲೀಲ ಹಾಡಿನ ವಿಡಿಯೋ ಸೃಷ್ಟಿಸಿ ಅದನ್ನು 'ಸಿಕೆಎಂ ಪವರ್ ಆಫ್ ಹಿಂದೂ' ಎಂಬ ಇನ್‍ಸ್ಟಾಗ್ರಾಮ್ ಗ್ರೂಪ್‍ನಲ್ಲಿ ಹರಿಯಬಿಟ್ಟಿದ್ದರು.

ಈ ವಿಡಿಯೋ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಚಿಕ್ಕಮಗಳೂರು ಜಿಲ್ಲೆಯ ದಲಿತ ಪರ ಸಂಘಟನೆಗಳ ಮುಖಂಡರು ಅಂಬೇಡ್ಕರ್ ಭಾವಚಿತ್ರ ಹಾಗೂ ದಲಿತ ಹೋರಾಟಗಾರರನ್ನು ಅವಮಾನಿಸಿ ಕಿಡಿಗೇಡಿಗಳ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕೆಂದು ಎಸ್ಪಿ ಉಮಾಪ್ರಶಾಂತ್ ಅವರಿಗೆ ದೂರು ನೀಡಿದ್ದರು.

ಈ ದೂರಿನ ಮೇರೆಗೆ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣದ ತನಿಖೆ ಆರಂಭಿಸಿದ್ದರು. ಆರೋಪಿ ರಂಜಿತ್ ಬಂಧನಕ್ಕೆ ಸಂಬಂಧಿಸಿದಂತೆ ಎಸ್ಪಿ ಉಮಾ ಪ್ರಶಾಂತ್ ರವಿವಾರ ಪ್ರತಿಕಾ ಪ್ರಕಟನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News