ಶಿಕ್ಷಕರು ಆದರ್ಶ ವ್ಯಕ್ತಿಗಳಾಗಿರಬೇಕು: ಉಡುಪಿ ಉಸ್ತುವಾರಿ ಸಚಿವ ಅಂಗಾರ
ಉಡುಪಿ, ಸೆ.5: ಡಾ. ಎಸ್. ರಾಧಾಕೃಷ್ಣನ್ ಸೇರಿದಂತೆ ಹಿರಿಯ ಮಹಾನ್ ವ್ಯಕ್ತಿಗಳ ತತ್ವ ಆದರ್ಶಗಳನ್ನು ಪಾಲನೆ ಮಾಡುವುದರೊಂದಿಗೆ ಶಿಕ್ಷಕರು ಉತ್ತಮ ಕಾರ್ಯ ಸಾಧನೆಗಳನ್ನು ಮಾಡಿ, ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಬೇಕು ಎಂದು ರಾಜ್ಯ ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ಸೋಮವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಉಡುಪಿ ತಾಲೂಕು ಹಾಗೂ ಉಡುಪಿ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣಾ ಸಮಿತಿ ಇವುಗಳ ಸಂಯುಕ್ತ ಆಶ್ರಯದಲ್ಲಿ ಡಾ.ಎಸ್. ರಾಧಾಕೃಷ್ಣನ್ ಜನ್ಮ ದಿನಾಚರಣೆ ಪ್ರಯುಕ್ತ ನಡೆದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಶಿಕ್ಷಣ ಕ್ಷೇತ್ರದಲ್ಲಿ ಡಾ.ಎಸ್.ರಾಧಾಕೃಷ್ಣನ್, ತಾಂತ್ರಿಕ ಕ್ಷೇತ್ರದಲ್ಲಿ ಸರ್ ಎಂ. ವಿಶ್ವೇಶ್ವರಯ್ಯ ಸೇರಿದಂತೆ ಮಹಾನ್ ವ್ಯಕ್ತಿಗಳು ಅಂದಿನ ದಿನಗಳಲ್ಲಿ ಆರ್ಥಿಕ ಸಮಸ್ಯೆಗಳ ಜೊತೆಗೆ ಅನೇಕ ರೀತಿಯ ಪ್ರತಿರೋಧಗಳಿದ್ದರೂ ಸಹ ತಾಳ್ಮೆಯಿಂದ ಅವುಗಳನ್ನು ಗೆದ್ದು, ತಮ್ಮ ಕ್ಷೇತ್ರಗಳಲ್ಲಿ ಉತ್ತಮ ಕೆಲಸಗಳನ್ನು ಮಾಡುವ ಮೂಲಕ ಯಶಸ್ಸು ಸಾಧಿಸಿದ್ದು, ಇದು ಎಲ್ಲಾ ಶಿಕ್ಷಕರು ಸ್ಪೂರ್ತಿದಾಯಕ ಎಂದರು.
ಪ್ರಶಸ್ತಿಗಳನ್ನು ಪಡೆಯುವುದು ವ್ಯಕ್ತಿಯ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸುತ್ತದೆ. ಇದಕ್ಕೆ ಪೂರಕವಾಗಿ ತಮ್ಮ ಕೆಲಸ ಕಾರ್ಯಗಳನ್ನು ಕೈಗೊಳ್ಳಬೇಕು. ಇದರೊಂದಿಗೆ ಜನರ ಪ್ರೀತಿ ವಿಶ್ವಾಸಗಳನ್ನು ಗಳಿಸಿ ಸಮಾಜದಲ್ಲಿ ಮತ್ತಷ್ಟು ಸಾಧನೆಗಳನ್ನು ಮಾಡಬೇಕು ಎಂದರು.
ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ. ಶಿಕ್ಷಕರು ಆದರ್ಶ ವಿಚಾರಗಳನ್ನು ವಿದ್ಯಾರ್ಥಿ ಗಳಿಗೆ ಭೋದಿಸುವುದರೊಂದಿಗೆ ಅವರುಗಳನ್ನು ವಿದ್ಯಾವಂತರನ್ನಾಗಿಸಿ ಉತ್ತಮ ಪ್ರಜೆಗಳಾಗಿ ರೂಪು ಗೊಳಿಸಬೇಕು ಎಂದು ನುಡಿದರು.
ಮುಖ್ಯಅತಿಥಿಯಾಗಿ ಭಾಗವಹಿಸಿ ಮಾತನಾಡಿದ ರಾಜ್ಯ ಹಿಂದುಳಿದ ವರ್ಗ ಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವುದರ ಜೊತೆಗೆ ನೈತಿಕ ಶಿಕ್ಷಣವನ್ನು ನೀಡಿದಾಗ ಮಾತ್ರ ಅವರು ಮುಂದಿನ ದಿನಗಳಲ್ಲಿ ಪ್ರಜ್ಞಾವಂತ ನಾಗರಿಕರಾಗಲು ಸಾಧ್ಯ ಎಂದು ಅಭಿಪ್ರಾಯಪಟ್ಟರು.
ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ನಿವೃತ್ತಿ ಹೊಂದುವುದನ್ನು ಮಾತ್ರ ನಾವು ಕಾಣತ್ತಿದ್ದೇವೆ. ಸರಕಾರದಿಂದ ಹೊಸ ಶಿಕ್ಷಕರ ನೇಮಕಾತಿ ಅಷ್ಟೇ ಪ್ರಮಾಣದಲ್ಲಿ ಆಗದಿರುವುದು ಕಂಡು ಬರುತ್ತಿದೆ. ಈ ಬಗ್ಗೆ ಗಮನ ಹರಿಸುವುದು ಅಗತ್ಯ ಎಂದ ಹೆಗ್ಡೆ, ನಿವೃತ್ತ ಶಿಕ್ಷಕರು ತಮ್ಮ ನಿವೃತ್ತಿಯ ನಂತರದ ದಿನಗಳಲ್ಲಿ ತಮ್ಮ ವಾಸಸ್ಥಳದ ಹತ್ತಿರವಿರುವ ಶಾಲೆಗಳಲ್ಲಿ ಬೋಧನಾ ಚಟುವಟಿಕೆಯಲ್ಲಿ ಭಾಗವಹಿಸುವ ಮೂಲಕ ಕ್ರಿಯಾಶೀಲರಾಗಿರಬೇಕು ಎಂದರು.
ಶಾಸಕ ರಘುಪತಿ ಭಟ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಜಿಲ್ಲೆ ರಾಜ್ಯದಲ್ಲಿಯೇ ಎಸೆಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣದಲ್ಲಿ ಉನ್ನತ ಸ್ಥಾನವನ್ನು ಪಡೆಯುತ್ತಿದ್ದರೂ, ಶಿಕ್ಷಕರು ಪ್ರಸ್ತುತ ದಿನಗಳಿಗೆ ಅನುಗುಣವಾಗಿ ಕಲಿಕಾ ವಿಧಾನದಲ್ಲಿ ಹೊಸತನದೊಂದಿಗೆ ಗುಣಮಟ್ಟದ ಶಿಕ್ಷಣವನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆ ತಂದು ಇಡೀ ರಾಜ್ಯಕ್ಕೆ ಮಾದರಿಯಾಗಬೇಕು ಎಂದರು.
ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದಕಿರಿಯ ಹಿರಿಯ ಪ್ರಾಥಮಿಕ ಶಾಲಾ ಹಾಗೂ ಪ್ರೌಢ ಶಾಲಾ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಜಿಲ್ಲೆಯಲ್ಲಿ ನಿವೃತ್ತಿ ಹೊಂದಿದ ಶಿಕ್ಷಕರನ್ನೂ ಸಹ ಸನ್ಮಾನಿಸಲಾ ಯಿತು. ಅಮೃತ ಭಾರತಿಗೆ ಕನ್ನಡದಾರತಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪುನೀತ್ ನ್ಯಾನೋ ಉಪಗ್ರಹ ಯೋಜನೆಯಡಿ ಜಿಲ್ಲೆಯ ಪ್ರೌಢಶಾಲೆ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ವಿಜ್ಞಾನ ಸಂಬಂದಿತ ಸ್ಪರ್ಧೆಯಲ್ಲಿ ಭಾಗವಹಿಸುವ ಕುರಿತು ಮಾಹಿತಿ ಪತ್ರಗಳನ್ನು ಬಿಡುಗಡೆ ಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಲ್ಲಾ ಪಂಚಾ ಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಡಿಡಿಪಿಐ ಶಿವರಾಜ್, ಡಯಟ್ನ ಉಪ ನಿರ್ದೇಶಕ ಗೋವಿಂದ ಮಡಿವಾಳ, ಬಿಇಓ ಡಾ.ಅಶೋಕ್ ಕಾಮತ್, ಬಿ.ಟಿ.ನಾಯಕ್, ಚಂದ್ರಾನಾಯ್ಕ್ , ಮತ್ತಿತರು ಉಪಸ್ಥಿತರಿದ್ದರು.