×
Ad

ಹಗರಣಗಳಲ್ಲೇ ಮುಳುಗಿರುವ ರಾಜ್ಯ ಬಿಜೆಪಿ ಸರಕಾರ: ಪ್ರಿಯಾಂಕ್ ಖರ್ಗೆ ಆರೋಪ

Update: 2022-09-06 22:50 IST

ಮಂಗಳೂರು, ಸೆ.6: ರಾಜ್ಯ ಬಿಜೆಪಿ ಸರಕಾರವು ಜನರಿಗೆ ನೀಡಿರುವ ಭರವಸೆಗಳನ್ನು ಮೂಲೆಗೆ ತಳ್ಳಿ ಬರೇ ಹಗರಣಗಳಲ್ಲೇ ಮುಳುಗಿದ್ದು, ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದೆ. ಇದನ್ನು ಜನರು ಗಮನಿಸುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದರು.‌

ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್‌ರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಮಾಸಿಕ ಸಭೆಯಲ್ಲಿ ಅವರು ಭಾಗವಹಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಬಿಜೆಪಿ ಸರಕಾರದ ಅವಧಿಯಲ್ಲಿ ಹಗರಣಗಳೇ ಹೆಚ್ಚುತ್ತಿದ್ದು, ಬೆಲೆಏರಿಕೆ, ನಿರುದ್ಯೋಗ ಸಮಸ್ಯೆ, ಕೋಮು ಸಂಘರ್ಷ, ಆರ್ಥಿಕ ಕುಸಿತಗಳಿಂದ ಜನತೆ ಕಂಗೆಟ್ಟು ಹೋಗಿದ್ದಾರೆ. ಕಾಂಗ್ರೆಸ್ ಸರಕಾರವನ್ನು ಮತ್ತೆ ಅಧಿಕಾರಕ್ಕೆ ತರಲು ಜನರು ಬಯಸಿದ್ದಾರೆ ಎಂದ ಪ್ರಿಯಾಂಕ ಖರ್ಗೆ ಅವರು ಎಐಸಿಸಿ ಮುಖಂಡ ರಾಹುಲ್ ಗಾಂಧಿಯವರ ‘ಭಾರತ್ ಜೋಡೊ’ ಕಾರ್ಯಕ್ರಮವು ದೇಶದಲ್ಲಿ ಹೊಸ ಬದಲಾವಣೆಗೆ ನಾಂದಿ ಹಾಡಲಿದೆ ಎಂದರು.

ಎಐಸಿಸಿ ಕಾರ್ಯದರ್ಶಿ, ಕೇರಳ ಶಾಸಕ ರೋಜಿ ಜಾನ್ ಮಾತನಾಡಿ, ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ 3570 ಕೀ.ಮೀ ಭಾರತ್ ಜೋಡೊ ಪಾದಯಾತ್ರೆ ಆಯೋಜಿಸಲಾಗಿದೆ. ಕರ್ನಾಟಕದಲ್ಲಿ 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ. ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಕರೆ ನಿಡಿದರು.

ಸಭೆಯಲ್ಲಿ ಕೆಪಿಸಿಸಿ ಉಸ್ತುವಾರಿ ಮಧು ಬಂಗಾರಪ್ಪ, ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಶಾಸಕ ಮಂಜುನಾಥ ಭಂಡಾರಿ, ಮಾಜಿ ಶಾಸಕರಾದ ಐವನ್ ಡಿಸೋಜ, ಮೊಯ್ದಿನ್ ಬಾವ, ಜೆ.ಆರ್.ಲೋಬೊ, ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಮಿಥುನ್ ರೈ, ಇನಾಯತ್ ಅಲಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಯು.ಎಚ್. ಖಾಲಿದ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನೀರಜ್ ಚಂದ್ರಪಾಲ್  ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News