×
Ad

ಉಡುಪಿ ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿ; ಕೇಂದ್ರ ಅಧ್ಯಯನ ತಂಡ ಪರಿಶೀಲನೆ

Update: 2022-09-08 19:41 IST

ಉಡುಪಿ, ಸೆ.8: ಜಿಲ್ಲೆಯಲ್ಲಿ ರೈತರು ಬೆಳೆಯುವ ಪ್ರತಿಯೊಂದು ಬೆಳೆಗಳನ್ನೂ ಹಾಗೂ ಮೀನುಗಾರಿಕಾ ಬೋಟ್ ಹಾಗೂ ಪರಿಕರಗಳನ್ನು ವಿಮಾ ವ್ಯಾಪ್ತಿಗೆ ತರುವಂತೆ ಪ್ರೋತ್ಸಾಹಿಸಬೇಕು. ಇದರಿಂದ ಪ್ರಾಕೃತಿಕ ವಿಕೋಪದಿಂದಾಗುವ ವೈಯಕ್ತಿಕ ನಷ್ಟದ ಪ್ರಮಾಣ ಕಡಿಮೆಯಾಗುತ್ತದೆ ಎಂದು ಕೇಂದ್ರ ಮಳೆಹಾನಿ ಅಧ್ಯಯನ ತಂಡದ ಮುಖ್ಯಸ್ಥ ಹಾಗೂ ಕೇಂದ್ರ ಗೃಹ ಸಚಿವಾಲಯದ ಜಂಟಿ ಕಾರ್ಯದರ್ಶಿ ಆಶೀಶ್ ಕುಮಾರ್ ಹೇಳಿದ್ದಾರೆ.

ಗುರುವಾರ ಜಿಲ್ಲೆಯಲ್ಲಿ ಇತ್ತೀಚಿನ ಪ್ರಾಕೃತಿಕ ವಿಕೋಪ ಹಾಗೂ ಮಳೆ ಹಾನಿಯ ಅಧ್ಯಯನಕ್ಕೆ ಆಗಮಿಸಿ, ಉಡುಪಿ ನಗರದ ತಾಲೂಕು ಕಚೇರಿಯಲ್ಲಿ ಜಿಲ್ಲಾಡಳಿತದಿಂದ ಜಿಲ್ಲೆಯಲ್ಲಾದ ಒಟ್ಟು ನಷ್ಟದ ಅಂಕಿಅಂಶಗಳ ವಿವರಗಳನ್ನು ಪಡೆದು ಮಾತನಾಡುತಿದ್ದರು.

ಪ್ರಧಾನ ಮಂತ್ರಿ ಫಸಲ್ ಭೀಮಾಯೋಜನೆ ಸೇರಿದಂತೆ ಬೆಳೆವಿಮೆಗೆ ಸರಕಾರವು ಪ್ರೀಮಿಯಂ ಹಣವನ್ನು ಶೇ.98ರಷ್ಟು ತುಂಬುತ್ತಿದ್ದು, ಬಾಕಿ ಉಳಿದ ಶೇ.2ರಷ್ಟು ಹಣವನ್ನು ರೈತರು ಪಾವತಿಸಿದ್ದಲ್ಲಿ ರೈತರು ತಮಗಾದ ಬೆಳೆ ನಷ್ಠ ಪರಿಹಾರವನ್ನು ಪಡೆಯಬಹುದು.ಈ ಬಗ್ಗೆ ರೈತರಲ್ಲಿ ಅರಿವು ಮೂಡಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆವಿಮೆ ವ್ಯಾಪ್ತಿಗೆ ಒಳಪಡಿಸುವಂತೆ ಸೂಚಿಸಿದರು.

ಮೀನುಗಾರಿಕೆಗೆ ತೆರಳುವ ಬೋಟ್‌ಗಳು ಕಡ್ಡಾಯವಾಗಿ ವಿಮೆಯನ್ನು ಮಾಡಿಸಲು ಮುಂದಾಗಬೇಕು. ವಿಮೆ ನೋಂದಣಿಯಿಂದ ಬೋಟ್‌ಗಳಿಗೆ ನಷ್ಟ ಉಂಟಾದಾಗ ಹೆಚ್ಚಿನ ಪರಿಹಾರವನ್ನು ಪಡೆಯಲು ಸಾದ್ಯವಾಗುತ್ತದೆ ಎಂದರು.

ನೆರೆ ಸಂದರ್ಭದಲ್ಲಿ ರಕ್ಷಣಾ ಕಾರ್ಯದಲ್ಲಿ ಸಮುದಾಯದ ಜನರೇ ಹೆಚ್ಚಾಗಿ ಭಾಗಿಯಾಗುವುದರೊಂದಿಗೆ ಹೆಚ್ಚಿನ ಅನಾಹುತಗಳನ್ನು ತಪ್ಪಿಸುತ್ತಾರೆ. ಇವರೊಂದಿಗೆ ಜಿಲ್ಲಾಡಳಿತವೂ ಸಹ ಕ್ಲಿಷ್ಟಕರ ರಕ್ಷಣಾ ಕಾರ್ಯದಲ್ಲಿ ರಕ್ಷಣಾ ಸಾಮಗ್ರಿಯೊಂದಿಗೆ ತ್ವರಿತವಾಗಿ ಕಾರ್ಯ ಕೈಗೊಳ್ಳಬೇಕು ಎಂದರು.

ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಆಯುಕ್ತ ಮನೋಜ್ ರಾಜನ್ ಮಾತನಾಡಿ, ಜಿಲ್ಲೆಯಲ್ಲಿ ನೆರೆ ಉಂಟಾದ ಸಂದರ್ಭದಲ್ಲಿ ಆ ತಕ್ಷಣದಲ್ಲೇ ಹೋಗಿ ಸ್ಪಂದಿಸಲು ಉಡುಪಿ ಜಿಲ್ಲಾಡಳಿತವು ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಯನ್ನು ರಾಜ್ಯದಲ್ಲಿಯೇ ಉತ್ತಮ ರೀತಿಯಲ್ಲಿ ರೂಪಿಸಿದೆ. 300ಕ್ಕೂ ಹೆಚ್ಚು ಮಂದಿ ಆಪದ್‌ಮಿತ್ರ ಸ್ವಯಂ ಸೇವಕರಿಗೆ ಹಾಗೂ 180ಕ್ಕೂ ಅಧಿಕ  ನೆಹರು ಯುವ ಕೇಂದ್ರದ ಸ್ವಯಂಸೇವಕರಿಗೆ ತರಬೇತಿ ನೀಡಲಾಗಿದೆ ಎಂದರು.

ಬೆಳೆ ಹಾನಿ ಸಮೀಕ್ಷೆಯನ್ನು ಕೃಷಿ ಹಾಗೂ ಕಂದಾಯ ಇಲಾಖೆಯವರು ಜಂಟಿಯಾಗಿ ಮೊಬೈಲ್‌ಆಪ್ ಹಾಗೂ ವೆಬ್‌ಸೈಟ್ ಅನ್ನು ಬಳಸಿ ಮಾಡಿ ನಿಖರ ವರದಿಯನ್ನು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ನೀಡಿದ್ದಾರೆ ಎಂದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಳೆ ಹಾನಿಯ ಅಂಕಿ ಅಂಶಗಳನ್ನು ಅಧ್ಯಯನ ತಂಡಕ್ಕೆ ತಿಳಿಸುತ್ತಾ, ಕಳೆದ ಮಾರ್ಚ್‌ನಿಂದ ಈವರೆಗೆ ಜಿಲ್ಲೆಯಲ್ಲಿ ಇಬ್ಬರು ಮಳೆಯಿಂದ ಮೃತಪಟ್ಟಿದ್ದು,  65 ಮನೆಗಳು ಪೂರ್ಣ ಪ್ರಮಾಣದಲ್ಲಿ, 424 ಭಾಗಶಃ ಹಾನಿಯಾಗಿವೆ. ಹಾಗೂ 1239.73 ಹೆಕ್ಟೇರ್‌ನಷ್ಟು  ಬೆಳೆಹಾನಿ ಉಂಟಾಗಿದೆ ಎಂದರು. 

ಈ ಬಾರಿ ಬಿದ್ದ ಅಧಿಕ ಮಳೆಯಿಂದ 41.8 ಕಿ.ಮೀ. ರಾಷ್ಟ್ರೀಯ ಹೆದ್ದಾರಿ, 56.98 ಕಿ.ಮೀ. ಜಿಲ್ಲಾ ರಸ್ತೆ, 194 ಕಿ.ಮೀ. ನಗರ ಪ್ರದೇಶ ರಸ್ತೆ, 1379.95 ಕಿ.ಮೀ. ಗ್ರಾಮೀಣ ರಸ್ತೆ ಹಾಳಾಗಿದೆ. 120ಕ್ಕೂ ಹೆಚ್ಚು ಸೇತುವೆಗಳು, 1699 ವಿದ್ಯುತ್ ಕಂಬಗಳು ಬಿದ್ದಿವೆ. 335 ಟ್ರಾನ್ಸ್‌ಫಾರಂ ಹಾಳಾಗಿವೆ. 235 ಶಾಲಾ ಕಟ್ಟಡಗಳು, 78 ಮೀನುಗಾರಿಕಾ ದೋಣಿಗಳು, 90ಕ್ಕೂ ಹೆಚ್ಚು ಮೀನು ಬಲೆಗಳು ಹಾನಿಯಾಗಿ ಅಂದಾಜು 263.91 ಕೋಟಿ ರೂ.ನಷ್ಟು  ಮೂಲಭೂತ ಸೌಕರ್ಯಗಳಿಗೆ ಹಾನಿ ಉಂಟಾಗಿದೆ ಎಂದು ವಿವರಿಸಿದರು.

ಆಗಸ್ಟ್ 5ರಿಂದ 7ರವರೆಗೆ 3 ದಿನಗಳ ಕಾಲ ಜಿಲ್ಲೆಯಲ್ಲಿ ಭಾರೀ ಮಳೆ ಸುರಿದು ಹೆಚ್ಚಿನ ಹಾನಿ ಉಂಟಾಗಿದೆ ಎಂದ ಅವರು, ಕಡಲ ಕೊರೆತ ತಡೆಗಟ್ಟಲು ಕಡಲ ಕಿನಾರೆಯಲ್ಲಿ ಮುಂಜಾಗ್ರತೆಯಾಗಿ ಸುರಕ್ಷತಾ ಕಾಮಗಾರಿಗಳನ್ನು ಕೈಗೊಂಡಿದ್ದರೂ ಸಹ ಹೊಸ ಹೊಸ ಜಾಗದಲ್ಲಿ ಕಡಲ ಕೊರೆತ ಉಂಟಾಗಿದೆ ಎಂದರು.

ಜಿಲ್ಲೆಯಲ್ಲಿ ಯಾವುದೇ ಪರಿಸ್ಥಿತಿಯಲ್ಲಿ ನೆರೆ ಉಂಟಾದಲ್ಲಿ ಎದುರಿಸಲು ಜಿಲ್ಲಾ ವಿಪತ್ತು ನಿರ್ವಹಣಾ ತಂಡ ಸರ್ವ ಸನ್ನದ್ಧವಾಗಿದೆ ಎಂದು ಅವರೂ ತಂಡಕ್ಕೆ  ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ, ಕೇಂದ್ರ ಹಣಕಾಸು ಇಲಾಖೆಯ ಉಪ ನಿರ್ದೇಶಕ ಮಹೇಶ್ ಕುಮಾರ್, ಕೇಂದ್ರ ಇಂಧನ ಇಲಾಖೆಯ ಸಹಾಯಕ ನಿರ್ದೇಶಕಿ ಭವ್ಯಾ ಪಾಂಡೆ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾಡಳಿತದಿಂದ ಮಾಹಿತಿಗಳನ್ನು ಕಲೆಹಾಕಿದ ಬಳಿಕ ಕೇಂದ್ರ ತಂಡವು  ಮಳೆಯಿಂದ ಹಾನಿಗೀಡಾದ ಜಿಲ್ಲೆಯ ಮರವಂತೆ, ಶಿರೂರು ಅಳ್ವಗದ್ದೆ  ಸೇರಿದಂತೆ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News