ಅ.2ರಿಂದ ಯಶಸ್ವಿನಿ ಯೋಜನೆ ಮರು ಜಾರಿ: ಸಚಿವ ಎಸ್.ಟಿ. ಸೋಮಶೇಖರ್

Update: 2022-09-13 17:46 GMT

ಬೆಂಗಳೂರು, ಸೆ.13: ಕೇಂದ್ರ ಸರಕಾರದ ಆಯುಷ್ಮಾನ್ ಭಾರತ್ ಯೋಜನೆಯ ಜತೆಯಲ್ಲಿಯೇ ಈ ಹಿಂದೆ ಇದ್ದ ಯಶಸ್ವಿನಿ ಯೋಜನೆಯನ್ನು ಅ.2ರಿಂದ ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. 

ಮಂಗಳವಾರ ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್ ರಾಥೋಡ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಆಯುಷ್ಮಾನ್, ಯಶಸ್ವಿನಿ ಯೋಜನೆ ಎರಡೂ ಇರಲಿವೆ. ಹಿಂದೆ ಇದ್ದ ಎಲ್ಲ ವ್ಯವಸ್ಥೆ ಅಳವಡಿಸಿಕೊಂಡು ಯಶಸ್ವಿನಿ ಯೋಜನೆ ಜಾರಿಯಾಗಲಿದೆ. ಅನುಷ್ಠಾನದ ನಂತರ ಯಾವುದೇ ತೊಂದರೆ ಆಗಬಾರದು ಎಂದು ಎಲ್ಲ ಆಯಾಮದಲ್ಲಿಯೂ ಪರಿಶೀಲಿಸಿ ಸಮಯ ಪಡೆದು ಯೋಜನೆ ಜಾರಿ ಮಾಡುತ್ತಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಮಾತನಾಡಿ, ಗ್ರಾಮೀಣ ಕರ್ನಾಟಕದ ರೈತಾಪಿ ವರ್ಗದ ಆರೋಗ್ಯದ ದೃಷ್ಟಿಯಿಂದ ನಾನು ಸಹಕಾರ ಮಂತ್ರಿ, ಎಸ್.ಎಂ.ಕೃಷ್ಣ ಸಿಎಂ ಆಗಿದ್ದಾಗ ಯಶಸ್ವಿನಿ ಯೋಜನೆಯನ್ನು ಜಾರಿಗೆ ತರಲಾಗಿತ್ತು. ಆದರೆ, ಕಾಂಗ್ರೆಸ್ ಜಾರಿಗೆ ತಂದ ಯೋಜನೆಯನ್ನೇ ಮತ್ತೊಂದು ಕಾಂಗ್ರೆಸ್ ಸರಕಾರ ರದ್ದುಗೊಳಿಸಿದ್ದು ದುರ್ದೈವದ ಸಂಗತಿಯಾಗಿದೆ. ಈಗ ಬಿಜೆಪಿ ಸರಕಾರ ಮತ್ತೆ ಜಾರಿಗೆ ತರುತ್ತಿರುವುದು ಸಂತಸದ ವಿಷಯ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News