ತೋಟದ ಮನೆಗಳಿಗೆ ವಿದ್ಯುತ್ ನೀಡಲು ಸರಕಾರ ಬದ್ಧ: ಸಚಿವ ಸುನಿಲ್ ಕುಮಾರ್

Update: 2022-09-15 13:16 GMT

ಬೆಂಗಳೂರು, ಸೆ. 15: ‘ರೈತರಿಗೆ 7 ಗಂಟೆ ವಿದ್ಯುತ್ ಪೂರೈಕೆ ಮಾಡಲು ಸರಕಾರ ಬದ್ಧ. ಜೊತೆಗೆ ತೋಟದ ಮನೆಗಳಿಗೆ ಸಿಂಗಲ್ ಫೇಸ್ ವಿದ್ಯುತ್ ಒದಗಿಸಲಾಗುವುದು. ಹೀಗಾಗಿ ಯಾರೂ ಆತಂಕಪಡುವ ಅಗತ್ಯವಿಲ್ಲ' ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಸ್ಪಷ್ಟಣೆ ನೀಡಿದ್ದಾರೆ.

ಗುರುವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಕೌಜಲಗಿ ಮಹಾಂತೇಶ್ ಶಿವಾನಂದ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ‘ಈ ಬಗ್ಗೆ ಕೆಲವರು ಅನಗತ್ಯವಾಗಿ ಗೊಂದಲ ಸೃಷ್ಟಿ ಮಾಡುತ್ತಿದ್ದು, ಇದರಲ್ಲಿ ಯಾವುದೇ ಸತ್ಯಾಂಶವಿಲ್ಲ. ಇದರಲ್ಲಿ ಯಾವುದೇ ಬದಲಾವಣೆ ಮಾಡುವ ಪ್ರಸ್ತಾವನೆ ಸರಕಾರದ ಮುಂದಿಲ್ಲ' ಎಂದು ತಿಳಿಸಿದರು.

‘ಕೆಇಆರ್‍ಸಿ ಮತ್ತು ಇಂಧನ ಇಲಾಖೆ ನಿಗದಿಪಡಿಸಿರುವ ಪ್ರಮಾಣದಲ್ಲಿ ವ್ಯತ್ಯಾಸ ಆಗಿರಬಹುದು. ಆದರೂ ರೈತರ ಐಪಿ ಸೆಟ್‍ಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಂಡಿದ್ದೇವೆ. ರೈತರಿಗೆ ತೊಂದರೆ ಕೊಡಬೇಕೆಂಬ ಉದ್ದೇಶ ಸರಕಾರಕ್ಕಿಲ್ಲ. ಹಿಂದಿನ ವ್ಯವಸ್ಥೆಯನ್ನು ಮುಂದುವರೆಸಲಾಗುವುದು. ತೋಟದ ಮನೆಗಳಿಗೆ ವಿದ್ಯುತ್ ಪೂರೈಕೆ ಮಾಡಬೇಕೆಂಬ ಬೇಡಿಕೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಹಿಂದಿನ ನಿಯಮಗಳ ಅನ್ವಯ ತೋಟದ ಮನೆಗಳಿಗೆ ವಿದ್ಯುತ್ ಒದಗಿಸಲಾಗುವುದು' ಎಂದು ಹೇಳಿದರು.

‘ತೋಟದ ಮನೆಗಳಿಗೆ ಪ್ರತ್ಯೇಕವಾದ ಟಿಸಿ ಅಳವಡಿಸಿ ವಿದ್ಯುತ್ ಪೂರೈಕೆ ಮಾಡಬೇಕೆಂಬ ಚಿಂತನೆ ಇದೆ. ಇದನ್ನು ಪ್ರಾಯೋಗಿಕವಾಗಿ ಬೈಲಹೊಂಗಲ, ಜಮಖಂಡಿ ಸೇರಿದಂತೆ ಐದು ಕಡೆ ಅನುಷ್ಠಾನ ಮಾಡುತ್ತಿದ್ದೇವೆ. ಇದು ಯಶಸ್ವಿಯಾದರೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲೂ ವಿಸ್ತರಣೆ ಮಾಡುವ ಚಿಂತನೆ ಇದೆ. ಈ ಕುರಿತು ವರದಿ ನೀಡಲು ಸೂಚಿಸಲಾಗಿದೆ. ಈ ವರದಿ ಬಂದ ನಂತರ ಸರಕಾರ 1.29ಲಕ್ಷ ತೋಟದ ಮನೆಗಳಿಗೆ ವಿದ್ಯುತ್ ಪೂರೈಕೆಗೆ ಬದ್ಧವಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News