ಮೂಡುಬಿದಿರೆ: ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಪ್ರತಿಭಾ ಕಾರಂಜಿ

Update: 2022-09-16 17:02 GMT

ಮೂಡುಬಿದಿರೆ:  ಶಿಕ್ಷಣದೊಂದಿಗೆ ಪಠ್ಯೇತರ ಚಟುವಟಿಕೆಗಳು ಸೇರಿದಾಗ ವಿದ್ಯಾರ್ಥಿಯ ಪರಿಪೂರ್ಣ ಬೆಳವಣಿಗೆ ಸಾಧ್ಯ. ಅದರೊಂದಿಗೆ ನಮ್ಮ ಮೂಡಬಿದಿರೆ ತಾಲೂಕಿನ ವಿವಿಧ ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಹಾಗೂ ರಾಜ್ಯಮಟ್ಟದಲ್ಲಿ ಪ್ರಶಸ್ತಿ ಪಡೆದುಕೊಳ್ಳಬೇಕೆಂದು ಮೂಡಬಿದ್ರೆ ಪುರಸಭೆಯ ಅಧ್ಯಕ್ಷ ಪ್ರಸಾದ್ ಕುಮಾರ್ ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮೂಡಬಿದಿರೆ ಮತ್ತು ಎಕ್ಸಲೆಂಟ್ ಶಿಕ್ಷಣ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಕಲ್ಲಬೆಟ್ಟು ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯಲ್ಲಿ ಜರಗಿದ ಮೂಡಬಿದ್ರೆ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ -2022 ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರತಿಭೆಗಳ ಅನಾವರಣಕ್ಕೆ ಇದೊಂದು ಉತ್ತಮ ವೇದಿಕೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ್ ಜೈನ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಸ್ಪರ್ಧಾತ್ಮಕ ಮನೋಭಾವಕ್ಕಿಂತ ಸ್ಪರ್ಧೆಗಳಲ್ಲಿ ಭಾಗವಹಿಸುವ ಹುಮ್ಮಸ್ಸನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಸೋಲೇ ಗೆಲುವಿನ ಸೋಪಾನ, ಗುರಿ ಮುಂದೆ ಇದ್ದಾಗ ಸಾಧಿಸುವ ಛಲ ಇದ್ಧಾಗ ಯಶಸ್ಸು ಸಾಧ್ಯ ಅದರಂತೆ ವಿವಿಧ ಶಾಲೆಯ ಕಿರಿಯ ಹಾಗೂ ಹಿರಿಯ ಮಕ್ಕಳು ಈ ರೀತಿಯಲ್ಲಿ ತಯಾರಿ ನಡೆಸಿಕೊಂಡು ಬಂದಿರುವುದನ್ನು ನೋಡಿ ನನಗೆ ಬಹಳ ಸಂತೋಷವಾಗುತ್ತಿದೆ. ಈ ಸ್ಪರ್ದೆಯಲ್ಲಿ ಸೋತ ವಿದ್ಯಾರ್ಥಿಗಳು ಕೂಡ ಎದೆಗುಂದದೆ ಕೇವಲ ಪ್ರಶಸ್ತಿಗಾಗಿ ಸ್ಪರ್ದೆ ಎಂದುಕೊಳ್ಳದೆ ಎಲ್ಲರೂ ನಾನು ಭಾಗವಹಿಸಿದ್ದೇನೆ ಎಂಬ ಮನೋಭಾವದೊಂದಿಗೆ ಸಂತೋಷ ಪಡಬೇಕು ಹಾಗೂ ಈ ವೇದಿಕೆಯ ಮೂಲಕ ಉನ್ನತ ಪ್ರತಿಭೆಗಳು ದೇಶಕ್ಕೆ ಕೊಡುಗೆಯಾಗಲಿ ಎಂದು ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೂಡಬಿದ್ರೆ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಗಣೇಶ್ ವೈ ಮಾತನಾಡುತ್ತಾ ಗ್ರಾಮೀಣ ಪ್ರದೇಶದಲ್ಲಿರುವ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಹೊರ ಹಾಕಲು ಇದೊಂದು ಉತ್ತಮವಾದ ವೇದಿಕೆ ಎಂದು ನುಡಿದರು. ಇನ್ನೋರ್ವ ಅತಿಥಿ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ಇವರು ಅತಿ ಚಿಕ್ಕ ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹೊರತೆಗೆಯಲು ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಇಂತಹ ಸಾಧನೆಯನ್ನು ಮಾಡುತ್ತಿರುವ ಶಿಕ್ಷಕರನ್ನು ನಾನು ಪ್ರಶಂಸಿಸುತ್ತೇನೆ ಎಂದು ನುಡಿದರು.

ಸಮಾರಂಭದಲ್ಲಿ ಜಿಲ್ಲಾ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ ಶೋಭಾ, ಮೂಡಬಿದ್ರಿ ತಾಲ್ಲೂಕಿನ ಎಲ್ಲಾ ಶಿಕ್ಷಕ ಸಂಘದ ಅಧ್ಯಕ್ಷರುಗಳು, ಕ್ಷೇತ್ರ ಶಿಕ್ಷಣ ಸಮನ್ವಯಧಿಕಾರಿ, ದೈಹಿಕ ಶಿಕ್ಷಣ ಪರಿವೀಕ್ಷಕರು, ಶಿಕ್ಷಣ ಸಂಯೋಜಕರು, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳು, ಸಮೂಹ ಸಂಪನ್ಮೂಲ ಅಧಿಕಾರಿಗಳು, ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಪ್ರಾಂಶುಪಾಲ ಪ್ರದೀಪ್ ಕುಮಾರ್ ಶೆಟ್ಟಿ ಇವರು ಉಪಸ್ಥಿತರಿದರು.

ಮೂಡಬಿದ್ರಿ ತಾಲೂಕು ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿ  ರಾಜೇಶ್ ಭಟ್ ಇವರು ಸ್ವಾಗತಿಸಿ ಪ್ರಸ್ತಾವನೆ ಗೈದರು. ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಮುಖ್ಯ ಶಿಕ್ಷಕ ಶಿವಪ್ರಸಾದ್ ಭಟ್ ಇವರು ವಂದನಾರ್ಪಣೆಗೈದರು. ಕನ್ನಡ ಅಧ್ಯಾಪಕ ಶ್ರೀ ನಿತೇಶ್ ಬಲ್ಲಾಳ್ ಕಾರ್ಯಕ್ರಮ ನಿರೂಪಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News