ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ ಪ್ರೆಸ್ ಹೆದ್ದಾರಿ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Update: 2022-09-17 07:42 GMT

ಕಲಬುರಗಿ, ಸೆ.17:  ಬೀದರ್ ದಿಂದ ಬಳ್ಳಾರಿವರೆಗೆ 4 ವೇ ಎಕ್ಸ್ಪ್ರೆ ಸ್ ಹೈವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ ಸಂಪರ್ಕ ಉತ್ತಮ ಗೊಳಿಸಲು ಈ ಹೆದ್ದಾರಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಈ ಭಾಗದಲ್ಲಿ ರಾಯಚೂರು,  ಬಳ್ಳಾರಿ ವಿಮಾನ ನಿಲ್ದಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರದ ನೆರವಿನೊಂದಿಗೆ ಯಾದಗಿರಿ, ರಾಯಚೂರು, ಗುಲಬರ್ಗ ರಿಂಗ್ ರೋಡ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಕೈಗಾರಿಕಾ ಅಭಿವೃದ್ಧಿ: ಈ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ. 

ಕೇಂದ್ರ ಸರ್ಕಾರ ಕಲಬುರ್ಗಿಯಲ್ಲಿ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣ ಮಾಡಲು ತೀರ್ಮಾನ ಮಾಡಿದೆ.  ರಾಜ್ಯ ಸರ್ಕಾರ ರಾಯಚೂರು ಹಾಗೂ ಬಿಜಾಪುರ ರಲ್ಲಿ ಟೆಕ್ಸ್ಟೈಲ್ ಪಾರ್ಕ್ ಮಾಡಲು ನಿರ್ಧರಿಸಿದೆ. ಇದರಿಂದ ಕನಿಷ್ಠ 25 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಶೀಘ್ರವೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು. 

ಇದಲ್ಲದೆ ಬಳ್ಳಾರಿಯಲ್ಲಿ ಜೀನ್ಸ್‍ ಪಾರ್ಕ್, ಯಾದಗಿರಿಯಲ್ಲಿ ಫಾರ್ಮಾಸೂಟಿಕಲ್ ಕ್ಲಸ್ಟರ್ ನಿರ್ಮಿಸಲಾಗುವುದು. ಕೊಪ್ಪಳದಲ್ಲಿ ಈಗಾಗಲೇ ಆಟಿಕೆಗಳ ಕ್ಲಸ್ಟರ್ ನಿರ್ಮಾಣವಾಗುತ್ತಿದೆ. ಬೀದರ್‍ ನಲ್ಲಿ ಕೇಂದ್ರದ ನೆರವಿನೊಂದಿಗೆ 90 ಕೋಟಿ ರೂ. ವೆಚ್ಚದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಿಪೆಟ್ ಸಂಸ್ಥೆ ಪ್ರಾರಂಭಿಸಲಾಗುವುದು. ಹೀಗೆ ಪ್ರತಿ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು

'ಪಕ್ಷಭೇದ ಮರೆತು ಶ್ರಮಿಸಿ': ಸಿಎಂ ಕಿವಿಮಾತು

ಈ ಭಾಗದ ಅಭಿವೃದ್ದಿಯಾಗಬೇಕೆಂದರೆ ರಾಜಕಾರಣಿಗಳು ಪಕ್ಷಬೇದ ಮರೆತು ಕೆಲಸ ಮಾಡಬೇಕು.ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು.  ರಾಜಕಾರಣ ಮಾಡಿದರೆ ಈ ಭಾಗಕ್ಕೆ ದೊಡ್ಡ ದ್ರೋಹ ಮಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಲಬುರಗಿ ಅಭಿವೃದ್ಧಿ: ಕಲಬುರ್ಗಿ ಅಭಿವೃದ್ಧಿಗೆ 100 ಕೋಟಿ ನೀಡಿದ್ದೇನೆ.  ಕಲಬುರ್ಗಿ ಕರ್ನಾಟಕದ ಭವಿಷ್ಯದ ನಗರ, ಇಲ್ಲಿ ಎಲ್ಲ ರೀತಿಯ ವೈ ಫೈ ಕನೆಕ್ಟ್, ಕೇಬಲ್ ಕನೆಕ್ಟ್ ಮತ್ತಿತರ ಅತ್ಯಾಧುನಿಕ ಸೌಲಭ್ಯ ಒದಗಿಸುವ ಮೂಲಕ  ಅಂತಾರಾಷ್ಟ್ರೀಯ ನಗರ ಮಾಡಲು ತೀರ್ಮಾನಿಸಿದ್ದೇವೆ ಎಂದರು.

ಸಮಸ್ತ ಕರ್ನಾಟಕ ಅಭಿವೃದ್ದಿಯಾಗುತ್ತಿರುವ ಈ ಸಮಯದಲ್ಲಿ ಐತಿಹಾಸಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕವೂ ಅಷ್ಟೇ ವೇಗವಾಗಿ ಬೆಳೆಯಬೇಕು. ಕಲ್ಯಾಣ ಕರ್ನಾಟಕದ ಮೂಲಕ ನವ ಕರ್ನಾಟಕ ಹಾಗೂ ನವ ಭಾರತದ ಅಭಿವೃದ್ದಿಯಾಗಬೇಕು ಎಂದು ಮುಖ್ಯಮಂತ್ರಿಗಳು ಆಶಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News