ಕೆಕೆಆರ್ ಡಿಬಿಗೆ 5000 ಕೋ.ರೂ. ಬಿಡುಗಡೆ ವಿಚಾರ ಮೂಗಿಗೆ ತುಪ್ಪ ಸವರಿದ ಸಿಎಂ: ಶಾಸಕ ಪ್ರಿಯಾಂಕ್ ಖರ್ಗೆ

Update: 2022-09-18 10:14 GMT

ಕಲಬುರಗಿ, ಸೆ.18: ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ ರೂ.5,000 ಕೋಟಿ ನೀಡುವುದಾಗಿ ನಿನ್ನೆ ಸಿಎಂ ಹೇಳಿ ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ. ಮುಂದೆ ಚುನಾವಣೆ ಬರುತ್ತಿದೆ, ಈ ಅನುದಾನ ಬಿಡುಗಡೆ ಅಸಾಧ್ಯ ಎಂದು ಮಾಜಿ ಸಚಿವ, ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಕೆಆರ್ ಡಿಬಿಗೆ ಘೋಷಿತ ಅನುದಾನ 3,000 ಕೋ.ರೂ.ನಲ್ಲಿ ಕೇವಲ 1,500 ಕೋ.ರೂ. ಮಾತ್ರ ಬಿಡುಗಡೆ ಮಾಡಿ ಉಳಿದ 1,500 ಕೋ.ರೂ.ನ್ನು ಎಸ್ ಡಿ ಪಿನಲ್ಲಿ ಬಿಡುಗಡೆ ಮಾಡದೇ ಮಹಾತ್ವಾಕಾಂಕ್ಷೆ ತಾಲೂಕುಗಳೆಂದು ಮರುನಾಮಕರಣ ಮಾಡಿ ಬಿಡುಗಡೆ ಮಾಡುತ್ತಿದ್ದಾರೆ. ಆ ಅನುದಾನ ಹೆಡ್ ಆಫ್ ಅಕೌಂಟ್ ಗೆ ಬರುವುದಿಲ್ಲ. ಘೋಷಿತ ಅನುದಾನವನ್ನೇ ಸರಿಯಾಗಿ ಬಿಡುಗಡೆ ಮಾಡದ ಸಿಎಂ ಮತ್ತೆ 5,000 ಕೋ.ರೂ. ನೀಡುವುದಾಗಿ ಹೇಳಿದ್ದಾರೆ. ಇದನ್ನು ಗಮನಿಸಿದರೆ, ಬೊಮ್ಮಾಯಿ ಅವರು ಮೋದಿಗಿಂತಲೂ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ. ಡಬಲ್ ಇಂಜಿನ್ ಸರಕಾರದ ದೋಖಾ ಹಾಗೂ ಬೊಮ್ಮಾಯಿಯವರ ಬಂಡಲ್ ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆಯಾಗುತ್ತಿದೆ ಎಂದು ಹರಿಹಾಯ್ದರು.

ಸ್ಥಳೀಯ ಮುಖಂಡರ ನಿರಾಸಕ್ತಿಯಿಂದ ಕಲಬುರಗಿಯಲ್ಲಿ ಅಭಿವೃದ್ಧಿಯಾಗಿಲ್ಲ ಎಂದು ಸಿಎಂ ಹೇಳಿದ್ದಾರೆ, ನಿಮ್ಮ ಅವಧಿಯಲ್ಲಿ ಐದು ಸಿಎಂ ಕೊಟ್ಟಿದ್ದೀರಲ್ಲ ನಿಮ್ಮ ಕೊಡುಗೆ ಏನಿದೆ?  ನೀವು ನಿನ್ನೆ ಉದ್ಘಾಟನೆ ಮಾಡಿದ ಕಮಿಷನರ್ ಕಚೇರಿಗೆ ಅಡಿಗಲ್ಲು ಹಾಕಿದ್ದೇ ನಾನು. ನೀವು ಬಂದಿಳಿದ ವಿಮಾನ ನಿಲ್ದಾಣ ನಿರ್ಮಿಸಿದ್ದೇ ನಮ್ಮ ಅವಧಿಯಲ್ಲಿ, ನಿನ್ನೆ ನೀವು ಓಡಾಡಿದ ರಸ್ತೆ ನಿರ್ಮಾಣ ಮಾಡಿದ್ದೆ ನಾವು ಎಂದು ಪ್ರಿಯಾಂಕ್ ತಿರುಗೇಟು ನೀಡಿದರು.

ಯುಪಿಎ ಅವಧಿಯಲ್ಲಿ ಮಂಜೂರಾಗಿದ್ದ ರೈಲ್ವೆ ವಲಯ, ನಿಮ್ಝ್, ಜವಳಿ ಪಾರ್ಕ್, ಏಮ್ಸ್, ಮೇಕ್ ಇನ್ ಇಂಡಿಯಾ, ಇಎಸ್ ಐ ಮೇಲ್ದರ್ಜೆಗೆ ಏರಿಸುವ ಯೋಜನೆಗಳೆಲ್ಲ ಏನಾದವು? ಎಂದು ಪ್ರಶ್ನಿಸಿದ ಅವರು, ಕಲಬುರಗಿ ಸಂಸದ ಉಮೇಶ್ ಜಾಧವ್ ಈ ಮೂರು ವರ್ಷಗಳಲ್ಲಿ ಏನು ಮಾಡಿದ್ದಾರೆ? ಮೋದಿ ಅವರ ಮನ್ ಕಿ ಬಾತ್ ನ್ನು ಕನ್ನಡದಲ್ಲಿ ಅನುವಾದ ಮಾಡಿ ಹೇಳಿದ್ದು ಹಾಗೂ ಕೇಂದ್ರಿಯ ವಿವಿಯನ್ನು ಆರೆಸ್ಸೆಸ್ ಕೇಂದ್ರವನ್ನಾಗಿ ಪರಿವರ್ತನೆ ಮಾಡುತ್ತಿರುವುದೇ ಇವರ ಸಾಧನೆಯಾಗಿದೆ. ರಾಜ್ಯ, ರಾಷ್ಟ್ರೀಯ ಹೆದ್ದಾರಿಗಳು, ರೈಲ್ವೆ ಮೇಲ್ಸೇತುವೆ ಹಾಗೂ ಕೆಳ ಸೇತುವೆ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಗುತ್ತಿಗೆದಾರರ ಬಳಿ ಹಣ ವಿದ್ದರೆ ಕಾಮಗಾರಿ ಮುಂದುವರಿಸಲಿ ಎರಡು ವರ್ಷದ ನಂತರ ಬಿಲ್ ಮಾಡುವುದಾಗಿ ಅಧಿಕಾರಿಗಳು ಹೇಳುತ್ತಿದ್ದಾರೆ. ಇದೇನಾ ಅಭಿವೃದ್ಧಿ ಎಂದರೆ ಪ್ರಿಯಾಂಕ್ ಟೀಕಿಸಿದರು.

ಕಲಬುರಗಿಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಅಭಿವೃದ್ಧಿ ಮಾಡುವುದಾಗಿ ಬೊಮ್ಮಾಯಿ ಹೇಳಿದ್ದಾರೆ. ಕೊನೆ ಪಕ್ಷ ಇಲ್ಲಿನ ಉಸ್ತುವಾರಿ ಸಚಿವರನ್ನು ಸಂಪರ್ಕಿಸಿ ಭಾಷಣ ತಯಾರು ಮಾಡಿಕೊಳ್ಳಬೇಕಿತ್ತು. ನಿರಾಣಿ ಅವರು ಮಿಷನ್ 20/20 ಎನ್ನುತ್ತಾರೆ. 2019ರಲ್ಲಿ ಕೊರೆದ ಕೊಳವೆಬಾವಿಗಳ ಬಿಲ್ ಪಾವತಿಯಾಗಿಲ್ಲ ಇನ್ನೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೇಗೆ ಅಭಿವೃದ್ದಿ ಮಾಡುತ್ತಾರೆ ಎಂದು ಪ್ರಿಯಾಂಕ್ ಪ್ರಶ್ನಿಸಿದರು.

ಕಲಬುರಗಿಯಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ ಜವಳಿ ಪಾರ್ಕ್ ಯೋಜನೆಯಲ್ಲಿ ಅವ್ಯವಹಾರವಾಗಿದೆ ಎಂದು ನಾನು ಹೇಳಿದರೆ ಪ್ರಿಯಾಂಕ್ ಬರೀ ಆರೋಪ ಮಾಡುತ್ತಾರೆ ಎನ್ನುತ್ತಾರೆ. ಹಾಗಾಗಿ ನಾನು ಲಿಖಿತ ಪ್ರಶ್ನೆ ಕೇಳಿದಾಗ ಇಲಾಖೆಯ ಉನ್ನತ ಅಧಿಕಾರಿಗಳು ಉತ್ತರಿಸಿ, ಈ ಯೋಜನೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಕುರಿತು ತನಿಖೆ ನಡೆಯುತ್ತಿದೆ. ಇದರಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ದ ದೋಷಾರೋಪಣೆ ಪಟ್ಟಿ ತಯಾರಿಸಿ ಕ್ರಮ ಜರುಗಿಸಲಾಗುವುದು ಎಂದಿದ್ದಾರೆ. ಇದರರ್ಥ ಯೋಜನೆಯಲ್ಲಿ ಅವ್ಯವಹಾರ ನಡೆದಿದೆ ಎಂದಂತಲ್ಲವೇ? ಎಂದರು.

ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಅಭಿವೃದ್ಧಿ, ಕೃಷಿ ಹಾಗೂ ಸಾಂಸ್ಕೃತಿಕ ಸಂಘಕ್ಕೆ ಕಾನೂನು ಬಾಹಿರವಾಗಿ ಕೆಕೆಆರ್ ಡಿಬಿ ಯ ಅನುದಾನ ಬಿಡುಗಡೆ ಮಾಡಿರುವುದ ಕುರಿತು ನಾನು ಅಧಿವೇಶನದಲ್ಲಿ ಪ್ರಶ್ನೆ ಎತ್ತಿದಾಗ, ಕಾನೂನು ಸಚಿವರು ಹಾಗೆ ಮಾಡಲು ಬರುವುದಿರಲ್ಲ ಒಂದು ವೇಳೆ ಬಿಡುಗಡೆ ಮಾಡಿದ್ದರೆ ತನಿಖೆ ನಡೆಸುವುದಾಗಿ ಹೇಳಿದ್ದಾರೆ. ನಂತರ, ತೋಟಗಾರಿಕೆ, ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವರಾದ ಮನಿರತ್ನ ಅವರು ಕೆಕೆಆರ್ ಡಿಬಿ ಯಿಂದ ಸಂಘಕ್ಕೆ ಬಿಡುಗಡೆಯಾದ ಅನುದಾನದ ಬಳಕೆ ಹಾಗೂ ಮಾಡಿರುವ ಕಾಮಗಾರಿಗಳ ಕುರಿತು ಸ್ಥಳ ಪರಿಶೀಲನೆ ಮಾಡಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶ ಮಾಡಿರುತ್ತಾರೆ. ಆದರೆ, ತನಿಖೆ ಈಗ ನಿಂತಿದೆ. ಯಾರ ಒತ್ತಡದಿಂದಾಗಿ ತನಿಖೆ ನಡೆಯುತ್ತಿಲ್ಲ ಎನ್ನುವುದು ಗೊತ್ತಾಗಬೇಕು. ಇಷ್ಟಾದರೂ ಸಂಘದ ವಿರುದ್ದ ಯಾಕೆ ಕ್ರಮ ಜರುಗಿಸಿಲ್ಲ?  ಇದನ್ನು ಗಮನಿಸಿದರೆ ಕಲಬುರಗಿ ಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದೆ. ಕೆಕೆಆರ್ಡಿಬಿಯ ಅನುದಾನ ದುರ್ಬಳಕೆಯಾಗುತ್ತಿದೆ ಹಾಗಾಗಿ ಕೆಕೆಆರ್ ಡಿಬಿಯನ್ನು ಸಿಸಿಆರ್ಡಿಬಿ ( Collection and Corruption Regional Development Board ) ಎಂದು ಮರುನಾಮಕರಣ ಮಾಡುವುದು ಉಚಿತ ಎಂದು ಕುಟುಕಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News