×
Ad

ಭಾರತ್ ಜೋಡೋ ಪಾದಯಾತ್ರೆಯಿಂದ ನಮಗೆ ಚುನಾವಣೆಯಲ್ಲಿ ರಾಜಕೀಯ ಲಾಭ: ಸಿದ್ದರಾಮಯ್ಯ

Update: 2022-09-18 19:23 IST

ಮೈಸೂರು,ಸೆ.18: 'ಭಾರತವನ್ನು ಒಗ್ಗೂಡಿಸುವಂತೆ (ಭಾರತ್ ಜೋಡೋ) ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುಂದಾಳತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಯುತ್ತಿರುವ ಪಾದಯಾತ್ರೆ ಮೈಸೂರಿಗೆ ಬಂದ ವೇಳೆ ಹೆಚ್ಚಿನ ಜನರನ್ನು ಸೇರಿಸಿ ಯಶಸ್ವಿಗೊಳಿಸಬೇಕು. ಹಾಗೇ ರಾಹುಲ್ ಗಾಂಧಿ ಅವರಿಗೆ ಹೆಗಲಿಗೆ ಹೆಗಲು ಕೊಟ್ಟು ಶಕ್ತಿ ತುಂಬಬೇಕು' ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾಂಗ್ರೆಸ್ ಮುಖಂಡರುಗಳು ಹಾಗೂ ಕಾರ್ಯಕರ್ತರಿಗೆ ಕರೆ ನೀಡಿ

ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ವತಿಯಿಂದ ನಗರ ಕಾಂಗ್ರೆಸ್ ಭವನದ ಆವರಣದಲ್ಲಿ  ರವಿವಾರ ನಡೆದ ಭಾರತ್ ಜೋಡೋ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ನಂತರ ಯಾವುದೇ ಪಕ್ಷ, ನಾಯಕ ಮಾಡದ ಪಾದಯಾತ್ರೆಯನ್ನು ರಾಹುಲ್ ಗಾಂಧಿ ಮಾಡುತ್ತಿದ್ದಾರೆ ಎಂದರು.

ಪಾದಯಾತ್ರೆಯಿಂದ ನಮಗೆ ರಾಜಕೀಯ ಲಾಭ ಇದೆ. ಮುಂದಿನ 6 ತಿಂಗಳಲ್ಲಿ ವಿಧಾನಸಭಾ ಚುನಾವಣೆ ಬರಲಿದೆ. ರಾಹುಲ್ ಗಾಂಧಿ ಮೈಸೂರು-ಚಾಮರಾಜನಗರ ಜಿಲ್ಲೆಗಳಿಗೆ ಬಂದಾಗ ಹೆಚ್ಚು ಜನರನ್ನು ಸೇರಿಸಿದರೆ ರಾಜಕೀಯ ಲಾಭ ಆಗುತ್ತದೆ. ಈ ಐತಿಹಾಸಿಕ ಪಾದಯಾತ್ರೆ ಯಶಸ್ವಿಗೊಳಿಸಬೇಕು. ಪ್ರತಿ ವಿಧಾನಸಭಾ ಕ್ಷೇತ್ರದಿಂದ 5 ಸಾವಿರಕ್ಕಿಂತ ಹೆಚ್ಚಿನ ಜನರನ್ನು ಕರೆತರಬೇಕು ಎಂದು ಹೇಳಿದರು.

ನರೇಂದ್ರ ಮೋದಿ 8 ವರ್ಷಗಳ ಆಡಳಿತದಲ್ಲಿ ತಳ ಸಮುದಾಯದ, ಮಧ್ಯಮ ವರ್ಗದ ಜನರು ನೆಮ್ಮದಿಯಾಗಿಲ್ಲ. ಸಮಾಜದಲ್ಲಿ ಶಾಂತಿ ಇಲ್ಲ. ಧರ್ಮ ರಾಜಕಾರಣದ ಮೂಲಕ ದೇಶವನ್ನು ಒಡೆಯಲಾಗುತ್ತಿದೆ. ಯಾವುದೇ ಧರ್ಮದ ಆಧಾರದಲ್ಲಿ ದೇಶ ಇಲ್ಲ. ನಾವೆಲ್ಲ ಮನುಷ್ಯರು ಮನುಷ್ಯರಾಗಿ ಬಾಳಬೇಕು ಎಂದರು.

ವಿಧಾನ ಪರಿಷತ್ತಿನಲ್ಲಿ ಒಪ್ಪಿಗೆ ಪಡೆದ ಮತಾಂತರ ನಿಷೇಧ ಮಸೂದೆ ಸಂವಿಧಾನ ವಿರೋಧಿ. ಅರ್ಟಿಕಲ್ 25 ಯಾವುದೇ ಧರ್ಮ ಪಾಲನೆ ಮಾಡುವ ಹಕ್ಕನ್ನು ಕೊಟ್ಟಿದೆ. ಅದರ ಉಲ್ಲಂಘನೆ ಮಾಡಲಾಗಿದೆ. ಅಲ್ಪಸಂಖ್ಯಾತರನ್ನು ಗುರಿಯಾಗಿಸಿ ಮಾಡಿದ ಕಾನೂನು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದ ಇತಿಹಾಸದಲ್ಲಿಯೇ ಅತ್ಯಂತ ಭ್ರಷ್ಟ ಸರ್ಕಾರ ಆಡಳಿತದಲ್ಲಿದೆ. ಭಾರತ ಸರ್ಕಾರದಲ್ಲೂ ಭ್ರಷ್ಟಾಚಾರ ಇದೆ. ಇದು ನಾಚಿಕೆಗೇಡು. ಮಾನ  ಮರ್ಯಾದೆ ಗೌರವ ಏನೂ ಇಲ್ಲ. ನಾಚಿಕೆಗೆಟ್ಟ ಜನ ಎಂದು ಟೀಕಿಸಿದರು.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾತನಾಡಿ, 'ವಿಜಯದಶಮಿ ವೇಳೆ ರಾಹುಲ್ ಗಾಂಧಿ ನೇತೃತ್ವದ ಪಾದಯಾತ್ರೆ ಮೈಸೂರಿಗೆ ಬರಲಿದೆ. ಪ್ರತಿ ವಿಧಾನಸಭಾ ಕ್ಷೇತ್ರದಿಂದ 10ರಿಂದ 15 ಸಾವಿರ ಜನರನ್ನು ಕರೆತರಬೇಕು. ಕಾರ್ಯಕರ್ತರ ನಡಿಗೆ ದೇಶಕ್ಕೆ ಕೊಡುಗೆ ನೀಡಬೇಕು' ಎಂದರು.

ಪ್ರಸ್ತುತ ಬೆಲೆ ಏರಿಕೆ ಗಗನಕ್ಕೇರಿದೆ. ಆದಾಯ ಪಾತಾಳಕ್ಕೆ ಇಳಿದಿದೆ. ಕರ್ನಾಟಕ ಭ್ರಷ್ಟಚಾರದ ರಾಜಧಾನಿಯಾಗಿದೆ. ರೈತರ ಬದುಕಿಗೆ ಭದ್ರತೆ ಇಲ್ಲವಾಗಿದೆ ಎಂದು ನುಡಿದರು.

ರಾಹುಲ್ ಗಾಂಧಿ ಜೈಲಿಗೆ ಹೋಗಲು ಸಿದ್ಧರಿದ್ದಾರೆ. ಬಿಜೆಪಿಯ ಕಿರುಕುಳಕ್ಕೆ ಅವರು ಹೆದರುವುದಿಲ್ಲ. ಪಿಎಂ ಸ್ಥಾನ ತ್ಯಾಗ ಮಾಡಿದ್ದಾರೆ. ಮುತ್ತಾತ ತಮ್ಮ ಆಸ್ತಿಯನ್ನು ಬರೆದುಕೊಟ್ಟಿದ್ದಾರೆ. ತಾತಾ ಜೈಲಿನಲ್ಲಿದ್ದರು. ತಾಯಿ ಗುಂಡೇಟಿಗೆ ಬಲಿಯಾದರು. ಪ್ರಧಾನಿ ಸ್ಥಾನ ತ್ಯಾಗ ಮಾಡಿದರು. ಅವರು ಯಾವುದಕ್ಕೂ ಹೆದರುವುದಿಲ್ಲ ಎಂದು ಹೇಳಿದರು.

ಎಐಸಿಸಿ ಉಸ್ತುವಾರಿ ಕಾರ್ಯದರ್ಶಿ ಜಾನ್ ರೋಸಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಲ್ಲಾಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್, ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ, ಡಾ.ಎಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್, ತನ್ವೀರ್ ಸೇಠ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಎಚ್.ಪಿ.ಮಂಜುನಾಥ್, ಅನಿಲ್ ಚಿಕ್ಕಮಾದು, ಎಂಎಲ್‍ಸಿ ಡಾ.ಡಿ.ತಿಮ್ಮಯ್ಯ, ಮಾಜಿ ಸಂಸದ ಕಾಗಲವಾಡಿ ಶಿವಣ್ಣ, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಕಳಲೆ ಕೇಶವಮೂರ್ತಿ, ಆರ್.ಧರ್ಮಸೇನ, ಮುಖಂಡರಾದ ರವಿಶಂಕರ್, ಚಂದ್ರಮೌಳಿ  ಕೆ.ಮರೀಗೌಡ, ಎಂ.ಲಕ್ಷ್ಮಣ್, ಮಂಜುಳಾ ಮಾಸನ, ಬಿ.ಎಂ.ರಾಮು ಮುಂತಾದವರು ಉಪಸ್ಥಿತರಿದ್ದರು.
:

'ಭಾರತ್ ಜೋಡೋಗೆ ತಮಿಳುನಾಡು ಮತ್ತು ಕೇರಳದಲ್ಲಿ ಅಭೂತಪೂರ್ವ ಬೆಂಬಲ ದೊರಕಿದೆ. ಬಹುತ್ವವನ್ನು ರಕ್ಷಿಸಲು, ಬೆಲೆ ಏರಿಕೆ, ತೈಲಬೆಲೆ ಏರಿಕೆ ವಿರುದ್ಧ ರಾಹುಲ್ ಗಾಂಧಿ ಪಾದಯಾತ್ರೆ ನಡೆಸುತ್ತಿದ್ದಾರೆ. ಕರ್ನಾಟಕದಲ್ಲಿ 21 ದಿನ ಪಾದಯಾತ್ರೆ ನಡೆಯಲಿದೆ'.

-ಜಾನ್ ರೋಸಿ,  ಉಸ್ತುವಾರಿ ಕಾರ್ಯದರ್ಶಿ, ಎಐಸಿಸಿ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News