ಕೊರಗ ಜನಾಂಗದ ಸಂಪೂರ್ಣ ಶ್ರೇಯೋಭಿವೃದ್ಧಿಗೆ ಅಧ್ಯಯನ ವರದಿ ನೀಡಲು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಸೂಚನೆ
ಮಂಗಳೂರು, ಸೆ.19: ಜಿಲ್ಲೆಯಲ್ಲಿರುವ ಕೊರಗ ಜನಾಂಗದ ಸಂಪೂರ್ಣ ಶ್ರೇಯೋಭಿವೃದ್ಧಿಗೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಿವಿಧ ಆಯಾಮಗಳಲ್ಲಿ ಆಳವಾದ ಅಧ್ಯಯನ ನಡೆಸಿ ವರದಿ ನೀಡುವಂತೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಕೊರಗ ಜನಾಂಗದ ಶ್ರೇಯೋಭಿವೃದ್ಧಿಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ದ.ಕ.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೊರಗ ಸಮುದಾಯದ ವಿದ್ಯಾರ್ಥಿಗಳಲ್ಲಿ ಕೆಲವರು ಶಿಕ್ಷಣವನ್ನು ಪೂರ್ಣಗೊಳಿಸದಿರುವುದು, ಮಹಿಳೆ ಮತ್ತು ಮಕ್ಕಳಲ್ಲಿನ ಅಪೌಷ್ಟಿಕತೆ ಹಾಗೂ ರಕ್ತಹೀನತೆಯ ಬಗ್ಗೆ ಆಳವಾದ ಅಧ್ಯಯನ ಮಾಡಬೇಕು. ಅದಕ್ಕೆ ಪೂರಕವಾದ ಪ್ರಶ್ನೋತ್ತರಗಳನ್ನು ಸಿದ್ಧಪಡಿಸಿಕೊಂಡು ಪ್ರತಿ ಮನೆಗೂ ತೆರಳಿ ಮಾಹಿತಿ ಸಂಗ್ರಹಿಸಬೇಕು ಎಂದು ಸೂಚಿಸಿದರು.
ಶಾಲೆಯಿಂದ ಮಕ್ಕಳು ಹೊರಗುಳಿದಿದ್ದರೆ ಯಾವ ಕಾರಣಕ್ಕಾಗಿ ಹೊರಗುಳಿದಿದ್ದಾರೆ? ದುಶ್ಚಟಗಳಿಗೆ ಒಳಗಾಗಿದ್ದರೆ ಅವುಗಳಿಗೆ ಕಾರಣ ಹುಡುಕುವುದರ ಸಹಿತ ಸಂಪೂರ್ಣ ವಿವರಗಳನ್ನೊಂಡ ಮಾಹಿತಿ ಸಂಗ್ರಹಿಸಬೇಕು. ಈ ಕಾರ್ಯಕ್ಕಾಗಿ ಜಿಲ್ಲಾ ಖನಿಜ ನಿಧಿಯಿಂದ 25 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಲಾಗುವುದು. ಜಿಲ್ಲೆಯಲ್ಲಿರುವ ಸಂಪೂರ್ಣ ಕೊರಗ ಕುಟುಂಬಗಳ ಶೈಕ್ಷಣಿಕ, ಆರೋಗ್ಯ, ಅವರ ಅನುವಂಶಿಕತೆಯನ್ನು ಸಂಪೂರ್ಣ ಅಧ್ಯಯನ ಮಾಡಿ ವರದಿ ನೀಡುವಂತೆ ಡಿಸಿ ತಿಳಿಸಿದರು.
ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಲ್ಲದೆ ಜಿಲ್ಲೆಯ 9 ವೈದ್ಯಕೀಯ ಕಾಲೇಜುಗಳ ವಿಭಾಗದ ಮುಖ್ಯಸ್ಥರು ಅಥವಾ ಅವರಿಂದ ನಿಯೋಜಿಸಲ್ಪಟ್ಟ ಅಧಿಕಾರಿಗಳು ಮತ್ತಿತರ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗುವುದು, ಈ ಸಮಿತಿಯು ಕೂಲಂಕಷವಾಗಿ ಅಧ್ಯಯನ ಮಾಡಬೇಕು. ಇದಕ್ಕೆ ಪೂರಕವಾಗಿ ಮೊಬೈಲ್ ಆ್ಯಪ್ ಹಾಗೂ ಕಂಪ್ಯೂಟರ್ ಸಾಪ್ಟ್ವೇರ್ ಅಭಿವೃದ್ಧಿಪಡಿಸಿ ನೀಡಲಾಗುವುದು. ಇದರಲ್ಲಿ ಕೊರಗ ಸಮುದಾಯದ ಮಾಹಿತಿಯನ್ನು ಕಾಲಕಾಲಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.
ದ.ಕ.ಜಿಪಂ ಸಿಇಒ ಡಾ.ಕುಮಾರ್, ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್, ದ.ಕ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಶ್ಮಿ, ತಜ್ಞ ವೈದ್ಯರಾದ ಡಾ. ವಿಜಯ್ ಕುಮಾರ್, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ. ಕಿಶೋರ್ ಕುಮಾರ್, ದ.ಕ. ಜಿಲ್ಲಾ ಕೊರಗ ಸಂಘದ ಅಧ್ಯಕ್ಷ ಎಂ. ಸುಂದರ್ ಮತ್ತಿತರರು ಉಪಸ್ಥಿತರಿದ್ದರು.