ಕೊರಗರ ವೈದ್ಯಕೀಯ ವೆಚ್ಚ ಮರುಪಾವತಿಸದ ಸರಕಾರಿ ಆದೇಶ ವಾಪಾಸ್

Update: 2022-09-21 07:09 GMT

ಉಡುಪಿ, ಸೆ.21: ಕೊರಗ ಸಮುದಾಯದವರು ತೀವ್ರ ತರಹದ ಖಾಯಿಲೆ ಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು 2023ನೇ ಸಾಲಿನಿಂದ ನಿಗದಿಪಡಿಸಿದ ಅನುದಾನದಲ್ಲಿ ವೈದ್ಯಕೀಯ ವೆಚ್ಚ ಮರುಪಾವತಿಗೆ ಒಂದು ಬಾರಿ ಮಾತ್ರ ಷರತ್ತಿಗೊಳಪಟ್ಟು ಮಂಜೂರಾತಿ ನೀಡಿ ಹೊರಡಿಸಿದ ಆದೇಶವನ್ನು ಸರಕಾರ ಹಿಂಪಡೆದಿದೆ.

ಇದರಿಂದಾಗಿ ಈ ಸಮು ದಾಯದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಈ ಹಿಂದಿನಂತೆಯೇ ಅವರ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡಬಹುದಾಗಿದೆ.

ಆರ್ಥಿಕವಾಗಿ ತೀರಾ ಹಿಂದುಳಿದ ಪರಿಶಿಷ್ಟ ಪಂಗಡ, ಆದಿವಾಸಿ ಬುಡಕಟ್ಟು ಸಮುದಾಯ, ಕೊರಗ ಜನಾಂಗದವರು ತೀವ್ರ ತರಹದ ಖಾಯಿಲೆಗಳಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಲ್ಲಿ ಅವರ ವೈದ್ಯಕೀಯ ವೆಚ್ಚವನ್ನು ಈ ಹಿಂದಿನಂತೆಯೇ ಸರ್ಕಾರದ ವತಿಯಿಂದ ಮರುಪಾವತಿಸುವಂತೆ ಕರಾವಳಿಯ ಮೂರು ಜಿಲ್ಲೆಗಳ ಶಾಸಕರ ನಿಯೋಗ ಇತ್ತೀಚೆಗೆ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.

ಬಳಿಕ ಸದನದಲ್ಲಿ ಈ ವಿಷಯವನ್ನು ಬಿಜೆಪಿ  ಶಾಸಕ ರಘುಪತಿ ಭಟ್ ಹಾಗೂ ವಿಧಾನ ಸಭೆ ವಿಪಕ್ಷ ಉಪ ನಾಯಕ ಯು.ಟಿ ಖಾದರ್ ಪ್ರಸ್ತಾಪಿಸಿ ವೈದ್ಯಕೀಯ ವೆಚ್ಚವನ್ನು ಮರುಪಾವತಿ ಮಾಡುವಂತೆ ಮುಖ್ಯಮಂತ್ರಿಯವರನ್ನು ಒತ್ತಾಯಿಸಿದ್ದರು.

ಈ ಸಮುದಾಯಗಳ ಸಂಕಷ್ಟಗಳಿಗೆ ನೆರವಾಗುವ ನಿಟ್ಟಿನಲ್ಲಿ ಸೂಕ್ತವಾಗಿ ತಕ್ಷಣದಲ್ಲಿ ಸ್ಪಂದಿಸಿ ಆದೇಶ ಹೊರಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಾರಿಗೆ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಶ್ರೀರಾಮುಲು ಅವರಿಗೆ ಶಾಸಕ ಕೆ.ರಘುಪತಿ ಭಟ್ ಅಭಿನಂದನೆ ಸಲ್ಲಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News