‘ದಾಖಲೆ' ತಿದ್ದಿದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್: ಸಚಿವ ಗೋವಿಂದ ಕಾರಜೋಳ

Update: 2022-09-21 13:31 GMT

ಬೆಂಗಳೂರು, ಸೆ. 21: ‘ಕಂದಾಯ ಇಲಾಖೆ ಕಾಗದ ಪತ್ರಗಳಲ್ಲಿ ಹೆಸರನ್ನು ಬದಲಾವಣೆ ಮಾಡಿದವರು ಮತ್ತು ಕೊಟ್ಟವರು ಅಪರಾಧಿಗಳಾಗುತ್ತಾರೆ. ಹೀಗಾಗಿ ಇಬ್ಬರ ಮೇಲೆಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅಧಿಕಾರಿಗಳನ್ನು ಅಮಾನತು ಮಾಡಿ, ಅವರ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುತ್ತೇವೆ' ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.

ಬುಧವಾರ ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಅವರು, ‘ಯಾದಗಿರಿ ಜಿಲ್ಲೆ, ಕೊಡೆಕಲ್ ಗ್ರಾಮದಲ್ಲಿ ಸರ್ವೇ ನಂ.72ರಲ್ಲಿ 15.10 ಎಕರೆ ಜಮೀನನ್ನು ಕೃಷ್ಣಭಾಗ್ಯ ಜಲ ನಿಗಮ ಯೋಜನೆಗೆ ತೆಗೆದುಕೊಂಡು ಪರಿಹಾರ ನೀಡಲಾಗಿದೆ. ಆದರೆ, ಅಲ್ಲಿನ ತಹಶೀಲ್ದಾರ್ ಹಾಗೂ ಸಿಬ್ಬಂದಿ ಸೇರಿ ಭ್ರಷ್ಟಾಚಾರ ಉದ್ದೇಶದಿಂದ ಖಾಸಗಿ ವ್ಯಕ್ತಿ ಬಸಮ್ಮ ಕೋಂ ಚನ್ನಮಲ್ಲಪ್ಪ ಅದ್ನೂರಾ ಎಂಬ ಹೆಸರಿನಲ್ಲಿ ಪಹಣಿ ಬದಲಾಯಿಸಿ, ಹೆಸರು ಬದಲಾವಣೆ ಮಾಡಿದ್ದಾರೆ' ಎಂದು ಗೊತ್ತಾಗಿದೆ.

‘ಈ ವಿಚಾರ ನನ್ನ ಗಮನಕ್ಕೆ ಈಗ ಬಂದಿದೆ. ಭೂಸ್ವಾಧೀನ ಕಂದಾಯ ಇಲಾಖೆ ಅಧಿಕಾರಿಗಳು ಮಾಡಬೇಕು. ಹಾಗೇನಾದರೂ ಆಗಿದ್ದರೆ ಕಂದಾಯ ಇಲಾಖೆಗೆ ಸಂಬಂಧಿಸಿದ ತಹಶೀಲ್ದಾರ್‍ರೇ ಆಗಿರಬಹುದು. ಕೆಳಗಿನ ನೌಕರರೇ ಆಗಿರಬಹುದು. ಖಂಡಿತವಾಗಿಯೂ ಕ್ರಮ ತೆಗೆದುಕೊಳ್ಳುತ್ತೇವೆ. ಅವರನ್ನ ಅಮಾನತ್ತು ಮಾಡಲು ಸೂಚನೆ ನೀಡುತ್ತೇವೆ. ಜತೆಗೆ ಪರಿಹಾರದ ಹಣವನ್ನ ವಸೂಲಿ ಮಾಡಲು ಜಿಲ್ಲಾಧಿಕಾರಿಗಳಿಗೆ ಹೇಳುತ್ತೇನೆ' ಎಂದು ಅವರು ಭರವಸೆ ನೀಡಿದ್ದರು.

ಆರಂಭಕ್ಕೆ ವಿಷಯ ಪ್ರಸ್ತಾಪಿಸಿದ ಸಿದ್ದರಾಮಯ್ಯ, ‘ಕೃಷ್ಣಭಾಗ್ಯ ಜಲ ನಿಗಮ ಪರಿಹಾರ ತೆಗೆದುಕೊಂಡು ತಹಶೀಲ್ದಾರ್ ಬಸಮ್ಮ ಎಂಬವರ ಜೊತೆ ಸೇರಿ ಪಹಣಿ ಬದಲಾಯಿಸಿದ್ದಾರೆ. ಆ ರೀತಿ ಬದಲಾಯಿಸಲು ತಹಶೀಲ್ದಾರ್‍ಗೆ ಅಧಿಕಾರ ಇಲ್ಲ. ಸರಿಯಾದ ದಾಖಲೆ ಇದ್ದರೆ ಉಪ ಆಯುಕ್ತರು ಬದಲಾವಣೆ ಮಾಡಬೇಕು. ಈ ಕಾರಣಕ್ಕೆ ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಾಧಿಕಾರಿಯನ್ನು ಅಮಾನತು ಮಾಡಿದ್ದಾರೆ. ಆದರೆ, ತಹಶೀಲ್ದಾರ್‍ನನ್ನು ಅಮಾನತು ಮಾಡಿಲ್ಲ. ತಕ್ಷಣ ತಹಶೀಲ್ದಾರ್‍ನನ್ನು ಅಮಾನತು ಮಾಡಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು' ಎಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News